ಕರ್ನಾಟಕ ರಾಜ್ಯಕ್ಕೆ ಮಹತ್ವಪೂರ್ಣವಾಗಿರುವ ಕುಡಿಯುವ ನೀರಿಗೆ ಅನುಕೂಲ ಕಲ್ಪಿಸುವಂಥ ಮೇಕೆದಾಟು ಯೋಜನೆಗೆ ತಮಿಳುನಾಡು ತಡೆ ಕೋರಿ ಅರ್ಜಿಯ ಸಲ್ಲಿಸಿತ್ತು. ಈ ವಿಚಾರಣೆಯನ್ನು ಕೈಗೆತ್ತಿಕೊಂಡ ರಾಷ್ಟ್ರೀಯ ಹಸಿರು ಪೀಠ (ಎನ್ಜಿಟಿ) ರಾಜ್ಯದ ವಾದವನ್ನು ಶುಕ್ರವಾರ ಮನ್ನಿಸಿ, ಅರ್ಜಿಯನ್ನು ವಜಾಗೊಳಿಸಿತ್ತು ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಕೇಂದ್ರದಿಂದ ಶೀಘ್ರವೇ ಅನುಮತಿ ಪಡೆದು ಯೋಜನೆ ಜಾರಿಗೊಳಿಸುವುದರತ್ತ ರಾಜ್ಯ ಸರ್ಕಾರ ಗಮನಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಮೇಕೆದಾಟು ಯೋಜನೆ ವಿಚಾರವಾಗಿ ಎನ್ಜಿಟಿ ದಕ್ಷಿಣ ಪೀಠ ಆರಂಭಿಸಿದ್ದ ಸ್ವಯಂ ಪ್ರೇರಿತ ವಿಚಾರಣೆಯನ್ನು ಪ್ರಧಾನ ಪೀಠ ಇತ್ಯರ್ಥಪಡಿಸಿದೆ. ಯೋಜನೆಗಿದ್ದ ಅಡ್ಡಿಯೊಂದು ನಿವಾರಣೆಯಾಗಿದೆ. ಈಗ ಕೇಂದ್ರದಿಂದ ಶೀಘ್ರವೇ ಅನುಮತಿ ಪಡೆದು ಯೋಜನೆ ಜಾರಿಗೊಳಿಸುವುದರತ್ತ ರಾಜ್ಯ ಸರ್ಕಾರ ಗಮನಹರಿಸಬೇಕು. ಕೇಂದ್ರವೂ ಪರಿಸರ ಅನುಮತಿಯನ್ನು ಶೀಘ್ರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಕೇಂದ್ರ–ರಾಜ್ಯದಲ್ಲಿ ಒಂದೇ ಸರ್ಕಾರ ಇದ್ದರೆ ಸ್ವರ್ಗ ಸೃಷ್ಟಿಯಾಗುವುದಾಗಿ ಬಿಜೆಪಿ ಹೇಳಿತ್ತು. ಸ್ವರ್ಗ ಬೇಡ, ಅನಿಶ್ಚಿತತೆಯಲ್ಲಿ ತೂಗುತ್ತಿರುವ ಮೇಕೆದಾಟು ಯೋಜನೆಗೆ ಪರಿಸರ ಅನುಮತಿಯನ್ನು ಶೀಘ್ರ ಪಡೆದುಕೊಂಡರೆ ಸಾಕು. ನಮ್ಮ ನೆಲ, ಜಲ, ಧನ ಬಳಸಿ ನಮ್ಮವರ ದಾಹ ನೀಗಿಸುವ ಯೋಜನೆ ವಿಚಾರದಲ್ಲಿ ಬಿಜೆಪಿ ಸರ್ಕಾರ ಇನ್ನು ನಿರ್ಲಕ್ಷ್ಯ ತೋರಬಾರದು ಎಂದಿದ್ದಾರೆ.
ಕೇಂದ್ರದ ಅನುಮತಿ ಸಿಕ್ಕ ಕೂಡಲೇ ಯೋಜನೆ ಆರಂಭಿಸುವ ಯಡಿಯೂರಪ್ಪನವರ ಹೇಳಿಕೆಯನ್ನು ಸೋದರ ಎಂ.ಕೆ ಸ್ಟಾಲಿನ್ ವಿರೋಧಿಸಿದ್ದಾರೆ. ನ್ಯಾಯಾಲಯದಲ್ಲಿ ವಿಚಾರಣೆಯಾಗುತ್ತಿರುವ ಪ್ರಕರಣವೊಂದರಲ್ಲಿ ಕರ್ನಾಟಕ ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದೆ ಎಂಬುದು ಅವರ ಆರೋಪ. ವಿಚಾರಣೆಯಾಗುತ್ತಿರುವ ಯೋಜನೆಯೊಂದಕ್ಕೆ ತಡೆ ತರಲು ಪ್ರಧಾನಿಯನ್ನು ಭೇಟಿಯಾಗಿದ್ದೂ ತಪ್ಪಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಹೊಗೇನಕಲ್ ಕುಡಿಯುವ ನೀರಿನ ಯೋಜನೆ ವಿಚಾರದಲ್ಲಿ ತಮಿಳುನಾಡು ಯಾವ ರೀತಿ ನಡೆದುಕೊಂಡಿತು ಎಂದು ನಾನು ಹೇಳಬೇಕಿಲ್ಲ. ಆ ಯೋಜನೆ ಆಗಿದ್ದು ಎಂ.ಕೆ. ಸ್ಟಾಲಿನ್ ಉಪಮುಖ್ಯಮಂತ್ರಿ ಆಗಿದ್ದ ಕಾಲದಲ್ಲೇ. ಕುಡಿಯುವ ನೀರಿನ ನೆಪವೊಡ್ಡಿ ತಮಿಳುನಾಡು ಕರ್ನಾಟಕದ ಗಡಿ ದಾಟಿ ಬಂದಿತ್ತು. ಸಮರ್ಥನೆಯನ್ನೂ ಮಾಡಿಕೊಂಡಿತ್ತು. ಮೇಕೆದಾಟು ಕೂಡ ಕುಡಿಯುವ ನೀರಿನ ಯೋಜನೆಯೇ ಎಂದಿದ್ದಾರೆ.
ಮೇಕೆದಾಟು ಯೋಜನೆಯನ್ನು ಯಾವ ಕೋನದಲ್ಲಿ ನೋಡಿದರೂ ಅದು ನ್ಯಾಯವಾಗೇ ಕಾಣುತ್ತದೆ. ಹೀಗಾಗಿ ವಿವಾದ ಅನಗತ್ಯ. ಕಾವೇರಿಗಾಗಿ ಕಲಹ ನಡೆದದ್ದು ಸಾಕು. ಈಗ ನಾವು ಸೋದರತೆ ಮೆರೆಯಬೇಕಾದ ಅನಿವಾರ್ಯತೆ ಇದೆ ಎಂಬುದನ್ನು ಸೋದರ ಎಂ.ಕೆ.ಸ್ಟಾಲಿನ್ ಅವರಿಗೆ ನಾನು ಮತ್ತೊಮ್ಮೆ ಹೇಳಲು ಬಯಸುತ್ತೇನೆ. ಅನಗತ್ಯ ಕಲಹದಲ್ಲಿ, ಅದೂ ಈ ಹೊತ್ತಲ್ಲಿ ನಾವು ಒಡೆದುಹೋಗಬಾರದು ಎಂದು ಮನವಿ ಮಾಡಿದ್ದಾರೆ.






