ಆರ್ಎಸ್ಎಸ್ ಕುರಿತು ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ನೀಡಿದ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ತಿರುಗೇಟು ನೀಡಿದ್ದರು. ಇದು ಆರ್ಎಸ್ಎಸ್ ಬಗ್ಗೆ ಸಿದ್ದರಾಮಯ್ಯ vs ಸಿಟಿ ರವಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.
ಈ ಕುರಿತು ಸಿಟಿ ರವಿ ಅವರಿಗೆ ಸರಣಿ ಪ್ರಶ್ನೆಗಳನ್ನು ಸಿದ್ದರಾಮಯ್ಯ ಕೇಳಿದ್ದಾರೆ.
ಸಿದ್ದರಾಮಯ್ಯ ಪ್ರಶ್ನೆಗಳು:
- ಆರ್ ಎಸ್ ಎಸ್ ಎಂದ ಕೂಡಲೇ ಉರಿದುಬೀಳುವ ಸಿಟಿ ರವಿ ಅವರೇ, ಆರ್ ಎಸ್ ಎಸ್ ಎಂದರೆ ಏನು?
- ಆರ್ಎಸ್ಎಸ್ ಜೊತೆ ಬಿಜೆಪಿಗೆ ಸಂಬಂಧ ಏನು?
- ಆರ್ ಎಸ್ ಎಸ್ ಎಂದರೆ ಏನು ಸಾಮಾಜಿಕ ಸೇವಾ ಸಂಘಟನೆಯೇ? ಸಾರ್ವಜನಿಕ ದತ್ತಿಯೇ?
- ಇಲ್ಲವೇ ಬಿಜೆಪಿ ಎಂಬ ರಾಜಕೀಯ ಪಕ್ಷಕ್ಕೆ ನಾಯಕರನ್ನು ಉತ್ಪಾದಿಸಿ ಕೊಡುವ ಕಾರ್ಖಾನೆಯೇ?
- ಆರ್ ಎಸ್ ಎಸ್ ಎನ್ನುವುದು ಹಿಂದುಗಳ ಸಂಘಟನೆ ಎಂದು ನೀವು ಹೇಳುವುದಾದಾರೆ ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೇ?
- ಬೇರೆ ಪಕ್ಷದವರು ಹಿಂದೂಗಳಲ್ಲವೇ?
- ದೆಹಲಿಯಲ್ಲಿ 10 ತಿಂಗಳಿಂದ ಬೀದಿಯಲ್ಲಿರುವವರು ಹಿಂದುಗಳಲ್ಲವೇ?
- ವಾರದ ಹಿಂದೆ ಉತ್ತರಪ್ರದೇಶದಲ್ಲಿ ಅತ್ಯಾಚಾರಕ್ಕೀಡಾದ ದಲಿತ ಯುವತಿ ಹಿಂದು ಅಲ್ಲವೇ?
- ಆರ್ ಎಸ್ ಎಸ್ ಸಾಂಸ್ಕೃತಿಕ ಸಂಘಟನೆ ಎಂದಾದರೆ ಅದರ ಸಂಸ್ಕೃತಿಯ ವ್ಯಾಖ್ಯಾನವೇನು?
ಈ ಪ್ರಶ್ನೆಗಳ ಬಳಿಕ, “ನಾನು ಮತ್ತು ನನ್ನಂತಹ ಕೋಟ್ಯಂತರ ಜನ ನಿರ್ಭೀತಿ ಮತ್ತು ಆತ್ಮಗೌರವದಿಂದ ಬದುಕುತ್ತಿರುವುದು ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದ. ನಿಮ್ಮ ಪರಿವಾರದ ತಾಲಿಬಾನ್ ಗಿರಿಯನ್ನು ಅದೇ ಸಂವಿಧಾನದಿಂದ ಹಿಮ್ಮೆಟ್ಟಿಸುತ್ತೇವೆ.” ಎಂದು ಸಿದ್ದರಾಮಯ್ಯ ಅವರು ಸವಾಲು ಹಾಕಿದ್ದಾರೆ.

ಸಿಟಿ ರವಿ ಅವರೇ, ನಿಮ್ಮನ್ನು ರೈತನ ಮಗ ಎನ್ನುತ್ತೀರಿ, ನಾನು ಉಡುವ ರೈತ ಮಕ್ಕಳ ಪಂಚೆಯನ್ನು ಗೇಲಿ ಮಾಡುತ್ತೀರಿ. ನಿಮ್ಮ ತಂದೆ ಕೂಡಾ ಪಂಚೆ ಉಡುವವರು ಎಂದು ಅಂದುಕೊಳ್ತೀನಿ. ನಿಮ್ಮಂತಹ ಮಗನ ಬಗ್ಗೆ ಅವರೇನು ಅಂದುಕೊಳ್ಳಬಹುದು ಯೋಚಿಸಿದ್ದೀರಾ? ಈ ರೀತಿ ನಾಲಿಗೆ ಸಡಿಲ ಬಿಟ್ಟು ಮನೆಗೆ ಹೋಗುವಾಗ ಹುಷಾರಾಗಿರಿ ಎಂದು ಟಾಂಗ್ ಕೊಟ್ಟಿದ್ದಾರೆ.
ಸಿಟಿ ರವಿ ಅವರ ಕಾರು ಅಪಘಾತ ಪ್ರಕರಣವನ್ನು ಪರೋಕ್ಷವಾಗಿ ಉಲ್ಲೇಖಿಸಿರುವ ಸಿದ್ದರಾಮಯ್ಯ, ʼಕಣ್ಣಿಗೆ ಪೊರೆ ಬಂದವರು ಕತ್ತಲಲ್ಲಿ ಕಾರು ಚಲಾಯಿಸಬಾರದು, ಅಪಘಾತವಾಗಿ ಅಮಾಯಕರು ಜೀವ ಕಳೆದುಕೊಳ್ಳುತ್ತಾರೆ. ಪೊರೆ ಬಂದಿದ್ದರೆ ಕ್ಯಾಟಾರಕ್ಟ್ ಮಾಡಿಸಿಕೊಳ್ಳಿ. ಸಾರ್ವಜನಿಕರ ಜೀವ ಮುಖ್ಯʼ ಎಂದು ಕ್ಲಾಸ್ ತೆಗೆದಿದ್ದಾರೆ.