ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ ನೀಡಿ ಸುಪ್ರೀಂ ಕೋರ್ಟ್ ಇಂದು ಬುಧವಾರ ಆದೇಶ ಹೊರಡಿಸಿದೆ.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜೊಯ್ಮಲ್ಯ ಬಾಗ್ಚಿ ಹಾಗೂ ವಿಪುಲ್ ಎಂ ಪಂಚೋಲಿ ಅವರಿದ್ದ ಪೀಠವು, ಕರ್ನಾಟಕ ಸರ್ಕಾರ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಆಲಿಸಿದ ಬಳಿಕ, ಜೂನ್ 30ರ ಹಿಂದಿನ ಗಡುವನ್ನು ಆಗಸ್ಟ್ 31, 2026ರವರೆಗೆ ವಿಸ್ತರಿಸಿದೆ.
ಆದರೆ, ಮತ್ತೊಮ್ಮೆ ಅವಧಿಯನ್ನು ಯಾವುದೇ ಕಾರಣಕ್ಕೂ ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಬಿಬಿಎಂಪಿ ಚುನಾವಣೆಗೆ ವಿಧಿಸಿದ್ದ ಅಂತಿಮ ಅವಧಿಯನ್ನು ವಿಸ್ತರಣೆ ಮಾಡಬೇಕು ಎಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ ಬಳಿಕ ಈ ತಾಕೀತು ಮಾಡಿದೆ.
ಇದನ್ನೂ ಓದಿ : ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?
ಇನ್ನೂ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ನಡೆಯುತ್ತಿದೆ. ಇದಕ್ಕಾಗಿ ಸರ್ಕಾರದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹೀಗಾಗಿ ಚುನಾವಣಾ ಪ್ರಕ್ರಿಯೆ ನಡೆಸುವುದಕ್ಕಾಗಿ ಸಿಬ್ಬಂದಿಯ ಕೊರತೆಯಾಗುತ್ತಿದೆ. ಆದ್ದರಿಂದ ಚುನಾವಣೆಗೆ ನಿಗದಿಪಡಿಸಿರುವ ದಿನಾಂಕವನ್ನು ಎರಡು-ಮೂರು ತಿಂಗಳುಗಳ ಕಾಲ ವಿಸ್ತರಿಸಬೇಕು ಎಂದು ಸಿಂಘ್ವಿ ಸುಪ್ರೀಂಕೋರ್ಟ್ಗೆ ಕೋರಿದ್ದರು.
ಸರ್ಕಾರದ ಪರ ವಕೀಲರ ವಾದಕ್ಕೆ, ರಾಜ್ಯ ಚುನಾವಣಾ ಆಯೋಗದ ಪರ ವಕೀಲರು ಸಹಮತ ವ್ಯಕ್ತಪಡಿಸಿದೆ. ಅಲ್ಲದೆ ಇದಕ್ಕೆ ಆಕ್ಷೇಪಿಸಿದ ಮೂಲ ಅರ್ಜಿದಾರರ ಪರ ವಕೀಲರು, ಹಲವು ವರ್ಷಗಳಿಂದ ಚುನಾವಣೆಯನ್ನು ಮುಂದೂಡಲಾಗುತ್ತಿದೆ. ಈ ಹಿಂದೆ ನಡೆದ ವಿಚಾರಣೆ ವೇಳೆ ಜೂನ್ ಅಂತ್ಯದ ವೇಳೆಗೆ ಚುನಾವಣೆ ಪೂರ್ಣಗೊಳಿಸಬೇಕು ಎಂದು ತಿಳಿಸಲಾಗಿತ್ತು. ಆದರೆ ಇದೀಗ ಮತ್ತೆ ಕಾಲಾವಕಾಶ ಕೋರುತ್ತಿದ್ದಾರೆ. ಇದಕ್ಕೆ ಅವಕಾಶ ನೀಡಬಾರದು ಎಂದು ಪೀಠಕ್ಕೆ ಮನವಿ ಮಾಡಿದ್ದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಪೀಠ, ಆಗಸ್ಟ್ 31ರ ಅಂತ್ಯದ ವೇಳೆಗೆ ಪೂರ್ಣಗೊಳಿಸಬೇಕು ಎಂದು ಗಡುವು ವಿಸ್ತರಿಸಿ, ವಿಚಾರಣೆಯನ್ನು ಮುಂದೂಡಿದೆ.






