ಕೃಷಿ ಮಸೂದೆಗಳನ್ನು ವಿರೋಧಿಸಿ ರೈತ ಹಾಗೂ ಇತರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ ಪ್ರತಿಕ್ರಿಯೆ ದೊರೆತಿದೆ. ಬೆಂಗಳೂರಿನಲ್ಲಿ ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು, ಸರ್ಕಾರದ ವಿರುದ್ದ ಘೊಷಣೆಗಳನ್ನು ಕೂಗಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸೇರಿದಂತೆ ಇತರ ಕೃಷಿ ಸಂಬಂಧಿ ಮಸೂದೆಗಳನ್ನು ಸರ್ಕಾರ ವಾಪಾಸ್ ಪಡೆಯಬೇಕೆಂದು ಒತ್ತಾಯಿಸಿದ್ದಾರೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ರೈತ ಸಂಘ ಹಾಗೂ ಹಸಿರು ಸೇನೆ, ಕನ್ನಡ ಪರ ಸಂಘಟನೆಗಳು, ಸಿಐಟಿಯು, ಸರ್ಕಾರಿ ಕಾರ್ಮಿಕರ ಸಂಘಟನೆಗಳು ಹಾಗೂ ಇತರ ಸಂಘಟನೆಗಳು ಜಂಟಿಯಾಗಿ ಇಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದವು. ಸುಮಾರು ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರು ಟೌನ್ಹಾಲ್ ಮುಂಭಾಗ ಜಮಾಯಿಸಿದ್ದರು. ಬೆಂಗಳೂರಿನ ಆಸುಪಾಸಿನ ಊರುಗಳಿಂದ ಬಂದಂತಹ ಪ್ರತಿಭಟನಾಕಾರರೂ ಟೌನ್ಹಾಲ್ ಮುಂಭಾಗ ಬಂದು ಸೇರಿದ್ದರು.
ಈ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಹಾಗೂ ಪ್ರಧಾನಿ ಮೋದಿಯವರ ಪ್ರತಿಕೃತಿಯನ್ನು ಧಹಿಸಿ ಅವರ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಕ್ತಪಡಿಸಿದ್ದಾರೆ.
ಟೌನ್ಹಾಲ್ನಿಂದ ಫ್ರೀಡಂಪಾರ್ಕ್ವರೆಗೂ ಮೆರವಣಿಗೆ ಹೊರಟ ಪ್ರತಿಭಟನಾಕಾರರನ್ನು ಮೈಸೂರು ಬ್ಯಾಂಕ್ ವೃತ್ತದಲ್ಲಿ ತಡೆದ ಪೊಲೀಸರು ಮುಂದಕ್ಕೆ ಹೋಗಲು ಅವಕಾಶ ನೀಡಲಿಲ್ಲ. ಹಾಗಾಗಿ, ಮೈಸೂರು ಬ್ಯಾಂಕ್ ವೃತ್ತದಲ್ಲಿಯೇ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಪ್ರತಿಭಟನೆಯಿಂದ ಈ ಭಾಗದಲ್ಲಿ ಸರಾಗ ಸಂಚಾರಕ್ಕೆ ಕೆಲಕಾಲ ಅಡಚಣೆಯುಂಟಾಗಿತ್ತು.
ಪ್ರತಿಭಟನಾ ಸಂದರ್ಭದಲ್ಲಿ ಪ್ರತಿಧ್ವನಿಯೊಂದಿಗೆ ಮಾತನಾಡಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಪ್ರಜಾಪ್ರಭುತ್ವ ಸರ್ಕಾರಗಳ ರೀತಿ ಈಗಿನ ಸರ್ಕಾರಗಳು ಇಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸರ್ವಾಧಿಕಾರಿ ಧೋರಣೆಯನ್ನು ಪ್ರತಿಪಾದಿಸುತ್ತಿವೆ ಎಂದಿದ್ದಾರೆ.
ರೈತರೊಂದಿಗೆ ಜೊತೆಗೂಡಿದ ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಅವರು, ರೈತರು ಸ್ವಾವಲಂಬಿಗಳಾಗಬೇಕಿದೆ. ಈಗಿರುವ ಸರ್ಕಾರಗಳನ್ನು ನಂಬಿಕೊಂಡು ಪ್ರಯೋಜನವಿಲ್ಲ ಎಂದು ಹೇಳಿದ್ದಾರೆ.
ಮೈಸೂರು ಬ್ಯಾಂಕ್ ವೃತ್ತದಿಂದ ಮತ್ತೆ ಫ್ರೀಡಂ ಪಾರ್ಕ್ ವರೆಗೆ ಮೆರವಣಿಗೆ ಆರಂಭಿಸಲು ಪ್ರಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ, ಪೊಲೀಸರ ಮಾತಿಗೆ ಜಗ್ಗದ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಯಿತು. ಸುಮಾರು ನಾಲ್ಕು ಬಸ್ಗಳಲ್ಲಿ ಪ್ರತಿಭಟನಾಕಾರರನ್ನು ತುಂಬಿ ಸ್ಥಳದಿಂದ ಕರೆದೊಯ್ದಿದ್ದಾರೆ.