ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಅಕ್ರಮ ಭ್ರೂಣ ಪತ್ತೆಗೆ ಸಂಬಂಧಿಸಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಪಟ್ಟಣದ ಡಯಾಗ್ನಸ್ಟಿಕ್ ಸೆಂಟರ್ಗಳಲ್ಲಿ ನಿಯಮ ಉಲ್ಲಂಘನೆ ಮಾಡಿ ಸ್ಕ್ಯಾನಿಂಗ್ ನಡೆಸಿದ ಆರೋಪದ ಮೇಲೆ ಮೂವರು ಖಾಸಗಿ ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವೈದ್ಯರಲ್ಲಿ ಚೇತನಾ ನರ್ಸಿಂಗ್ ಹೋಮ್ನ ವೈದ್ಯೆ ದಿವ್ಯಾ, ನಾವಿ ಡಯಾಗ್ನಸ್ಟಿಕ್ ಸೆಂಟರ್ನ ಡಾ. ಹರ್ಷಿತ್ ಹಾಗೂ ಕುಶಾಲ್ ಡಯಾಗ್ನಸ್ಟಿಕ್ ಸೆಂಟರ್ನ ಡಾ. ಪರೀಶ್ ಸೇರಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ವೈದ್ಯೆ ಪ್ರಿಯಾಂಕ ನಾಪತ್ತೆಯಾಗಿದ್ದು, ಅವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ, ಈ ವೈದ್ಯರು ಸೇರಿ ಅಪ್ರಾಪ್ತೆಯರಿಗೆ ಅಕ್ರಮವಾಗಿ ಸ್ಕ್ಯಾನಿಂಗ್ ಮಾಡಿಸಿರುವ ಆರೋಪ ಕೇಳಿಬಂದಿದೆ. ಲಿಂಗ ಪತ್ತೆ ನಿಷೇಧ ಕಾಯ್ದೆ (PCPNDT Act) ಉಲ್ಲಂಘನೆ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಈ ಪ್ರಕರಣವು ಜಿಲ್ಲೆಯಲ್ಲಿ ಆತಂಕ ಮೂಡಿಸಿದ್ದು, ಆರೋಗ್ಯ ಇಲಾಖೆಯೂ ತನಿಖೆಗೆ ಕೈಜೋಡಿಸಿದೆ. ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ವೈದ್ಯಕೀಯ ಕ್ಷೇತ್ರದ ಮೇಲೆ ಪ್ರಶ್ನಾರ್ಥಕ ಚಿಹ್ನೆ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಾಹಿತಿ ಹೊರಬರುವ ಸಾಧ್ಯತೆ ಇದೆ.






