ಕರ್ನಾಟಕ ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದ ಆಡಳಿತದ ಬಳಿಕ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮೊದಲ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಲು ದಾರಿ ಸುಗಮವಾಗಿದೆ.ಕಾಂಗ್ರೆಸ್ ಹೈಕಮಾಂಡ್ನ ಮಹತ್ವದ ತೀರ್ಮಾನದ ಬೆನ್ನಲ್ಲೇ ಸಿದ್ದರಾಮಯ್ಯ ತಮ್ಮ ಸ್ಥಾನ ತ್ಯಜಿಸಿದ್ದಾರೆ ಎನ್ನಲಾಗುತ್ತಿದೆ. ಇಂದು ಮಧ್ಯಾಹ್ನ ಲೋಕಭವನಕ್ಕೆ ತೆರಳಿದ ಸಿದ್ದರಾಮಯ್ಯ, ರಾಜ್ಯಪಾಲ ಅವರ ಅನುಪಸ್ಥಿತಿಯಲ್ಲಿ ಅವರ ಕಾರ್ಯದರ್ಶಿ ಪ್ರಭು ಶಂಕರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.ಕುಟುಂಬ ಸದಸ್ಯರ ಅನಾರೋಗ್ಯದ ಹಿನ್ನೆಲೆ ರಾಜ್ಯಪಾಲರು ತುರ್ತುವಾಗಿ ಮುಂಬೈಗೆ ತೆರಳಿದ್ದರಿಂದ, ಸಿಎಂ ರಾಜೀನಾಮೆ ಪ್ರಕ್ರಿಯೆ ಕಾರ್ಯದರ್ಶಿ ಮೂಲಕ ನಡೆದಿದೆ. ಬುಧವಾರ ತಡರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜ್ಯಪಾಲರು ಮುಂಬೈಗೆ ಪ್ರಯಾಣ ಬೆಳೆಸಿದ್ದರು.
ಸಾಂವಿಧಾನಿಕ ನಿಯಮಗಳ ಪ್ರಕಾರ, ರಾಜ್ಯಪಾಲರು ರಾಜ್ಯದಲ್ಲಿಲ್ಲದಿದ್ದರೂ ಮುಖ್ಯಮಂತ್ರಿ ರಾಜೀನಾಮೆ ಸಲ್ಲಿಸಲು ಅವಕಾಶವಿದೆ. ಸಿದ್ದರಾಮಯ್ಯ ಸಲ್ಲಿಸಿದ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿ ಸ್ವೀಕರಿಸಿದ್ದು, ರಾಜ್ಯಪಾಲರು ವಾಪಸ್ ಬಂದ ಬಳಿಕ ಅವರ ವಿವೇಚನೆಗೆ ಕಳುಹಿಸಲಾಗುತ್ತದೆ.
ಆದರೆ ಕೇವಲ ಪತ್ರ ಸಲ್ಲಿಕೆಯಿಂದಲೇ ರಾಜೀನಾಮೆ ಅಂತಿಮವಾಗುವುದಿಲ್ಲ. ಸಂವಿಧಾನದ ಪ್ರಕಾರ ರಾಜ್ಯಪಾಲರು ಮುಖ್ಯಮಂತ್ರಿಯನ್ನು ಮುಖಾಮುಖಿಯಾಗಿ ಭೇಟಿ ಮಾಡಿ ಚರ್ಚಿಸಿದ ಬಳಿಕವೇ ರಾಜೀನಾಮೆಗೆ ಅಧಿಕೃತ ಅಂಗೀಕಾರ ಸಿಗುತ್ತದೆ.

ರಾಜೀನಾಮೆಗೂ ಮುನ್ನ ‘ಕಾವೇರಿ’ ನಿವಾಸದಲ್ಲಿ ನಡೆದ ಮಹತ್ವದ ಬ್ರೇಕ್ಫಾಸ್ಟ್ ಸಭೆಯಲ್ಲಿ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರ ಎದುರು ಭಾವುಕರಾಗಿ ಮಾತನಾಡಿದರು. “ನಾನು ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಮುಂದಿನ ಸಿಎಂ ಆಯ್ಕೆ ಕುರಿತು ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ” ಎಂದು ಹೇಳಿದ್ದಾರೆ ಎನ್ನಲಾಗಿದೆ.
ಸಭೆಯಲ್ಲಿ ಕಳೆದ ಮೂರು ವರ್ಷಗಳ ಆಡಳಿತ ಅವಧಿಯಲ್ಲಿ ಸರ್ಕಾರಕ್ಕೆ ಬೆಂಬಲವಾಗಿ ನಿಂತ ಎಲ್ಲಾ ಸಚಿವರು ಮತ್ತು ಶಾಸಕರಿಗೆ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದರು. ಕೆಲ ಸಚಿವರು ಭಾವುಕರಾದ ದೃಶ್ಯಗಳು ಕೂಡ ಕಂಡುಬಂದಿವೆ ಎನ್ನಲಾಗುತ್ತಿದೆ.
ಸಭೆಯ ವೇಳೆ ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಬಳಿಕ ಇಬ್ಬರು ನಾಯಕರು ಪರಸ್ಪರ ಆಲಿಂಗಿಸಿಕೊಂಡ ದೃಶ್ಯಗಳು ಕಾಂಗ್ರೆಸ್ ಪಾಳಯದಲ್ಲಿ ಭಾರೀ ಚರ್ಚೆಗೆ ಕಾರಣವಾದವು. ಇದರಿಂದ ಇಬ್ಬರು ನಾಯಕರ ಮಧ್ಯೆ ಯಾವುದೇ ವೈಮನಸ್ಸಿಲ್ಲ, ಸುಗಮ ಅಧಿಕಾರ ಹಸ್ತಾಂತರ ನಡೆಯುತ್ತಿದೆ ಎಂಬ ಸಂದೇಶವನ್ನು ಕಾಂಗ್ರೆಸ್ ನೀಡಲು ಯತ್ನಿಸಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಸಿದ್ದರಾಮಯ್ಯ ರಾಜೀನಾಮೆಯ ಬಳಿಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗುತ್ತಿದ್ದು, ಅಲ್ಲಿ ಡಿಕೆ ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಬಳಿಕ ರಾಜ್ಯಪಾಲರ ಅಧಿಕೃತ ಅನುಮತಿ ದೊರಕುತ್ತಿದ್ದಂತೆಯೇ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ನಿರೀಕ್ಷೆ ಇದೆ.ರಾಜಕೀಯ ಪಲ್ಲಟದ ಬೆನ್ನಲ್ಲೇ ಸಚಿವ ಸಂಪುಟ ಪುನರ್ರಚನೆ, ಹೊಸ ಸಚಿವರ ಆಯ್ಕೆ ಹಾಗೂ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳು ಕಾಂಗ್ರೆಸ್ ವಲಯದಲ್ಲಿ ತೀವ್ರಗೊಂಡಿವೆ.




