ಏಪ್ರಿಲ್ 18ರಂದು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗದೇ ಇರುವುದರಿಂದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ವಿಚಾರ ಇದೀಗ ರಾಜ್ಯದಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವಿನ ಆರೋಪ-ಪ್ರತ್ಯಾರೋಪಗಳಿಗೆ ವೇದಿಕೆಯಾಗುತ್ತಿದೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಪಕ್ಷದ ವಿರೋಧವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

2023ರಲ್ಲೇ ಈ ಮಸೂದೆ ಸಂಸತ್ತಿನಲ್ಲಿ ಅಂಗೀಕಾರಗೊಂಡಿದ್ದರೂ, ಇದುವರೆಗೆ ಅನುಷ್ಠಾನಕ್ಕೆ ತರದಿರುವುದಕ್ಕೆ ಕೇಂದ್ರ ಸರ್ಕಾರವೇ ಉತ್ತರಿಸಬೇಕು ಎಂದು ಪ್ರಶ್ನಿಸಿದರು.ಮಸೂದೆ ಸೋಲಿಗೆ ಕಾರಣವಾಗಿ ಮೂರು ವಿಭಿನ್ನ ವಿಧೇಯಕಗಳನ್ನು ಒಂದೇ ಜೊತೆ ಮಿಶ್ರಣ ಮಾಡಿರುವುದನ್ನು ಅವರು ಉಲ್ಲೇಖಿಸಿದರು. ಮಹಿಳಾ ಮೀಸಲಾತಿ ವಿಧೇಯಕವನ್ನು ಪ್ರತ್ಯೇಕವಾಗಿ ಮಂಡಿಸಿದ್ದರೆ ಅದು ಸುಲಭವಾಗಿ ಅಂಗೀಕಾರವಾಗುತ್ತಿತ್ತು ಎಂದು ಹೇಳಿದರು. ಬಿಜೆಪಿ ರಾಜಕೀಯ ಉದ್ದೇಶದಿಂದ ಕ್ಷೇತ್ರ ಮರುವಿಂಗಡಣೆ ಹಾಗೂ ಇತರ ಕಾನೂನು ತಿದ್ದುಪಡಿ ವಿಧೇಯಕಗಳ ಜೊತೆ ಮಿಕ್ಸ್ ಮಾಡಿದ್ದು ಸಮಸ್ಯೆಗೆ ಕಾರಣವಾಗಿದೆ ಎಂದು ಆರೋಪಿಸಿದರು.

ಇದೇ ವಿಚಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ಹಿರಿಯ ನಾಯಕ ಬಿ ಕೆ ಹರಿಪ್ರಸಾದ್, ಮಸೂದೆ ಸೋತಿಲ್ಲ, ಬಿಜೆಪಿಯ ತಂತ್ರಗಳಿಗೆ ಸೋಲಾಗಿದೆ ಎಂದು ವಾಗ್ದಾಳಿ ನಡೆಸಿದರು. 2023ರಲ್ಲಿ ಅಂಗೀಕಾರಗೊಂಡ ಮಸೂದೆಯನ್ನು ಇನ್ನೂ ಜಾರಿಗೆ ತರದಿರುವುದೇ ಬಿಜೆಪಿ ನಿಲುವಿನ ಸ್ಪಷ್ಟತೆ ಇಲ್ಲದಿರುವುದನ್ನು ತೋರಿಸುತ್ತದೆ ಎಂದು ಹೇಳಿದರು.ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಯಾಗಿಲ್ಲ, ಬದಲಾಗಿ 543 ಕ್ಷೇತ್ರಗಳಲ್ಲಿ ಮೀಸಲಾತಿ ಜಾರಿಗೊಳಿಸಿದರೆ ಸಂಪೂರ್ಣ ಬೆಂಬಲ ನೀಡುವುದಾಗಿ ಅವರು ಹೇಳಿದರು. ಬಿಜೆಪಿ ಮಹಿಳೆಯರ ವಿಚಾರದಲ್ಲಿ ಕೇವಲ ಮಾತಿನ ಮಟ್ಟದಲ್ಲೇ ನಿಂತಿದೆ ಎಂದು ಆರೋಪಿಸಿದರು.






