ರಾಯಚೂರು : ಕಾಂಗ್ರೆಸ್ ಸರ್ಕಾರ ಮುಳುಗುತ್ತಿರುವ ಹಡಗಿನಂತಾಗಿದೆ. ಶೀಘ್ರದಲ್ಲೇ ಕಾಂಗ್ರೆಸ್ ನಾಯಕರು ಈ ಮುಳುಗುತ್ತಿರುವ ಹಡಗಿನಿಂದ ಜಿಗಿಯುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಇಲ್ಲಿನ ಲಿಂಗಸುಗೂರಿನಲ್ಲಿ ನಡೆದ ಬಳ್ಳಾರಿ ಚಲೋ ಪಾದಯಾತ್ರೆಯ ಚಾಲನಾ ಸಮಾರಂಭದಲ್ಲಿ ಮಾತನಾಡಿ, . ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರದ ಕುದುರೆ ಏರಲು ದೆಹಲಿ ಮತ್ತು ಬೆಂಗಳೂರಿನ ನಡುವೆ ಸತತ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಅವರಿಗೆ ಸರ್ಕಾರ ನಡೆಸಲೂ ಆಗುತ್ತಿಲ್ಲ, ಅಧಿಕಾರದ ಕುದುರೆ ಏರಲೂ ಸಾಧ್ಯವಾಗುತ್ತಿಲ್ಲ ಎಂದು ಲೇವಡಿ ಮಾಡಿದ್ದಾರೆ.
ಕರ್ನಾಟಕದಲ್ಲಿ ಮತ್ತೆ ಅಭಿವೃದ್ಧಿಯ ಪರ್ವ ಆರಂಭವಾಗಲು ಹಾಗೂ ನವ ಕರ್ನಾಟಕ ನಿರ್ಮಾಣಕ್ಕಾಗಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕಿದೆ. ಬಿ.ಎಸ್. ಯಡಿಯೂರಪ್ಪನವರು ಹಾಗೂ ಪಕ್ಷದ ಹಿರಿಯರ ಆಶೀರ್ವಾದದೊಂದಿಗೆ ಈ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುತ್ತೇವೆ ಎಂದು ಅಬ್ಬರಿಸಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ತುಂಗಭದ್ರಾ ಎಡದಂಡೆ ಕಾಲುವೆ, ನಾರಾಯಣಪುರ ಹಾಗೂ ನಂದವಾಡಗಿ ಏತನೀರಾವರಿ ಯೋಜನೆಗಳಿಗೆ ಸಾವಿರಾರು ಕೋಟಿ ಅನುದಾನ ನೀಡಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳಿಂದ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ನಯಾಪೈಸೆಯನ್ನೂ ಬಿಡುಗಡೆ ಮಾಡದೆ ನಿರ್ಲಕ್ಷಿಸಿದೆ ಎಂದು ದೂರಿದ್ದಾರೆ.
ಇದನ್ನೂ ಓದಿ : ಪ್ರದೋಷ್ ಮಾಫಿ ಸಾಕ್ಷಿ ಪ್ರಶ್ನಿಸಿದ ನಟ ದರ್ಶನ್ : ರೇಣುಕಾ ಸ್ವಾಮಿ ಕೊ* ಕೇಸ್ನಲ್ಲಿ ಮಹತ್ವದ ಬದಲಾವಣೆ..?
ಬೆಂಗಳೂರಿನ ಭೂಮಾಲೀಕರಿಗೆ ಪರಿಹಾರ ನೀಡಲು ಹಣವಿದೆ, ಆದರೆ 15 ವರ್ಷಗಳಿಂದ ಪರಿಹಾರಕ್ಕಾಗಿ ಕಾಯುತ್ತಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಸಂತ್ರಸ್ತ ರೈತರಿಗೆ ಹಣವಿಲ್ಲವೇ? ತಕ್ಷಣ ಅನುದಾನ ಬಿಡುಗಡೆ ಮಾಡಿ ರೈತರಿಗೆ ನ್ಯಾಯ ಒದಗಿಸಬೇಕು. ಇಲ್ಲವಾದರೆ ಉತ್ತರ ಕರ್ನಾಟಕದಲ್ಲಿ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲಾಗುವುದು ಎಂದು ಬೊಮ್ಮಾಯಿ ಎಚ್ಚರಿಸಿದ್ದಾರೆ.
ವಾಲ್ಮೀಕಿ ಸ್ವಾಮೀಜಿ ಎಸ್ಟಿ ಮೀಸಲಾತಿಗಾಗಿ ಬೆಂಗಳೂರಿನಲ್ಲಿ 232 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದಾಗ, ಒಬ್ಬನೇ ಒಬ್ಬ ಕಾಂಗ್ರೆಸ್ ನಾಯಕರು ಬೆಂಬಲ ನೀಡಲಿಲ್ಲ. ಬಿ.ಎಸ್. ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ, ಎಲ್ಲಾ ಪಕ್ಷಗಳ ವಿಶ್ವಾಸ ಪಡೆದು ಕಾನೂನು ರೂಪಿಸಿ, ನಮ್ಮ ಸರ್ಕಾರದ ಅವಧಿಯಲ್ಲಿ ಎಸ್ಟಿ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹಾಗೂ ಎಸ್ಸಿ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಿದ್ದೆವು. ಆದರೆ ಕಾಂಗ್ರೆಸ್ ಸರ್ಕಾರ ಮತ್ತೆ ಎಸ್ಟಿ ಮೀಸಲಾತಿಯನ್ನು ಶೇ.3ಕ್ಕೆ ಇಳಿಸಿ ಪರಿಶಿಷ್ಟ ಪಂಗಡದ ಜನರಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ತಮ್ಮನ್ನು ‘ಅಹಿಂದ’ ಎಂದು ಕರೆದುಕೊಳ್ಳುತ್ತಾರೆ. ಆದರೆ ಅವರ ಸರ್ಕಾರವೇ ಎಸ್ಸಿ/ಎಸ್ಟಿ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ. ಈ ಅನ್ಯಾಯವನ್ನು ಸರಿಪಡಿಸುವವರೆಗೆ ನಮ್ಮ ಹೋರಾಟ ಮತ್ತು ಪಾದಯಾತ್ರೆ ಮುಂದುವರಿಯಲಿದೆ. ಜನರು ಕಾಂಗ್ರೆಸ್ ಅಧಿಕಾರಕ್ಕೆ ತಂದದ್ದು ಸ್ವಂತ ಆಸ್ತಿ ಬೆಳೆಸಿಕೊಳ್ಳಲಿಕ್ಕೊ, ರಿಯಲ್ ಎಸ್ಟೇಟ್ ಉದ್ಯಮ ಮಾಡಲಿಕ್ಕೊ ಅಥವಾ ಬಡವರ-ದೀನದಲಿತರ ಹಣವನ್ನು ಲೂಟಿ ಮಾಡಲಿಕ್ಕೊ?” ಎಸ್ಟಿ (ST) ಜನಾಂಗಕ್ಕೆ ಸೇರಿದ ಬಡವರ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಬರೋಬ್ಬರಿ 187 ಕೋಟಿ ರೂಪಾಯಿ ಹಣವನ್ನು ಈ ಸರ್ಕಾರ ಲೂಟಿ ಮಾಡಿದೆ ಎಂದು ಆರೋಪಿಸಿದ್ದಾರೆ.
”ದಲಿತರ ಹಾಗೂ ಪರಿಶಿಷ್ಟ ಪಂಗಡದ ಜನರ ಹಣವನ್ನು ಲೂಟಿ ಮಾಡಿ, ಅದನ್ನು ನಾವು ಪ್ರಶ್ನೆ ಮಾಡಿದರೆ ನಮಗೇ ‘ರಾಜಕೀಯ ಮಾಡುತ್ತಿದ್ದೀರಿ’, ‘ದಲಿತ ವಿರೋಧಿಗಳು’ ಎಂದು ಪಟ್ಟ ಕಟ್ಟುವುದು ಎಷ್ಟರ ಮಟ್ಟಿಗೆ ಸರಿ? ನಿಜವಾದ ದಲಿತ ವಿರೋಧಿ ಕೆಲಸ ಮಾಡಿದ್ದು ಈ ಸರ್ಕಾರ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.
ಲೂಟಿಯಾದ ಹಣ ಸಂಪೂರ್ಣವಾಗಿ ಹಿಂತಿರುಗಿ, ವಾಲ್ಮೀಕಿ ನಿಗಮದ ಮೂಲಕ ಎಸ್ಟಿ ಜನಾಂಗದ ಲಕ್ಷಾಂತರ ಫಲಾನುಭವಿಗಳಿಗೆ ತಲುಪಿ ನ್ಯಾಯ ಸಿಗುವವರೆಗೂ ಬಿಜೆಪಿ ಹೋರಾಟ ಮುಂದುವರಿಯಲಿದೆ ಎಂದು ಬಸವರಾಜ ಬೊಮ್ಜಾಯಿ ಗುಡುಗಿದ್ದಾರೆ.






