ಬೆಂಗಳೂರು:
ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ಮತ್ತು ರಾಜ್ಯ ಸರ್ಕಾರದ ವಿರುದ್ಧದ ಟೀಕೆಗಳ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ.ಪ್ರಧಾನಿ ಮೋದಿ ಅವರ ಭಾಷಣವು “ಸುಳ್ಳು ಮತ್ತು ದ್ವೇಷದಿಂದ ಕೂಡಿದೆ” ಎಂದು ಸಿದ್ದರಾಮಯ್ಯ ಟೀಕಿಸಿದ ಬೆನ್ನಲ್ಲೇ, ಪ್ರಲ್ಹಾದ್ ಜೋಶಿ ರಾಜ್ಯ ಸರ್ಕಾರದ ಆಡಳಿತ ವೈಫಲ್ಯಗಳನ್ನು ಉಲ್ಲೇಖಿಸಿ ತಿರುಗೇಟು ನೀಡಿದ್ದಾರೆ. ಜಾಹೀರಾತುಗಳ ಆವರಣದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಡಲು ಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಕಾಂಗ್ರೆಸ್ ಸರ್ಕಾರ ಹದಗೆಡಿಸಿದ್ದು, ‘ಗ್ಯಾರಂಟಿ ಆಧಾರಿತ ಸಾಲದ ಬಲೆ’ಗೆ ಕರ್ನಾಟಕವನ್ನು ತಳ್ಳಲಾಗಿದೆ ಎಂದು ಜೋಶಿ ಟೀಕಿಸಿದ್ದಾರೆ. ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬದಲು ಕಾಂಗ್ರೆಸ್ ನಾಯಕರು ಅಧಿಕಾರ ಹಂಚಿಕೆ ಮತ್ತು ಆಂತರಿಕ ಕಿತ್ತಾಟದಲ್ಲೇ ನಿರತರಾಗಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.ಬೆಂಗಳೂರು ನಗರದ ರಸ್ತೆಗಳು ಗುಂಡಿಗಳಿಂದ ಹದಗೆಟ್ಟಿದ್ದು, ಗುತ್ತಿಗೆದಾರರು ಬಾಕಿ ಬಿಲ್ ಪಾವತಿಗಾಗಿ ಪ್ರತಿಭಟನೆ ನಡೆಸುತ್ತಿರುವುದು ಆಡಳಿತ ಹಳಿ ತಪ್ಪಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಜೋಶಿ ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಾಲು, ವಿದ್ಯುತ್, ಇಂಧನ ಸೇರಿದಂತೆ ಸುಮಾರು 48 ಅಗತ್ಯ ವಸ್ತುಗಳು ಮತ್ತು ಸೇವೆಗಳ ಬೆಲೆ ಏರಿಕೆಯಾಗಿದೆ ಎಂದು ಆರೋಪಿಸಿದ ಅವರು, ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರ ಮೇಲೆ ಬೆಲೆ ಏರಿಕೆಯ ಹೊರೆ ಹಾಕಲಾಗಿದೆ ಎಂದು ಕಿಡಿಕಾರಿದರು.ಇದೇ ವೇಳೆ, ಯುಪಿಎ ಆಡಳಿತ ಅವಧಿಯಲ್ಲಿ ದೇಶದ ಆರ್ಥಿಕತೆ ಕುಸಿತ ಕಂಡಿತ್ತು. ಆದರೆ ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದು ಜೋಶಿ ಹೇಳಿದ್ದಾರೆ.
ಇತರರನ್ನು ಟೀಕಿಸುವ ಮೊದಲು ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದೊಳಗಿನ ಅಧಿಕಾರ ದಾಹ, ಆಂತರಿಕ ಭಿನ್ನಾಭಿಪ್ರಾಯಗಳು ಮತ್ತು ಆಡಳಿತ ವೈಫಲ್ಯಗಳಿಗೆ ಉತ್ತರ ನೀಡಬೇಕು ಎಂದು ಪ್ರಲ್ಹಾದ್ ಜೋಶಿ ಸವಾಲು ಹಾಕಿದರು.






