ಕೇಂದ್ರ ಸಚಿವ ಸಂಪುಟದ ವಿಸ್ತರಣೆ ಕುರಿತ ಹಲವು ವಿವಾದ-ಪಿಸುಮಾತುಗಳ ಮಧ್ಯೆ ಮಂಗಳವಾರ 5 ಗಂಟೆಗೆ ಹಿರಿಯ ಸಚಿವರು ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಆಯೋಜಿಸಲಾಗಿದ್ದ ಪ್ರಧಾನಿ ಮೋದಿಯವರ ಸಭೆಯನ್ನು ರದ್ದುಗೊಳಿಸಲಾಗಿದೆ ಎಂದು ಪ್ರಧಾನ ಮಂತ್ರಿ ಕಛೇರಿ ಮೂಲಗಳು ತಿಳಿಸಿವೆ.

ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಧರ್ಮೇಂದ್ರ ಪ್ರಧಾನ್, ಪಲ್ಹಾದ್ ಜೋಷಿ, ಪಿಯೂಷ್ ಗೋಯಲ್ ಮತ್ತು ನರೇಂದ್ರ ಸಿಂಗ್ ತೋಮರ್ ರಂತಹ ಹಿರಿಯ ನಾಯಕರು ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿತ್ತು. ಸಭೆಯಲ್ಲಿ ಸಚಿವರ ಕಾರ್ಯದಕ್ಷತೆ ಮತ್ತು ಭವಿಷ್ಯದ ಯೋಜನೆಗಳ ಪ್ರಸ್ತಾವನೆಗಳ ಕುರಿತು ಚರ್ಚಿಸುವ ಯೋಜನೆಯಿತ್ತು ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಕೇಂದ್ರ ಸಚಿವ ಸಂಪುಟ ಪುನರ್ರಚನೆ: ರಾಜ್ಯದಿಂದ ‘ಡಜನ್’ ಆಕಾಂಕ್ಷಿಗಳು
ಸೋಮವಾರ ಪ್ರಧಾನಿ ಮೋದಿಯವರು ಅಮಿತ್ ಶಾ ಹಾಗೂ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ಎರಡು ವರ್ಷಗಳಲ್ಲಿ ಸಚಿವರ ಪ್ರದರ್ಶನ ಹಾಗೂ ಕಾರ್ಯವೈಖರಿಗಳ ಬಗ್ಗೆ ಚರ್ಚೆ ಮತ್ತು ಸಂಪುಟ ವಿಸ್ತರಣೆ ಕುರಿತಾದ ಸುದೀರ್ಘ ಚಟುವಟಿಕೆಗಳಿಗೆ ಅಂತಿಮ ಸ್ಪರ್ಶ ನೀಡುವ ಉದ್ದೇಶದ ಸಭೆ ಎನ್ನಲಾಗಿದೆ.
ಕೇಂದ್ರದಲ್ಲಿ 28 ಸಚಿವ ಸ್ಥಾನಗಳು ಖಾಲಿ ಇದ್ದು, ಇದರಲ್ಲಿ ಕನಿಷ್ಠ 18 ಸ್ಥಾನ ಭರ್ತಿಯಾಗುವ ನಿರೀಕ್ಷೆಯಿದೆ. ಜುಲೈ 7 ಅಥವಾ 8ರಂದು ಸಂಪುಟ ವಿಸ್ತರಣೆಯಾಗುವುದು ಖಚಿತ. ಇನ್ನೆರಡು ದಿನ ಕಳೆದು ಪ್ರಧಾನಿ ಸಭೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.