ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಾಹಿತಿ ಹಂಚಿಕೆ ವ್ಯವಸ್ಥೆಯನ್ನು ಮತ್ತಷ್ಟು ಶಿಸ್ತುಬದ್ಧಗೊಳಿಸುವ ಉದ್ದೇಶದಿಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ತನಿಖೆಯ ಗೌಪ್ಯತೆ, ಮಾಹಿತಿ ವಿಶ್ವಾಸಾರ್ಹತೆ ಹಾಗೂ ಸಾರ್ವಜನಿಕರಿಗೆ ಅಧಿಕೃತ ಮಾಹಿತಿಯನ್ನೇ ತಲುಪಿಸುವ ಗುರಿಯಿಂದ ಪೊಲೀಸ್ ಸಿಬ್ಬಂದಿ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳೊಂದಿಗೆ ಹೇಗೆ ವರ್ತಿಸಬೇಕು ಎಂಬ ಕುರಿತು ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ.ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಗೃಹ ಸಚಿವರು, ಇನ್ನು ಮುಂದೆ ರಾಜ್ಯ, ರೇಂಜ್, ಕಮಿಷನರೇಟ್, ಜಿಲ್ಲಾ ಹಾಗೂ ವಿಶೇಷ ಘಟಕಗಳಲ್ಲಿ ಅಧಿಕೃತವಾಗಿ ನೇಮಕಗೊಂಡಿರುವ ಅಧಿಕಾರಿಗಳಿಗೆ ಮಾತ್ರ ಮಾಧ್ಯಮಗಳಿಗೆ ಮಾಹಿತಿ ನೀಡುವ ಅಧಿಕಾರ ಇರಲಿದೆ ಎಂದು ತಿಳಿಸಿದ್ದಾರೆ.
ಹೊಸ ಮಾರ್ಗಸೂಚಿಗಳ ಪ್ರಕಾರ, ಯಾವುದೇ ಪೊಲೀಸ್ ಸಿಬ್ಬಂದಿ ಮೇಲಧಿಕಾರಿಗಳ ಲಿಖಿತ ಅನುಮತಿ ಇಲ್ಲದೆ ಮಾಧ್ಯಮಗಳಿಗೆ ಹೇಳಿಕೆ ನೀಡುವುದು, ಟಿವಿ ಚರ್ಚೆಗಳಲ್ಲಿ ಭಾಗವಹಿಸುವುದು ಅಥವಾ ತನಿಖೆಗೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸುವಂತಿಲ್ಲ. ಅಪರಾಧ ಸ್ಥಳದ ಛಾಯಾಚಿತ್ರಗಳು, ವಿಡಿಯೊಗಳು, ಆಂತರಿಕ ದಾಖಲೆಗಳು ಹಾಗೂ ಅಧಿಕೃತ ದಾಖಲೆಗಳನ್ನು ಹಂಚಿಕೊಳ್ಳುವುದಕ್ಕೂ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಲಾಗಿದೆ.ಈ ನಿಯಮಗಳು ಸಾಮಾಜಿಕ ಜಾಲತಾಣಗಳಿಗೂ ಅನ್ವಯವಾಗಲಿದ್ದು, ನಡೆಯುತ್ತಿರುವ ತನಿಖೆ, ಗುಪ್ತಚರ ಮಾಹಿತಿ, ಸೂಕ್ಷ್ಮ ಕಾರ್ಯಾಚರಣೆಗಳು ಹಾಗೂ ಇಲಾಖೆಯ ರಹಸ್ಯ ಮಾಹಿತಿಯನ್ನು ಅನುಮತಿ ಇಲ್ಲದೆ ಪೋಸ್ಟ್ ಮಾಡುವುದು ಅಥವಾ ಹಂಚಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಸ್ಪಷ್ಟ, ನಿಖರ ಹಾಗೂ ಹೊಣೆಗಾರಿಕೆಯುತ ಮಾಹಿತಿ ವಿನಿಮಯದ ಮೂಲಕ ಪೊಲೀಸ್ ಇಲಾಖೆಯ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಹೊಸ ಮಾರ್ಗಸೂಚಿಗಳ ಅನುಷ್ಠಾನದಿಂದ ಪೊಲೀಸ್ ಇಲಾಖೆಯಲ್ಲಿ ಮಾಹಿತಿ ನಿರ್ವಹಣೆಗೆ ಮತ್ತಷ್ಟು ಪಾರದರ್ಶಕತೆ ಮತ್ತು ಶಿಸ್ತು ಬರಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.






