ನವದೆಹಲಿ: NEET ವಿದ್ಯಾರ್ಥಿಗಳ ಪರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ್ದ ಸಿಜೆಪಿ (CJP) ಇದೀಗ ಮತ್ತೊಂದು ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಮುಂದಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಸುಧಾರಣೆಯನ್ನು ಪ್ರಮುಖ ಗುರಿಯಾಗಿಸಿಕೊಂಡು ಈ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ.ಸಿಜೆಪಿ ನೇತೃತ್ವದ ಅಭಿಯಾನದ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಂದೇಶ ಹಂಚಿಕೊಂಡಿರುವ ಅಭಿಜೀತ್ ದೀಪ್ಕೆ, ಆಗಸ್ಟ್ 15ರಿಂದ ದೇಶಾದ್ಯಂತ ಸರ್ಕಾರಿ ಶಾಲೆಗಳ ಸುಧಾರಣೆಗೆ ಅಭಿಯಾನ ಆರಂಭಿಸಲಾಗುವುದು ಎಂದು ಘೋಷಿಸಿದ್ದಾರೆ.

ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿದ್ದು, ಈ ಸಮಸ್ಯೆಯ ಕುರಿತು ಪೋಷಕರು ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು. ಅಲ್ಲದೆ, ಶಾಲೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ ಅವುಗಳ ಸುಧಾರಣೆಗೆ ಗ್ರಾಮಸ್ಥರು, ಪೋಷಕರು ಹಾಗೂ ಗ್ರಾಮದ ಮುಖಂಡರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದ್ದಾರೆ.ಮಹಾರಾಷ್ಟ್ರದ ತಮ್ಮ ಗ್ರಾಮವಾದ ಹಿಂಗೋಲಿಯಿಂದಲೇ ಅಭಿಯಾನಕ್ಕೆ ಚಾಲನೆ ನೀಡುವುದಾಗಿ ದೀಪ್ಕೆ ಹೇಳಿದ್ದಾರೆ. ಗ್ರಾಮದ ಸರ್ಕಾರಿ ಶಾಲೆಗಳ ಸ್ಥಿತಿಯನ್ನು ಸುಧಾರಿಸುವಂತೆ ಅಲ್ಲಿನ ಗ್ರಾಮ ಮುಖ್ಯಸ್ಥರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
ದೇಶದಲ್ಲಿ ಹೊಸ ಸಂಸತ್ ಭವನ ಮತ್ತು ಪ್ರಧಾನಮಂತ್ರಿ ಭವನ ನಿರ್ಮಿಸಲಾಗಿದೆ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಅಗತ್ಯವಿರುವಷ್ಟು ಹೊಸ ಶಾಲೆಗಳನ್ನು ನಿರ್ಮಿಸಲು ಏಕೆ ಸಾಧ್ಯವಾಗುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ. ರೈತರು ಮತ್ತು ಕಾರ್ಮಿಕರ ಮಕ್ಕಳನ್ನು ದೇಶದ ಭವಿಷ್ಯವೆಂದು ಪರಿಗಣಿಸುವುದಿಲ್ಲವೇ ಎಂಬ ಪ್ರಶ್ನೆಯನ್ನೂ ಅವರು ಎತ್ತಿದ್ದಾರೆ.ಗ್ರಾಮೀಣ ಭಾಗದ ಹಲವು ಮಕ್ಕಳು ಇಂದಿಗೂ ಶಾಲೆಗೆ ತಲುಪಲು ದೂರ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ. ಶಾಲೆಗೆ ತೆರಳಿದ ಬಳಿಕವೂ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳು ಲಭ್ಯವಿಲ್ಲದಿರುವುದು ಆತಂಕಕಾರಿ ಬೆಳವಣಿಗೆ ಎಂದು ದೀಪ್ಕೆ ಹೇಳಿದ್ದಾರೆ.
ವಿಶೇಷವಾಗಿ ಬಾಲಕಿಯರು ಮೂಲಭೂತ ಸೌಲಭ್ಯಗಳ ಕೊರತೆಯಿಂದ ಹೆಚ್ಚಿನ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಅವರು ಗಮನ ಸೆಳೆದಿದ್ದಾರೆ.

“ಈ ಆಗಸ್ಟ್ 15ರಂದು ನಾವು ಯಾವುದಾದರೂ ಬದಲಾವಣೆಗೆ ಚಾಲನೆ ನೀಡಬೇಕಾದರೆ, ಅದು ನಮ್ಮ ಸರ್ಕಾರಿ ಶಾಲೆಗಳ ಸುಧಾರಣೆಯಿಂದಲೇ ಆರಂಭವಾಗಬೇಕು” ಎಂದು ದೀಪ್ಕೆ ಅಭಿಪ್ರಾಯಪಟ್ಟಿದ್ದಾರೆ.ಅಭಿಯಾನದ ಭಾಗವಾಗಿ ದೇಶದ ವಿವಿಧ ಗ್ರಾಮಗಳ ಮುಖಂಡರು ತಮ್ಮ ಗ್ರಾಮಗಳಲ್ಲಿರುವ ಸರ್ಕಾರಿ ಶಾಲೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ, ಅಗತ್ಯ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸಿಜೆಪಿ ಮನವಿ ಮಾಡಿದೆ. ಹಿಂಗೋಲಿಯಿಂದ ಆರಂಭವಾಗುವ ಈ ಅಭಿಯಾನವನ್ನು ದೇಶದ ಇತರ ಗ್ರಾಮಗಳೂ ಮುಂದುವರಿಸಬೇಕು ಎಂದು ದೀಪ್ಕೆ ಕರೆ ನೀಡಿದ್ದಾರೆ.






