ಚಿಕ್ಕಮಗಳೂರು : ಜನಕಲ್ಯಾಣಕ್ಕೆ ಒತ್ತಾಸೆಯಾಗಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳೂ ಒಂದು ವಿಧದ ಅಭಿವೃದ್ಧಿಯಾಗಿದ್ದು, ಗ್ಯಾರಂಟಿಗಳ ನಡುವೆಯೂ ರಾಜ್ಯದ ಆರ್ಥಿಕ ಸ್ಥಿತಿ ಕೇಂದ್ರಕ್ಕಿಂತ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಿಲ್ಲೆಯ ಹಂದೂರು ಗ್ರಾಮದಿಂದ ನರಸಿಂಹರಾಜಪುರಕ್ಕೆ ಸಂಪರ್ಕಿಸುವ ಭದ್ರಾ ಹಿನ್ನೀರಿನಲ್ಲಿ ನಿರ್ಮಿಸಿರುವ ಸೇತುವೆ ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಶಂಕುಸ್ಥಾಪನೆ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಇಂದು 36 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸೇತುವೆಯೂ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಇಂದು ಚಾಲನೆ ನೀಡಲಾಗಿದೆ. ವಿರೋಧಪಕ್ಷದವರು ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ , ಗ್ಯಾರಂಟಿಗಳ ನಂತರ ಖಜಾನೆ ಖಾಲಿಯಾಗಿವೆ, ಅಭಿವೃದ್ಧಿ ಶೂನ್ಯ ಎಂದು ಟೀಕಿಸುತ್ತಾರೆ. ಆದರೆ ಗ್ಯಾರಂಟಿಗಳ ಜೊತೆಗೆ ಅಭಿವೃದ್ಧಿಯನ್ನೂ ನಮ್ಮ ಸರ್ಕಾರ ಸಾಧ್ಯವಾಗಿಸಿದೆ ಎಂದು ಹೇಳಿದ್ದಾರೆ.
ಗ್ಯಾರಂಟಿಗಳೂ ಒಂದು ವಿಧದ ಅಭಿವೃದ್ಧಿಯಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗಲು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ವಾತಂತ್ರ್ಯ ಅತ್ಯಗತ್ಯ ಎಂದಿದ್ದರು. ವಿರೋಧಪಕ್ಷದವರು ಅಂಬೇಡ್ಕರ್ ರವರ ಈ ಚಿಂತನೆಯ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು ಎಂದು ಕುಟುಕಿದ್ದಾರೆ.
ಕೇಂದ್ರದಿಂದ ರಾಜ್ಯದ ಜನರಿಗೆ ಅನ್ಯಾಯ..
ಮೈಸೂರು ಮಹಾರಾಜರಾಗಿದ್ದ ನರಸಿಂಹರಾಜ ಒಡೆಯರ್ ಕಾಲದಲ್ಲಿ ಎಡಳ್ಳಿಯಾಗಿದ್ದ ಈ ಪ್ರದೇಶಕ್ಕೆ ನರಸಿಂಹರಾಜಪುರ ಎಂದು ನಾಮಕರಣವಾಯಿತು. ಈ ಭಾಗದ ಅಭಿವೃದ್ಧಿಯ ಉದ್ದೇಶದಿಂದ ಇಲ್ಲಿನ ಶಾಸಕರ ಒತ್ತಾಸೆಯಿಂದ ಇಂದು ಸೇತುವೆ ನಿರ್ಮಾಣ ಸಾಧ್ಯವಾಗಿದೆ. ಉಳಿದಂತೆ ರಸ್ತೆ ಅಗಲೀಕರಣ, ಬ್ಯಾರೇಜ್ ಕಂ ಬ್ರಿಡ್ಜ್ ನಿರ್ಮಾಣ, ಪ್ರವಾಸೋದ್ಯಮವೂ ಸೇರಿದಂತೆ ಹಲವು ಬೇಡಿಕೆಗಳ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.
ಇದನ್ನೂ ಓದಿ : ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರವು 2023-24 ರ ಆಯವ್ಯಯದಲ್ಲಿ 5300 ಕೋಟಿಗಳನ್ನು ಘೋಷಿಸಿತು. ಆದರೆ ಇದುವರೆಗೆ ಈ ಅನುದಾನ ನೀಡಿಲ್ಲ. ಈ ಮೂಲಕ ರಾಜ್ಯದ ಜನರಿಗೆ ಕೇಂದ್ರ ದ್ರೋಹವೆಸಗಿದೆ. ಕಾಂಗ್ರೆಸ್ ಸರ್ಕಾರವೊಂದೇ ಕೊಟ್ಟ ಮಾತಿನಂತೆ ನಡೆಯುವ ಸರ್ಕಾರವಾಗಿದೆ. ನಮ್ಮ ಸರ್ಕಾರದಿಂದ ಗ್ಯಾರಂಟಿಗಳಿಗೆ ಇದುವರೆಗೆ 1.30 ಲಕ್ಷ ಕೋಟಿಗಳನ್ನು ವೆಚ್ಚ ಮಾಡಲಾಗಿದೆ. ರಾಜ್ಯದ ಗ್ಯಾರಂಟಿಗಳನ್ನು ಟೀಕಿಸುವ ಬಿಜೆಪಿಯವರು ಇತರೆ ರಾಜ್ಯಗಳಲ್ಲಿ ಅವುಗಳನ್ನೇ ಅನುಸರಿಸುತ್ತಿದ್ದಾರೆ. ಕೇಂದ್ರಕ್ಕಿಂತ ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದ ಆರ್ಥಿಕತೆ ಬಗ್ಗೆ ಬಿಜೆಪಿ ಅಪಪ್ರಚಾರ..
ಕೇಂದ್ರದ ಜಿಡಿಪಿ ದರ 7.14 ರಷ್ಟಿದ್ದರೆ, ರಾಜ್ಯದ ಜಿಡಿಪಿ 8.1 ರಷ್ಟಿದೆ. ದೇಶದಲ್ಲಿ 53.11 ಲಕ್ಷ ಕೋಟಿಗಳಿದ್ದ ಸಾಲದ ಮೊತ್ತ, ಪ್ರಸ್ತುತ ಪ್ರಧಾನಿ ಮೋದಿಯವರ ಅಧಿಕಾರಾವಧಿಯಲ್ಲಿ 218 ಲಕ್ಷ ಕೋಟಿರೂ.ಗೆ ತಲುಪಿದೆ. ರಾಜ್ಯದ ಆರ್ಥಿಕ ಬೆಳವಣಿಗೆ ಕೇಂದ್ರಕ್ಕಿಂತ ಗಣನೀಯವಾಗಿ ಹೆಚ್ಚಿದೆ. ಕರ್ನಾಟಕದ ಆರ್ಥಿಕ ಸ್ಥಿತಿಯು ಸದೃಢವಾಗಿದ್ದು, ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳಿಗೆ ಪೂರಕವಾಗಿದೆ. ಆದರೆ ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆದೇವರಾಗಿದೆ ಎಂದು ಲೇವಡಿ ಮಾಡಿದ್ದಾರೆ.
ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರರವರು ರಾಜ್ಯದ ಆರ್ಥಿಕತೆ ವಸ್ತುಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಟೀಕಿಸಿದ್ದಾರೆ. ಅವರು ಬಜೆಟ್ ನ ಅಂಶಗಳ ಬಗ್ಗೆ ಮನನ ಮಾಡಿಕೊಳ್ಳದೇ, ಕೇವಲ ಪ್ರಚಾರಕ್ಕಾಗಿ ಹೇಳಿಕೆ ನೀಡುತ್ತಿದ್ದಾರೆ. 15ನೇ ಹಣಕಾಸಿನ ಆಯೋಗದಲ್ಲಿ ಶಿಫಾರಸ್ಸು ಮಾಡಿದ್ದ ಅನುದಾನವನ್ನು ಕೇಂದ್ರ ನೀಡದೇ, ರಾಜ್ಯದ ಜನರಿಗೆ ಅನ್ಯಾಯ ಮಾಡಲಾಗಿದೆ. ಬಿಜೆಪಿಯ ಪ್ರಧಾನಿ ಮೋದಿಯವರು ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಅವರ ಒಳ್ಳೆಯ ದಿನಗಳು ಬರಲೇ ಇಲ್ಲ. ಆದರೆ ನಮ್ಮ ಸರ್ಕಾರ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ, ನುಡಿದಂತೆ ನಡೆದಿದೆ. ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬಾರದು ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದಾರೆ.






