ತಮಿಳುನಾಡಿನ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದ್ದು, ನಟ ಹಾಗೂ ಟಿವಿಕೆ ಪಕ್ಷದ ನಾಯಕ ವಿಜಯ್ ಭಾನುವಾರ ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಮಾಣವಚನ ಸಮಾರಂಭದ ಬಳಿಕ ದೇಶದ ವಿವಿಧ ರಾಜಕೀಯ ನಾಯಕರು ವಿಜಯ್ ಅವರಿಗೆ ಶುಭಾಶಯ ಕೋರಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ವಿಜಯ್ ಅವರನ್ನು ಅಭಿನಂದಿಸಿ, “ತಮಿಳುನಾಡಿನಲ್ಲಿ ಇತಿಹಾಸ ನಿರ್ಮಿಸಿದ್ದೀರಿ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಕೂಡ ದೂರವಾಣಿ ಮೂಲಕ ವಿಜಯ್ ಜೊತೆ ಮಾತನಾಡಿ ಶುಭಾಶಯ ತಿಳಿಸಿದ್ದಾರೆ. ತಮಿಳುನಾಡಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಇದಕ್ಕೂ ಮೊದಲು ಸಾಮಾಜಿಕ ಜಾಲತಾಣಗಳ ಮೂಲಕವೂ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದರು. ವಿಜಯ್ ಅವರ ಆಡಳಿತಾವಧಿ ಯಶಸ್ವಿಯಾಗಲಿ ಎಂದು ಹಾರೈಸಿದ ಅವರು, ಜನರ ಕಲ್ಯಾಣಕ್ಕಾಗಿ ಕೇಂದ್ರ ಮತ್ತು ತಮಿಳುನಾಡು ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಲಿವೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ವಿಜಯ್ ಸರ್ಕಾರ ಚುರುಕುಗೊಂಡಿದ್ದು, ನಾಳೆಯಿಂದ ಮೂರು ದಿನಗಳ ಕಾಲ ವಿಧಾನಸಭಾ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. ಸೋಮವಾರ ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದು, ಟಿವಿಕೆ ಪಕ್ಷದ ಶಾಸಕ ಕರುಪಯ್ಯ ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿದ್ದಾರೆ.ಅತಂತ್ರ ಫಲಿತಾಂಶದ ಬಳಿಕ ವಿಜಯ್ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿರುವ ಹಿನ್ನೆಲೆ, ಮಂಗಳವಾರ ಹಾಗೂ ಬುಧವಾರ ಸದನದಲ್ಲಿ ಬಹುಮತ ಸಾಬೀತುಪಡಿಸಲು ಸರ್ಕಾರ ಸಿದ್ಧತೆ ನಡೆಸಿದೆ.






