ಗೋ ಹತ್ಯೆ ಆರೋಪದ ಮೇರೆಗೆ ಬಂಧಿತನಾಗಿದ್ದ ಸಾಂಬಲ್ ಜಿಲ್ಲೆಯ ಜಾವೇದ್ ಎಂಬುವರ ಜಾಮೀನು ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್, ‘ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಹಾಗೂ ಗೋ ಹತ್ಯೆ ಮಾಡುವವರನ್ನು ಶಿಕ್ಷಿಸುವ ನಿಟ್ಟಿನಲ್ಲಿ ಸಂಸತ್ತು ಕಾನೂನು ರೂಪಿಸಬೇಕು ಎಂದು ಹೇಳಿದೆ. ಅಲ್ಲದೆ, ಆರೋಪಿಯ ಜಾಮೀನು ನಿರಾಕರಿಸಿದೆ.
ದೇಶದಲ್ಲಿ ಗೋಮಾಂಸ ಭಕ್ಷಣೆ ಯಾರ ಮೂಲಭೂತ ಹಕ್ಕಲ್ಲ.
ಗೋವು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ ಎಂದು ವ್ಯಾಖ್ಯಾನಿಸಿರುವ ಹೈಕೋರ್ಟ್, ಅಹಾರದ ಮೂಲಭೂತ ಹಕ್ಕು ಎಂಬುದು ಗೋಮಾಂಸ ತಿನ್ನುವವರಿಗಿದ್ದರೆ, ಗೋವುಗಳನ್ನು ಪೂಜಿಸುವ ಮತ್ತು ಅದರ ಮೇಲೆಯೇ ಆರ್ಥಿಕವಾಗಿ ಅವಲಂಬಿಸಿರುವವರಿಗೂ ತಮ್ಮ ನಂಬಿಕೆ ಮತ್ತು ಬದುಕುವ ಮೂಲಭೂತ ಹಕ್ಕೂ ಇದೆ. ಜೀವಿಸುವ ಹಕ್ಕು ಕೊಲ್ಲುವ ಹಕ್ಕನ್ನು ಮೀರಿದ್ದು ಮತ್ತು ಗೋಮಾಂಸ ತಿನ್ನುವ ಹಕ್ಕನ್ನು ಎಂದಿಗೂ ಮೂಲಭೂತ ಹಕ್ಕಾಗಿ ಪರಿಗಣಿಸಲಾಗದು ಎಂದು ಹೇಳಿದೆ.
ಹಾಗೇ, ಇದು ಅರ್ಜಿದಾರರ ಮೊದಲ ಅಪರಾಧವಲ್ಲ. ಈ ಅಪರಾಧಕ್ಕೂ ಮುನ್ನ, ಅವರು ಹಲವು ಗೋ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಅವರ ಕೃತ್ಯಗಳು ಸಮಾಜದಲ್ಲಿ ಸಾಮರಸ್ಯವನ್ನು ಕದಡಿವೆ. ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾದರೆ ಮತ್ತೆ ಅದೇ ಅಪರಾಧ ಎಸಗುತ್ತಾರೆ ಎಂದೂ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಮುಸ್ಲಿಂ ಆಡಳಿತಗಾರರೇ ಗೋವನ್ನು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗ ಎಂದು ಪರಿಗಣಿಸಿದ್ದರು. ಗೋವಿನ ಮಹತ್ವವನ್ನು ಹಿಂದೂಗಳಂತೆಯೇ ಮುಸ್ಲಿಂ ಆಡಳಿತಗಾರರು ಕೂಡ ಅರ್ಥ ಮಾಡಿಕೊಂಡಿದ್ದರು. ಅದಕ್ಕೆ ಬಾಬರ್, ಹುಮಾಯೂನ್ ಮತ್ತು ಅಕ್ಬರ್ ತಮ್ಮ ಧಾರ್ಮಿಕ ಹಬ್ಬಗಳಲ್ಲಿ ಗೋವುಗಳ ಬಲಿ ನಿಷೇಧಿಸಿದ್ದೇ ನಿದರ್ಶನ. ಇದ್ದಲ್ಲದೆ ಮೈಸೂರಿನ ಆಡಳಿತಗಾರ ಹೈದರ್ ಅಲಿ ಆಡಳಿತಾವಧಿಯಲ್ಲಿ ಕೂಡ ಗೋಹತ್ಯೆ ಶಿಕ್ಷಾರ್ಹ ಅಪರಾಧವಾಗಿತ್ತು ಎಂದು ಹೈಕೋರ್ಟ್ ಹೇಳಿದೆ.
ಯಾವುದೇ ಒಂದು ದೇಶದ ಸಂಸ್ಕೃತಿ ಮತ್ತು ನಂಬಿಕೆಗೆ ಧಕ್ಕೆಯುಂಟಾದರೆ ಆ ದೇಶವೇ ದುರ್ಬಲವಾಗುತ್ತದೆ. ಆದ್ದರಿಂದ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು. ಹಾಗೇ ಗೋ ರಕ್ಷಣೆಯ ಹೆಸರಿನಲ್ಲಿ ಗೋವುಗಳಿಗೆ ಆಶ್ರಯ ಕಲ್ಪಿಸಿ ಹಣ ಗಳಿಕೆಯಲ್ಲಿ ತೊಡಗಿರುವವರ ವಿರುದ್ಧವೂ ಕ್ರಮ ತೆಗೆದುಕೊಳ್ಳಲು ಸರ್ಕಾರ ಕಾನೂನುಗಳನ್ನು ತರಬೇಕು ಎಂದೂ ನ್ಯಾಯಾಲಯ ಸರ್ಕಾರಕ್ಕೆ ಸೂಚಿಸಿದೆ.





