ಬೆಂಗಳೂರು: ಕನ್ನಡ ಚಿತ್ರರಂಗದ ನಟ ದರ್ಶನ್ ಸೇರಿದಂತೆ ಹಲವರು ಆರೋಪಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಜೊತೆಗಿದ್ದವರಿಂದಲೇ ದರ್ಶನ್ಗೆ ಅತಿದೊಡ್ಡ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಷ್ ಈ ಕೊಲೆ ಪ್ರಕರಣದಲ್ಲಿ ತಮ್ಮನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ ಎಂದು ವರದಿಯಾಗಿದೆ. ಪ್ರಕರಣದ ಕುರಿತು ಸತ್ಯ ಹೇಳಲು ಸಿದ್ಧನಿದ್ದೇನೆ ಎಂದು ಅರ್ಜಿಯಲ್ಲಿ ತಿಳಿಸಿರುವ ಪ್ರದೋಷ್, ತನ್ನ ವಿರುದ್ಧ ಕ್ಷಮೆ ನೀಡುವಂತೆ ಮನವಿ ಮಾಡಿದ್ದಾನೆ. ಜೊತೆಗೆ, ದರ್ಶನ್ ಇರುವ ಜೈಲು ಕೊಠಡಿಯಿಂದ ಪ್ರತ್ಯೇಕವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಕೋರಿದ್ದಾನೆ ಎನ್ನಲಾಗಿದೆ.


ಈ ಅರ್ಜಿಯ ವಿಚಾರಣೆ ಇಂದು ನಡೆಯಲಿದ್ದು, ಆರೋಪಿ ಪ್ರದೋಷ್ನನ್ನು ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದೆ. ತನಿಖೆಯ ಪ್ರಕಾರ, ಘಟನೆ ನಡೆದ ವೇಳೆ ಪ್ರದೋಷ್ ಸ್ಥಳದಲ್ಲೇ ಇದ್ದನು ಎನ್ನಲಾಗಿದ್ದು, ಹಲ್ಲೆ ನಡೆದ ಬಳಿಕ ಶ* ಸಾಗಿಸುವ ಪ್ರಕ್ರಿಯೆಯಲ್ಲಿಯೂ ಆತ ಭಾಗಿಯಾಗಿದ್ದಾನೆ ಎಂಬ ಆರೋಪ ಆತನ ಮೇಲಿದೆ. ಹೀಗಾಗಿ ಪ್ರದೋಷ್ ಸಲ್ಲಿಸಿರುವ ಈ ಅರ್ಜಿ ಪ್ರಕರಣದ ಮುಂದಿನ ವಿಚಾರಣೆಯಲ್ಲಿ ಹೊಸ ತಿರುವು ನೀಡುವ ಸಾಧ್ಯತೆ ಇದೆ.







