ಬೆಂಗಳೂರು:
ಶಾಲೆ ಮತ್ತು ಕಾಲೇಜುಗಳಲ್ಲಿ ಹಿಜಾಬ್, ಜನಿವಾರ, ಶಿವಧಾರ ಸೇರಿದಂತೆ ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳಿಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಅನುದಾನರಹಿತ ಖಾಸಗಿ ಶಾಲೆಗಳ ಮೇಲೆ ಯಾವುದೇ ರೀತಿಯ ವಸ್ತ್ರಸಂಹಿತೆಯನ್ನು ಸರ್ಕಾರ ಬಲವಂತವಾಗಿ ಹೇರಲು ಸಾಧ್ಯವಿಲ್ಲ ಎಂದು ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್) ಸ್ಪಷ್ಟಪಡಿಸಿದೆ.

ಈ ಕುರಿತು ಮಾತನಾಡಿದ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್, “ಸರ್ಕಾರ ಹೊರಡಿಸಿರುವ ವಸ್ತ್ರಸಂಹಿತೆ ಸಂಬಂಧಿತ ಆದೇಶವನ್ನು ಸರ್ಕಾರಿ ಶಾಲೆಗಳಲ್ಲಿ ಜಾರಿಗೆ ತರಬಹುದು. ಆದರೆ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಮೇಲೆ ಅದನ್ನು ಕಡ್ಡಾಯವಾಗಿ ಹೇರಲು ಸಂವಿಧಾನಾತ್ಮಕ ಅವಕಾಶವಿಲ್ಲ” ಎಂದು ಹೇಳಿದ್ದಾರೆ.ಖಾಸಗಿ ಶಾಲೆಗಳು ತಮ್ಮದೇ ಆದ ಆಡಳಿತ ನಿಯಮಾವಳಿ ಮತ್ತು ಶಿಸ್ತು ಸಂಹಿತೆಯನ್ನು ಹೊಂದಿರುವುದರಿಂದ, ಸಮವಸ್ತ್ರ ನಿಯಮಗಳ ಬಗ್ಗೆ ನಿರ್ಧಾರ ಕೈಗೊಳ್ಳುವ ಹಕ್ಕು ಶಾಲಾ ಆಡಳಿತ ಮಂಡಳಿಗಳಿಗೇ ಸೇರಿದೆ ಎಂದು ಅವರು ತಿಳಿಸಿದ್ದಾರೆ.

“ಪ್ರತಿ ಶಾಲೆಯೂ ತನ್ನದೇ ಆದ ಶೈಕ್ಷಣಿಕ ವಾತಾವರಣ, ಶಿಸ್ತು ಮತ್ತು ಸಂಸ್ಕೃತಿಯನ್ನು ಕಾಪಾಡಿಕೊಳ್ಳಲು ವಸ್ತ್ರಸಂಹಿತೆ ರೂಪಿಸುತ್ತದೆ. ದಾಖಲಾತಿ ವೇಳೆಯಲ್ಲಿಯೇ ಪೋಷಕರು ಈ ನಿಯಮಗಳಿಗೆ ಒಪ್ಪಿಗೆ ನೀಡಿರುತ್ತಾರೆ. ಹೀಗಾಗಿ ಸರ್ಕಾರ ಅಥವಾ ಮೂರನೇ ವ್ಯಕ್ತಿಗಳು ಮಧ್ಯಪ್ರವೇಶಿಸುವುದು ಸೂಕ್ತವಲ್ಲ” ಎಂದು ಅಭಿಪ್ರಾಯಪಟ್ಟರು.
ರಾಜ್ಯ ಸರ್ಕಾರ ಇತ್ತೀಚೆಗೆ ಶಾಲೆಗಳಲ್ಲಿ ಧಾರ್ಮಿಕ ಸಂಕೇತಗಳಿಗೆ ಅವಕಾಶ ನೀಡುವ ಕುರಿತು ಸ್ಪಷ್ಟನೆ ನೀಡಿದ ಬಳಿಕ ಈ ವಿಚಾರ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಕೆಲ ಶಿಕ್ಷಣ ತಜ್ಞರು ಮತ್ತು ಪೋಷಕರ ಸಂಘಟನೆಗಳು ಸರ್ಕಾರದ ನಿರ್ಧಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದರೆ, ಇನ್ನೊಂದೆಡೆ ಖಾಸಗಿ ಶಾಲಾ ಸಂಘಟನೆಗಳು ಇದರಿಂದ ಶಿಸ್ತು ಹಾಗೂ ಏಕರೂಪತೆಯ ಮೇಲೆ ಪರಿಣಾಮ ಬೀಳುವ ಆತಂಕ ವ್ಯಕ್ತಪಡಿಸಿವೆ.

ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ, ಸರ್ಕಾರ ಖಾಸಗಿ ಶಾಲೆಗಳ ಮೇಲೂ ಈ ನಿಯಮಗಳನ್ನು ಕಡ್ಡಾಯಗೊಳಿಸಲು ಮುಂದಾದರೆ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಎಚ್ಚರಿಸಿದೆ. “ಶಿಕ್ಷಣ ಸಂಸ್ಥೆಗಳ ಆಡಳಿತ ಸ್ವಾಯತ್ತತೆಗೆ ಧಕ್ಕೆ ತರಲು ಅವಕಾಶ ನೀಡುವುದಿಲ್ಲ. ಅಗತ್ಯವಿದ್ದರೆ ಕಾನೂನು ಹೋರಾಟಕ್ಕೂ ಸಿದ್ಧ” ಎಂದು ಒಕ್ಕೂಟ ತಿಳಿಸಿದೆ.ಈ ಬೆಳವಣಿಗೆ ರಾಜ್ಯದಲ್ಲಿ ಶಾಲಾ ವಸ್ತ್ರಸಂಹಿತೆ, ಧಾರ್ಮಿಕ ಸ್ವಾತಂತ್ರ್ಯ ಮತ್ತು ಶಿಕ್ಷಣ ಸಂಸ್ಥೆಗಳ ಸ್ವಾಯತ್ತತೆ ಕುರಿತ ಚರ್ಚೆಗೆ ಹೊಸ ತಿರುವು ನೀಡಿದೆ.






