ಬೆಂಗಳೂರು: ಸೆಪ್ಟೆಂಬರ್ 14ರಂದು ರಾಜ್ಯಾದ್ಯಂತ ಆಚರಿಸಲಾಗುವ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಪರಿಸರ ಸಂರಕ್ಷಣೆಗೆ ಒತ್ತು ನೀಡಿರುವ ರಾಜ್ಯ ಸರ್ಕಾರ, ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ಹಾಗೂ ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ, ಸಾಗಾಟ ಮತ್ತು ವಿಸರ್ಜನೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಇಲಾಖೆಯ ಕಾರ್ಯದರ್ಶಿಗೆ ಈ ಕುರಿತು ಲಿಖಿತ ನಿರ್ದೇಶನ ನೀಡಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ, ಬಣ್ಣರಹಿತ ಮಣ್ಣಿನ ಗೌರಿ-ಗಣೇಶ ಮೂರ್ತಿಗಳ ಪೂಜೆ ಹಾಗೂ ವಿಸರ್ಜನೆಗೆ ಮಾತ್ರ ಅವಕಾಶ ಕಲ್ಪಿಸುವಂತೆ ಸೂಚಿಸಿದ್ದಾರೆ.
ಹಬ್ಬದ ಸಂದರ್ಭದಲ್ಲಿ ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಜನಜಾಗೃತಿ ಮೂಡಿಸುವ ಜೊತೆಗೆ, ಪಿಒಪಿ ಮೂರ್ತಿಗಳ ತಯಾರಿಕೆ, ಸಂಗ್ರಹ, ಸಾಗಾಟ ಮತ್ತು ಮಾರಾಟವನ್ನು ತಡೆಯಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಕಾರ ಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಸಚಿವರು ತಮ್ಮ ಸೂಚನೆಯಲ್ಲಿ, ಪಿಒಪಿ ಮೂರ್ತಿಗಳ ತಯಾರಿಕೆಯಲ್ಲಿ ಬಳಸುವ ಕ್ಯಾಲ್ಸಿಯಂ ಸಲ್ಫೇಟ್, ಜಿಪ್ಸಮ್ ಹಾಗೂ ರಾಸಾಯನಿಕ ಬಣ್ಣಗಳಲ್ಲಿ ಪಾದರಸ, ಕ್ಯಾಡ್ಮಿಯಂ, ಸೀಸ ಸೇರಿದಂತೆ ಹಲವು ಅಪಾಯಕಾರಿ ಅಂಶಗಳಿದ್ದು, ಇವು ಜಲಮೂಲಗಳನ್ನು ಕಲುಷಿತಗೊಳಿಸಿ ಪರಿಸರ ಹಾಗೂ ಸಾರ್ವಜನಿಕ ಆರೋಗ್ಯಕ್ಕೆ ಹಾನಿ ಉಂಟುಮಾಡುತ್ತವೆ ಎಂದು ಉಲ್ಲೇಖಿಸಿದ್ದಾರೆ.ಕೆರೆ, ನದಿ, ಬಾವಿ ಸೇರಿದಂತೆ ಜಲಮೂಲಗಳಲ್ಲಿ ಪಿಒಪಿ ಮೂರ್ತಿಗಳನ್ನು ವಿಸರ್ಜಿಸುವುದರಿಂದ ಜಲಚರಗಳ ಜೀವಕ್ಕೆ ಅಪಾಯ ಉಂಟಾಗುವುದರ ಜೊತೆಗೆ ಕುಡಿಯುವ ನೀರಿನ ಗುಣಮಟ್ಟವೂ ಹದಗೆಡುತ್ತದೆ. ಈ ಹಿನ್ನೆಲೆಯಲ್ಲಿ ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ–1974ರ ಕಲಂ 33(ಎ) ಅನ್ವಯ ರಾಜ್ಯದ ಯಾವುದೇ ಜಲಮೂಲದಲ್ಲಿ ಪಿಒಪಿ ಮೂರ್ತಿಗಳ ವಿಸರ್ಜನೆ ನಿಷೇಧಿಸಲಾಗಿದೆ ಎಂದು ಅವರು ನೆನಪಿಸಿದ್ದಾರೆ.
ಈಗಾಗಲೇ 2023ರ ಸೆಪ್ಟೆಂಬರ್ 15ರಂದು ಪಿಒಪಿ ಮೂರ್ತಿಗಳ ತಯಾರಿಕೆ, ಮಾರಾಟ, ಸಾಗಾಟ ಹಾಗೂ ವಿಸರ್ಜನೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಹೈಕೋರ್ಟ್ ಕೂಡ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳು ಪರಿಸರ ಮತ್ತು ಜಲಮೂಲಗಳ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.






