ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಮತ್ತೊಮ್ಮೆ ಹಿಂಸಾಚಾರದ ಘಟನೆ ಬೆಳಕಿಗೆ ಬಂದಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ಹಿರಿಯ ಮುಖಂಡ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮದಲ್ಲಿ ಬುಧವಾರ ತಡಸಂಜೆ ಈ ಘಟನೆ ನಡೆದಿದ್ದು, ಚಂದ್ರನಾಥ್ ಅವರನ್ನು ಗುರಿಯಾಗಿಸಿಕೊಂಡು ದಾಳಿಕೋರರು ಸರಣಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮೂರು ಸುತ್ತು ಗುಂಡು ಹಾರಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಚಂದ್ರನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ದಾಳಿಯ ವೇಳೆ ಅಲ್ಲಿದ್ದ ಭದ್ರತಾ ಸಿಬ್ಬಂದಿಯೊಬ್ಬರೂ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆ ನಡೆದ ವೇಳೆ ಸುವೇಂದು ಅಧಿಕಾರಿ ತಮ್ಮ ನಿವಾಸದ ಸಮೀಪದಲ್ಲಿದ್ದರು ಎಂದು ವರದಿಯಾಗಿದ್ದು, ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

ನಂದಿಗ್ರಾಮ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿ ಗಮನಸೆಳೆದಿದ್ದ ಸುವೇಂದು ಅಧಿಕಾರಿ ಅವರಿಗೆ ಈ ಘಟನೆ ಆಘಾತ ಉಂಟುಮಾಡಿದೆ. ಚುನಾವಣಾ ನಂತರವೂ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹಿಂಸಾಚಾರ ಮುಂದುವರಿದಿರುವುದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.ಈ ಹತ್ಯೆ ರಾಜಕೀಯ ಪ್ರೇರಿತ ಕೃತ್ಯ ಎಂದು ಆರೋಪಿಸಿರುವ ಬಿಜೆಪಿ, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಘಟನಾ ಸ್ಥಳದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದ್ದು, ತನಿಖೆ ಮುಂದುವರಿದಿದೆ.






