ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಕಾಂಗ್ರೆಸ್ ಕೆಲವು ಪ್ರಮುಖ ನಿರ್ಣಯಗಳನ್ನು ತೆಗದುಕೊಂಡಿದೆ.
ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಬಡವರು, ಮಧ್ಯಮ ವರ್ಗದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ನಿಲುವಳಿ ಸೂಚನೆ ಮಂಡನೆ ಮಾಡಲು ನಿರ್ಣಯಿಸಲಾಗಿದೆ.
ಅಲ್ಲದೆ, ಸಿ.ಡಿ ಪ್ರಕರಣ, ಪ್ರಸಾರಕ್ಕೆ ತಡೆ ಕೋರಿ ಸಚಿವರಿಂದ ನ್ಯಾಯಾಲಯಕ್ಕೆ ಮೊರೆ, ಉಭಯ ಸದನದಲ್ಲಿ ಹೋರಾಟ ಹಾಗೂ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಹೋರಾಟ ನಡೆಸುವ ನಿರ್ಣಯವನ್ನು ಕಾಂಗ್ರೆಸ್ ಕೈಗೊಂಡಿದೆ.

ಶಾಸಕ ಸಂಗಮೇಶ್ವರ ಕುಟುಂಬ ಹಾಗೂ ಬೆಂಬಲಿಗರ ಮೇಲೆ ಕೊಲೆ ಯತ್ನ ಕೇಸು ಹಾಕಲಾಗಿದೆ. ಇದು ಸುಳ್ಳು ಕೇಸು. ಯಾವುದೇ ಅಹಿತಕರ ಘಟನೆ ನಡೆಯದಿದ್ದರೂ ಬಂಧಿಸಬೇಕೆಂಬ ಏಕೈಕ ಉದ್ದೇಶದಿಂದ ಕೇಸು ದಾಖಲು ಮಾಡಿಸಲಾಗಿದೆ. ಸದನದಲ್ಲಿ ಪ್ರತಿಭಟನೆ ನಡೆಸಿದ್ದರಿಂದ ಸಂಗಮೇಶ್ ಅವರನ್ನು ಒಂದು ವಾರ ಅಮಾನತು ಮಾಡಲಾಗಿದೆ. ಸ್ಫೀಕರ್ ಅವರಿಗೆ ಮನವಿ ಮಾಡಿದರೂ ಅಮಾನತು ಆದೇಶ ವಾಪಸ್ ಪಡೆದಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್ ಪೊಲೀಸ್ ದೌರ್ಜನ್ಯ ಖಂಡಿಸಿ ಮಾರ್ಚ್ 13ರಂದು ಶಿವಮೊಗ್ಗ ಚಲೋ ನಡೆಸಲು ತೀರ್ಮಾನಿಸಿದೆ. ಪ್ರತಿಭಟನೆಯಲ್ಲಿ ಎಲ್ಲ ಶಾಸಕರು ಭಾಗವಹಿಸಲು ನಿರ್ಧರಿಸಲಾಗಿದೆ.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಹಿರಿಯ ಮುಖಂಡರಾದ ಡಾ. ಜಿ. ಪರಮೇಶ್ವರ, ಆರ್.ವಿ. ದೇಶಪಾಂಡೆ, ಕೆ.ಆರ್. ರಮೇಶ್ ಕುಮಾರ್, ಶ್ಯಾಮನೂರು ಶಿವಶಂಕರಪ್ಪ, ಸಿ.ಎಂ. ಇಬ್ರಾಹಿಂ, ಕೆ.ಜೆ. ಜಾರ್ಜ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಸತೀಶ್ ಜಾರಕಿಹೊಳಿ, ಧೃವನಾರಾಯಣ್ ಮತ್ತಿತರರು ಪಾಲ್ಗೊಂಡಿದ್ದರು.









