ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಆರಂಭವಾಗಿ ಮೂರು ವರ್ಷಗಳು ಪೂರ್ಣಗೊಂಡಿದೆ. ರಾಜ್ಯದ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ನೀಡುವ ಈ ಯೋಜನೆಯು ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ನೆರವಾಗುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿದೆ.

ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದು ಇಂದು ಮೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ವಿಶೇಷವಾಗಿ ಸಂಭ್ರಮಾಚರಣೆ ನಡೆಸುತ್ತಿದೆ. ಇದರ ಅಂಗವಾಗಿ ಮಹಿಳೆಯರ ಹೆಮ್ಮೆಯ ಸಂಕೇತವೆಂದು ಗುರುತಿಸಲಾಗಿರುವ ಗುಲಾಬಿ ಬಣ್ಣದ ಬೆಳಕಿನಿಂದ ರಾಜ್ಯದ ಪ್ರಮುಖ ಐತಿಹಾಸಿಕ ಹಾಗೂ ಸರ್ಕಾರಿ ಕಟ್ಟಡಗಳನ್ನು ಅಲಂಕರಿಸಲಾಗುತ್ತಿದೆ.

ಈ ಸಂಭ್ರಮದ ಸವಿನೆನಪಿಗಾಗಿ ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ,ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನಲ್ಲಿರುವ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಬೆಳಗಾವಿ ಕಿತ್ತೂರು ಚೆನ್ನಮ್ಮ ವೃತ್ತಗಳು ಭಾನುವಾರ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಗುಲಾಬಿ ಬಣ್ಣದ ದೀಪಾಲಂಕಾರದಿಂದ ಕಂಗೊಳಿಸಲಿವೆ.

ರಾಜ್ಯ ಸರ್ಕಾರದ ಮಾಹಿತಿಯ ಪ್ರಕಾರ, ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 1.20 ಕೋಟಿಗೂ ಹೆಚ್ಚು ಮಹಿಳಾ ಫಲಾನುಭವಿಗಳ ಖಾತೆಗೆ ₹76,500 ಕೋಟಿಗೂ ಅಧಿಕ ಹಣವನ್ನು ಪಾವತಿಸಲಾಗಿದೆ. ಪ್ರತಿ ತಿಂಗಳು ₹2,000 ನೆರವು ನೀಡುವ ಮೂಲಕ ಮಹಿಳೆಯರು ತಮ್ಮ ಕುಟುಂಬದ ಆರ್ಥಿಕ ನಿರ್ವಹಣೆಯಲ್ಲಿ ಹೆಚ್ಚಿನ ಪಾತ್ರ ವಹಿಸಲು ಹಾಗೂ ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಯೋಜನೆ ನೆರವಾಗುತ್ತಿದೆ ಎಂದು ಸರ್ಕಾರ ಹೆಮ್ಮೆ ವ್ಯಕ್ತಪಡಿಸಿದೆ.

ಗೃಹಲಕ್ಷ್ಮಿ ಯೋಜನೆಯ ಪ್ರಮುಖ ಉದ್ದೇಶ ಮಹಿಳೆಯರ ಆರ್ಥಿಕ ಸಬಲೀಕರಣ. ಮನೆಯ ದೈನಂದಿನ ಅಗತ್ಯಗಳು, ಮಕ್ಕಳ ಶಿಕ್ಷಣ, ಆರೋಗ್ಯ, ಆಹಾರ ಸೇರಿದಂತೆ ಕುಟುಂಬದ ವಿವಿಧ ಖರ್ಚುಗಳಿಗೆ ಈ ಹಣವನ್ನು ಬಳಸಿಕೊಳ್ಳಲು ಮಹಿಳೆಯರಿಗೆ ನೆರವಾಗುತ್ತಿದೆ. ಮೂರು ವರ್ಷಗಳ ಅವಧಿಯಲ್ಲಿ ಕೋಟ್ಯಂತರ ಮಹಿಳೆಯರ ಖಾತೆಗೆ ನೇರವಾಗಿ ಹಣ ವರ್ಗಾವಣೆಯಾಗಿರುವುದು ಯೋಜನೆಯ ಪ್ರಮುಖ ಅಂಶವಾಗಿದೆ. ಈ ಮೂಲಕ ಮಹಿಳೆಯರ ಕೈಗೆ ನೇರವಾಗಿ ಆರ್ಥಿಕ ನೆರವು ತಲುಪಿಸುವ ಪ್ರಯತ್ನವನ್ನು ಸರ್ಕಾರ ಮಾಡಿದೆ.







