ರಾಜ್ಯಾದ್ಯಂತ ತೀವ್ರ ಆಘಾತ ಮೂಡಿಸಿದ್ದ ಮೈಸೂರು ಸಾಮೂಹಿಕ ಅತ್ಯಾಚಾರ ಆರೋಪಿಗಳನ್ನು ಹಡೆಮುರಿ ಕಟ್ಟುವಲ್ಲಿ ರಾಜ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಹೊರ ರಾಜ್ಯದಲ್ಲಿ ತಲೆ ಮರೆಸಿಕೊಂಡಿದ್ದ ಐವರು ಆರೋಪಿಗಳನ್ನು ಶುಕ್ರವಾರ ರಾತ್ರಿಯೇ ವಶಕ್ಕೆ ಪಡೆಯಲಾಗಿದೆ.
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಂಗಳವಾರ ಸಂಜೆ ಗೆಳೆಯನೊಂದಿಗೆ ವಿಹಾರ ಹೋಗಿದ್ದ ಯುವತಿನ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಘಟನೆ ಬೆಳಕಿಗೆ ಬರುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ತಮಿಳುನಾಡಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳೆಲ್ಲರೂ ಮೈಸೂರಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ತಮಿಳುನಾಡು ಮತ್ತು ಕೇರಳ ಮೂಲದವರು ಎನ್ನಲಾಗಿದೆ. ಘಟನೆ ನಡೆದು ಮೂರು ದಿನದ ಬಳಿಕ ಶಂಕಿತ ಪಾತಕಿಗಳನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆಗಸ್ಟ್ 24ರಂದು ವಿದ್ಯಾರ್ಥಿನಿ ತನ್ನ ಸ್ನೇಹಿತನೊಂದಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಳು, ಈ ವೇಳೆ ಚಾಮುಂಡಿಬೆಟ್ಟದ ಬಳಿಯ ಲಲಿತಾದ್ರಿಪುರದಲ್ಲಿ ಐವರು ಯುವಕರ ತಂಡ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಪರಾರಿಯಾಗಿದ್ದರು.
ಘಟನೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ತೀವ್ರ ಸಂಚಲನ ಸೃಷ್ಟಿಸಿತ್ತು. ಅಲ್ಲದೇ ಇದು ರಾಜಕೀಯ ವಾಕ್ಸಮರಕ್ಕೂ ಕಾರಣವಾಗಿತ್ತು. ಇದೀಗ ಅತ್ಯಾಚಾರ ಮಾಡಿದ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ತಾಂತ್ರಿಕ ಸಾಕ್ಷ್ಯಧಾರಗಳ ಆಧಾರದ ಮೇಲೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸರ ಮೂಲಗಳಿಂದ ತಿಳಿದುಬಂದಿದೆ. ಸದ್ಯ ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆದರೆ ಘಟನೆ ಕುರಿತು ಸಂತ್ರಸ್ತೆಯಾಗಲೀ, ಆಕೆಯ ಪೋಷಕರಾಗಲೀ ಈವರೆಗೆ ಪೊಲೀಸರಿಗೆ ಯಾವುದೇ ಹೇಳಿಕೆ ನೀಡಿಲ್ಲ. ಸಂತ್ರಸ್ತೆಯ ಸ್ನೇಹಿತನ ದೂರಿನ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದರು. ಹಾಗಾಗಿ ಇದೀಗ ಬಂಧಿತರ ಕುರಿತು ಸಂತ್ರಸ್ತೆಯ ಹೇಳಿಕೆ ಮುಖ್ಯವಾಗಿದ್ದು, ಪೊಲೀಸರು ಹೇಳಿಕೆ ಪಡೆಯುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.