ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಹಾರಾಷ್ಟ್ರ ಗಡಿಯ ಹಣಮಾಪುರ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಕೋಸಾರಿ ಗ್ರಾಮದ ದಾದಾಸೋ ಇಮಗರ (56) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮೃತ ದಾದಾಸೋ ಇಮಗರ ಅವರು ನಿನ್ನೆ ಸಾಂಗ್ಲಿ ಜಿಲ್ಲಾ ನ್ಯಾಯಾಲಯಕ್ಕೆ ಸಾಕ್ಷಿ ಹೇಳಲು ತೆರಳುತ್ತಿದ್ದ ವೇಳೆ ಮಹಾರಾಷ್ಟ್ರದ ನಾಗಜ ಬಳಿ ಅಪಹರಣಕ್ಕೊಳಗಾಗಿದ್ದರು ಎಂಬ ಆರೋಪ ಕೇಳಿಬಂದಿದೆ. ಬಳಿಕ ಅವರನ್ನು ಕೊಲೆ ಮಾಡಿ, ಶವವನ್ನು ಕರ್ನಾಟಕ-ಮಹಾರಾಷ್ಟ್ರ ಗಡಿಭಾಗದ ಮರಕ್ಕೆ ನೇಣು ಹಾಕಲಾಗಿದೆ ಎನ್ನಲಾಗಿದೆ.
ಮೂರು ವರ್ಷದ ಹಳೆಯ ಜೋಡಿ ಕೊಲೆ ಪ್ರಕರಣ
ಮೂರು ವರ್ಷಗಳ ಹಿಂದೆ ಬಾವಿ ವಿವಾದಕ್ಕೆ ಸಂಬಂಧಿಸಿದಂತೆ ದಾದಾಸೋ ಅವರ ಮಗ ಹಾಗೂ ಸಹೋದರರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸುಮಾರು 10 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೃತ ದಾದಾಸೋ ಪ್ರಮುಖ ಸಾಕ್ಷಿದಾರರಾಗಿದ್ದರು. ಆರೋಪಿಗಳಲ್ಲಿ ಮೂವರು ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಜೋಡಿ ಕೊಲೆ ಪ್ರಕರಣವನ್ನು ದಾದಾಸೋ ಇಮಗರ ಕಣ್ಣಾರೆ ಕಂಡಿದ್ದರಿಂದ ಅವರ ಸಾಕ್ಷಿಗೆ ಮಹತ್ವ ಇತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ನ್ಯಾಯಾಲಯಕ್ಕೆ ತೆರಳುತ್ತಿದ್ದ ವೇಳೆ ಹತ್ಯೆಯಾಗಿರುವುದು ಪ್ರಕರಣಕ್ಕೆ ಮತ್ತಷ್ಟು ಸಂಚಲನ ತಂದಿದೆ.
ಘಟನಾ ಸ್ಥಳಕ್ಕೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಹರಣ, ಹತ್ಯೆ ಮತ್ತು ವೈಷಮ್ಯ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.






