ಕಲಬುರಗಿ: ಕಲ್ಯಾಣ ಕರ್ನಾಟಕದ ಪ್ರಮುಖ ನಗರ ಕಲಬುರಗಿಯ ಹೈಕೋರ್ಟ್ ವೃತ್ತದಲ್ಲಿ ಯಾವುದೇ ಪೂರ್ವಾನುಮತಿ ಪಡೆಯದೆ ರಾತ್ರೋರಾತ್ರಿ ಸ್ಥಾಪಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 9 ಅಡಿ ಎತ್ತರದ ಪ್ರತಿಮೆಯನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸರು ಬೆಳಗಿನ ಜಾವವೇ ತೆರವುಗೊಳಿಸಿದ್ದಾರೆ.ಗುರುವಾರ ಮುಂಜಾನೆ ಹೈಕೋರ್ಟ್ ಕ್ರಾಸ್ ಬಳಿ ಸಿದ್ದರಾಮಯ್ಯ ಅವರ ಪ್ರತಿಮೆ ಕಾಣಿಸಿಕೊಂಡಿತ್ತು. ಸುಮಾರು ಏಳೆಂಟು ಮಂದಿ ಅಭಿಮಾನಿಗಳು ಯಾವುದೇ ಅಧಿಕೃತ ಅನುಮತಿ ಪಡೆಯದೆ ರಾತ್ರಿ ವೇಳೆ ಪ್ರತಿಮೆಯನ್ನು ಸ್ಥಾಪಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳು ಹರಿದಾಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಹೈಕೋರ್ಟ್ ವೃತ್ತಕ್ಕೆ ಈ ಹಿಂದೆ ಯಾವುದೇ ಅಧಿಕೃತ ಅನುಮತಿ ಇಲ್ಲದೆ ‘ಸಿದ್ದರಾಮಯ್ಯ ಸರ್ಕಲ್’ ಎಂಬ ಹೆಸರಿನ ಬ್ಯಾನರ್ ಅಳವಡಿಸಲಾಗಿತ್ತು ಎಂಬ ಮಾಹಿತಿಯೂ ಇದೀಗ ಚರ್ಚೆಗೆ ಬಂದಿದೆ.
ಅನುಮತಿಯಿಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಪ್ರತಿಮೆ ಸ್ಥಾಪಿಸಿರುವ ವಿಷಯ ತಿಳಿಯುತ್ತಿದ್ದಂತೆ ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಮುನ್ನವೇ ಪ್ರತಿಮೆಯ ಮುಖವನ್ನು ಮುಚ್ಚಲಾಗಿದ್ದು, ಬಳಿಕ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಪಾಲಿಕೆ ಸಿಬ್ಬಂದಿ ಪ್ರತಿಮೆಯನ್ನು ತೆರವುಗೊಳಿಸಿದರು.ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರು ಕಲಬುರಗಿಗೆ ಆಗಮಿಸಿರುವ ಸಂದರ್ಭದಲ್ಲೇ ಈ ಘಟನೆ ನಡೆದಿದೆ. ಸಿದ್ದರಾಮಯ್ಯ ಅವರ ಪ್ರತಿಮೆ ಸ್ಥಾಪಿಸಲಾಗಿದ್ದ ಹೈಕೋರ್ಟ್ ವೃತ್ತದ ಮಾರ್ಗವಾಗಿಯೇ ಮುಖ್ಯಮಂತ್ರಿ ಅಫಜಲಪುರಕ್ಕೆ ತೆರಳಬೇಕಿದ್ದ ಹಿನ್ನೆಲೆಯಲ್ಲಿ, ಪ್ರತಿಮೆ ತೆರವು ಕಾರ್ಯಾಚರಣೆ ಸಾರ್ವಜನಿಕ ಹಾಗೂ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯದೆ ಪ್ರತಿಮೆ, ಬ್ಯಾನರ್ ಸೇರಿದಂತೆ ಯಾವುದೇ ರಚನೆಗಳನ್ನು ಸ್ಥಾಪಿಸುವುದನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.






