ಚಿಕ್ಕಬಳ್ಳಾಪುರದಲ್ಲಿ ಇತ್ತೀಚೆಗೆ ನಡೆದ ಕೆಂಪೇಗೌಡ ಜಯಂತಿ ಆಚರಣೆ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದಿದ್ದ ಪ್ರಕರಣ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಮೀಸೆ ತಿರುವಿ ತೊಡೆ ತಟ್ಟಿ ಪ್ರಚೋದನೆ ನೀಡಿದ್ದಾರೆಂದು ಆರೋಪ ಮಾಡಿದ್ದ ಜೆಡಿಎಸ್, ಪ್ರದೀಪ್ ಈಶ್ವರ್ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದೆ. ಇದರ ಬೆನ್ನಲ್ಲೇ ಪ್ರದೀಪ್ ಈಶ್ವರ್ ಬೆನ್ನಿಗೆ ಸ್ವಜಾತಿ ಬಲಿಜ ಸಂಘ ಹಾಗೂ ಅಹಿಂದ ನಿಂತಿದೆ.

ಶಾಸಕ ಪ್ರದೀಪ್ ಈಶ್ವರ್ ಪರ ಚಿಕ್ಕಬಳ್ಳಾಪುರ ತಾಲೂಕು ಬಲಿಜ ಸಂಘ ಬಹಿರಂಗವಾಗಿ ಬೆಂಬಲ ಸೂಚಿಸಿದೆ. ಪ್ರಕರಣವನ್ನು ಎಸ್ಐಟಿ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದೆ. ಚಿಕ್ಕಬಳ್ಳಾಪುರ ತಾಲೂಕು ಬಲಿಜ ಸಂಘವು ಹಾರೋಬಂಡೆ ಶಿರಡಿ ಸಾಯಿಬಾಬಾ ಆಶ್ರಮದಲ್ಲಿ ಸಭೆ ನಡೆಸಿದ್ದು, ಪಕ್ಷಾತೀತವಾಗಿ ಶಾಸಕ ಪ್ರದೀಪ್ ಈಶ್ವರ್ ಬೆಂಬಲಕ್ಕೆ ನಿಲ್ಲುವ ತೀರ್ಮಾನ ಕೈಗೊಂಡಿದೆ.

ಈ ವೇಳೆ ಚಿಕ್ಕಬಳ್ಳಾಪುರ ತಾಲೂಕು ಬಲಿಜ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್ ಮಾತನಾಡಿ, ಕೆಂಪೇಗೌಡ ಜಯಂತಿ ಯಾವುದೇ ಒಂದು ಜಾತಿಗೆ ಸೀಮಿತವಾದ ಕಾರ್ಯಕ್ರಮವಲ್ಲ. ಶಾಸಕರು ಕೆಂಪೇಗೌಡರಿಗೆ ಹಾಗೂ ವೇದಿಕೆಯಲ್ಲಿದ್ದ ಗಣ್ಯರಿಗೆ ಗೌರವ ಸಲ್ಲಿಸಿದ್ದು, ಅವರಿಂದ ಯಾವುದೇ ಪ್ರಚೋದನೆ ನಡೆದಿಲ್ಲ. ಬದಲಾಗಿ ಕಾರ್ಯಕ್ರಮದಿಂದ ಹೊರಹೋಗುವಂತೆ ಕೂಗಾಡಿ ಪರಿಸ್ಥಿತಿಯನ್ನು ವಿಕೋಪಕ್ಕೆ ಬರುವಂತೆ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ.

ಸಭೆ ಬಳಿಕ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ತೆರಳಿದ ಬಲಿಜ ಸಂಘ, ಸಂಸದ ಡಾ. ಕೆ. ಸುಧಾಕರ್, ಬಿಜೆಪಿ ಮುಖಂಡ ಸಂದೀಪ್ ರೆಡ್ಡಿ ಹಾಗೂ ಪಿ.ಎನ್. ಕೇಶವರೆಡ್ಡಿ ವಿರುದ್ಧ ದೂರು ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಶಾಸಕರ ವಿರುದ್ಧ ಪ್ರತಿಭಟನೆ ಮತ್ತು ಗಲಾಟೆಗೆ ಪ್ರಚೋದನೆ ನೀಡಲಾಗಿದೆ ಎಂದು ದೂರು ನೀಡಿದ್ದಾರೆ. ಸರ್ಕಾರಿ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗೆ ಅವಮಾನವಾಗಿರುವುದು ಸರಿಯಲ್ಲ. ಈ ಪ್ರಕರಣಕ್ಕೆ ಕಾರಣ ಆದವರ ವಿರುದ್ಧ ವಿರುದ್ಧ ಕ್ರಮ ಕೈಗೊಂಡು, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.







