ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರದ ಕಾರ್ಯವೈಖರಿ ಕುರಿತು ಟ್ವಿಟರ್ನಲ್ಲಿ ಟೀಕಿಸಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕ್ರಿಯಾಯೋಜನೆ ಸಿದ್ಧಪಡಿಸಿದ ಬಿಜೆಪಿ ಸರ್ಕಾರ, ಅಭಿವೃದ್ಧಿ ಕಾಮಗಾರಿಗಳಿಗೆ ಈ ವರೆಗೆ ನಯಾಪೈಸೆ ಖರ್ಚು ಮಾಡಿಲ್ಲ ಎಂದು ಆಕ್ರೋಶಗೊಂಡಿದ್ದಾರೆ
ಈ ವಿಚಾರ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ. ಹಣ ಖರ್ಚು ಮಾಡಿದ್ದರೆ ಲೆಕ್ಕ ಹೇಳಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಸಚಿವ ಈಶ್ವರಪ್ಪ ಅವರ ಗಮನಕ್ಕೆ ತಾರದೆ ಅವರ ಇಲಾಖೆಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಮಿಷನ್ ಹೊಡೆಯುವ ವಿಷಯದಲ್ಲಿ ವಿಜಯೇಂದ್ರ ಮತ್ತು ಈಶ್ವರಪ್ಪ ನಡುವೆ ಜಗಳವಾಗಿದೆ. ಬಿಜೆಪಿಯವರ ಭ್ರಷ್ಟ ಆಡಳಿತದಲ್ಲಿ ಕಮಿಷನ್ ದಂಧೆ 30 ರಿಂದ 35 ಪರ್ಸೆಂಟ್ ಗಡಿ ದಾಟಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಡಳಿತದಲ್ಲಿ ಕಮಿಷನ್ ದಂಧೆ ಭರ್ಜರಿಯಾಗಿ ನಡೆಯುತ್ತಿದೆ. ಕಮಿಷನ್ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರೊಂದಿಗೆ ಜಗಳವಾಡಿಕೊಂಡ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ಅವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ ಎಂದಿದ್ದಾರೆ.

ಯಡಿಯೂರಪ್ಪ ಅವರನ್ನು ಟೀಕಿಸಿದ್ದಕ್ಕಾಗಿ ಕೆಲ ಸಚಿವರು ನನ್ನ ವಿರುದ್ಧ ಹೇಳಿಕೆ ನೀಡಿದ್ದಾರೆಂದು ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಅವರು ದಿನಬೆಳಗಾದರೆ ಯಡಿಯೂರಪ್ಪ ವಿರುದ್ಧ ಟೀಕೆ ಮಾಡುತ್ತಾರೆ. ರಾಜ್ಯ ಸರ್ಕಾರದ ಸಚಿವರಿಗೆ ಧೈರ್ಯವಿದ್ದರೆ ಮೊದಲು ಯತ್ನಾಳ್ ಅವರ ಬಾಯಿ ಮುಚ್ಚಿಸಲಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.





