ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಎಲ್ಲ ಪ್ರಶ್ನೆಗಳಿಗೆ ಶೀಘ್ರದಲ್ಲೇ ಪಕ್ಷದ ಹೈಕಮಾಂಡ್ ಉತ್ತರ ನೀಡಲಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಯಾವುದೇ ಗೊಂದಲವಿಲ್ಲದೆ ಜನರಿಗೆ ನೀಡಿದ ಭರವಸೆಗಳಂತೆ ಕೆಲಸ ಮಾಡುತ್ತಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ತಾವು ದೆಹಲಿಗೆ ತೆರಳುವ ಯಾವುದೇ ಯೋಜನೆ ಇಲ್ಲ ಎಂದು ಕೂಡ ತಿಳಿಸಿದ್ದಾರೆ.

ದಲಿತ ಸಿಎಂ ಕುರಿತ ಕೂಗು ಬಗ್ಗೆ ಮಾತನಾಡಿದ ಪರಮೇಶ್ವರ್, ಅದು ಜನಾಭಿಪ್ರಾಯವಾಗಿದ್ದು, ಜನರು ತಮ್ಮ ಪ್ರೀತಿ ಮತ್ತು ವಿಶ್ವಾಸದಿಂದ ಈ ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದರು. ಪಕ್ಷದ ಹೈಕಮಾಂಡ್ ಎಲ್ಲ ಬೆಳವಣಿಗೆಗಳನ್ನು ಗಮನಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.

ಡಿಕೆ ಶಿವಕುಮಾರ್ ಅವರಿಗೆ ಜನ್ಮದಿನದ ಗಿಫ್ಟ್ ರೂಪದಲ್ಲಿ ಹುದ್ದೆ ಬದಲಾವಣೆ ಎಂಬ ಚರ್ಚೆಗೂ ಅವರು ಪ್ರತಿಕ್ರಿಯಿಸಿ, ಹೈಕಮಾಂಡ್ ಯಾವುದೇ ತೀರ್ಮಾನ ಕೈಗೊಂಡರೂ ನಾವು ಅದಕ್ಕೆ ಬದ್ಧರಾಗಿರುತ್ತೇವೆ. ಪ್ರತಿಯೊಬ್ಬ ಕಾಂಗ್ರೆಸ್ಸಿಗರೂ ಆ ನಿರ್ಧಾರವನ್ನು ಗೌರವಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.

ಪಕ್ಷದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಯಾವುದೇ ಗೊಂದಲ ಇಲ್ಲ. ಕೆಲವರು ವೈಯಕ್ತಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದರೂ, ಅದನ್ನು ಗೊಂದಲ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು. ನಾಲ್ಕು ಲಕ್ಷ ಕೋಟಿ ರೂ. ಬಜೆಟ್ ಯೋಜನೆಗಳು ಸುಸೂತ್ರವಾಗಿ ಜಾರಿಯಾಗುತ್ತಿವೆ ಎಂದೂ ಅವರು ತಿಳಿಸಿದರು.ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಹುದ್ದೆಯಲ್ಲಿ ಮುಂದುವರಿಯುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಲು ಪರಮೇಶ್ವರ್ ನಿರಾಕರಿಸಿದರು.





