ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸುವೇಂದು ಅಧಿಕಾರಿ ಅವರು ಮಹತ್ವದ ಹಾಗೂ ವಿವಾದಕ್ಕೆ ಕಾರಣವಾದ ನಿರ್ಧಾರವೊಂದನ್ನು ಪ್ರಕಟಿಸಿದ್ದಾರೆ. ರಾಜ್ಯದ ಎಲ್ಲಾ ಶಾಲೆಗಳು ಮತ್ತು ಮದರಸಾಗಳಲ್ಲಿ ಬೆಳಗಿನ ಪ್ರಾರ್ಥನಾ ಸಭೆಯ ವೇಳೆ ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯನ್ನು ಸಂಪೂರ್ಣವಾಗಿ ಹಾಡುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿಯವರ ಈ ಕ್ರಮ ರಾಜ್ಯದಲ್ಲಿ ಹೊಸ ರಾಜಕೀಯ ಮತ್ತು ಸಾಮಾಜಿಕ ಚರ್ಚೆಗೆ ನಾಂದಿ ಹಾಡಿದೆ. ಸರ್ಕಾರದ ಆದೇಶಕ್ಕೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB) ತೀವ್ರ ವಿರೋಧ ವ್ಯಕ್ತಪಡಿಸಿದೆ. ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿರುವ ಯಾವುದೇ ಗೀತೆ ಅಥವಾ ಪಠ್ಯವನ್ನು ವಿದ್ಯಾರ್ಥಿಗಳ ಮೇಲೆ ಬಲವಂತವಾಗಿ ಹೇರಬಾರದು ಎಂದು ಮಂಡಳಿ ಅಭಿಪ್ರಾಯಪಟ್ಟಿದೆ.
ಈ ಕುರಿತು ಪ್ರತಿಕ್ರಿಯಿಸಿರುವ AIMPLB ವಕ್ತಾರ ಡಾ. ಎಸ್.ಕ್ಯೂ.ಆರ್. ಇಲ್ಯಾಸ್, “ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳನ್ನು ಗೌರವಿಸಬೇಕು. ಈ ಆದೇಶವನ್ನು ಸರ್ಕಾರ ಹಿಂಪಡೆಯಬೇಕು ಅಥವಾ ಮುಸ್ಲಿಂ ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡಬೇಕು” ಎಂದು ಆಗ್ರಹಿಸಿದ್ದಾರೆ.ಆದರೆ, ಮಂಡಳಿಯ ಬೇಡಿಕೆಯನ್ನು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. “ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬರೂ ‘ವಂದೇ ಮಾತರಂ’ ಮತ್ತು ‘ಜನ ಗಣ ಮನ’ ಗೀತೆಯನ್ನು ಗೌರವಿಸಬೇಕು. ಜೊತೆಗೆ ಜನವರಿ 26 ಮತ್ತು ಆಗಸ್ಟ್ 15ರಂತಹ ರಾಷ್ಟ್ರೀಯ ದಿನಗಳನ್ನು ಆಚರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ” ಎಂದು ಅವರು ಹೇಳಿದ್ದಾರೆ.
ಇದು ಭಾರತದ ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ಪರಂಪರೆಯ ಭಾಗವಾಗಿದ್ದು, ಎಲ್ಲರೂ ಅದನ್ನು ಗೌರವಿಸಬೇಕು ಎಂದು ಮುಖ್ಯಮಂತ್ರಿ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಕೇಂದ್ರ ಸಚಿವ ಕಿರಣ್ ರಿಜಿಜು ಕೂಡ ಈ ನಿರ್ಧಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದು, ರಾಷ್ಟ್ರೀಯ ಗೀತೆ ಮತ್ತು ದೇಶಭಕ್ತಿಯ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಹೇಳಿದ್ದಾರೆ.ಇದೇ ಸಂದರ್ಭದಲ್ಲಿ, ಕೇಂದ್ರ ಗೃಹ ಸಚಿವಾಲಯವು ಇತ್ತೀಚೆಗೆ ಸರ್ಕಾರಿ ಕಾರ್ಯಕ್ರಮಗಳು ಹಾಗೂ ಶಾಲೆಗಳಲ್ಲಿ ರಾಷ್ಟ್ರಗೀತೆಗೆ ಮುನ್ನ ‘ವಂದೇ ಮಾತರಂ’ ಗೀತೆಯ ಎಲ್ಲಾ ಆರು ಚರಣಗಳನ್ನು ಹಾಡುವಂತೆ ಸೂಚನೆ ನೀಡಿರುವುದು ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿದಂತೆ ಕೆಲವು ನಾಯಕರು ಈ ಕ್ರಮವನ್ನು ಪ್ರಶ್ನಿಸಿದ್ದು, ಕಾರ್ಯಕ್ರಮಗಳ ಆರಂಭ ಮತ್ತು ಅಂತ್ಯದಲ್ಲಿ ದೀರ್ಘ ಗೀತೆಯನ್ನು ಕಡ್ಡಾಯಗೊಳಿಸುವುದು ಪ್ರಾಯೋಗಿಕವಾಗಿ ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕರು, ಕಾಂಗ್ರೆಸ್ ಪಕ್ಷವು ರಾಷ್ಟ್ರಭಕ್ತಿಯ ವಿಷಯದಲ್ಲಿ ದ್ವಂದ್ವ ನಿಲುವು ತಾಳುತ್ತಿದೆ ಎಂದು ಟೀಕಿಸಿದ್ದಾರೆ. ಬಂಕಿಮಚಂದ್ರ ಚಟರ್ಜಿ ರಚಿಸಿದ ‘ವಂದೇ ಮಾತರಂ’ ಗೀತೆ ಸ್ವಾತಂತ್ರ್ಯ ಹೋರಾಟದ ಪ್ರಮುಖ ಸಂಕೇತವಾಗಿದ್ದು, ಇದೀಗ ಪಶ್ಚಿಮ ಬಂಗಾಳದ ಶಾಲೆಗಳು ಮತ್ತು ಮದರಸಾಗಳಲ್ಲಿ ಅದರ ಕಡ್ಡಾಯ ಜಾರಿ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದೆ.






