ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇತರ ಆರೋಪಿಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಆರೋಪಿ ಪ್ರದೋಷ್ ಬಳಿಕ ಇದೀಗ ಎ8 ರವಿಶಂಕರ್ ಹಾಗೂ ಎ10 ವಿನಯ್ ಮಾಫಿ ಸಾಕ್ಷಿಯಾಗಲು ಕೋರ್ಟ್ಗೆ ಮನವಿ ಸಲ್ಲಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಎ14 ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬೆಂಗಳೂರಿನ 59ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿದ್ದು, ಇದರ ನಡುವೆಯೇ ಮತ್ತಿಬ್ಬರು ಆರೋಪಿಗಳನ್ನು ಮಾಫಿ ಸಾಕ್ಷಿಯನ್ನಾಗಿ ಮಾಡುವಂತೆ ಅವರ ಪರ ವಕೀಲರು ಕೋರ್ಟ್ಗೆ ಮನವಿ ಸಲ್ಲಿಸಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ಇನ್ನು ಪ್ರದೋಷ್ ಸಲ್ಲಿಸಿದ ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ಆರೋಪಿ ಪ್ರದೋಷ್ ಪರ ವಕೀಲರು, ತಮ್ಮ ಅರ್ಜಿಯೊಂದಿಗೆ ಇತರ ಆರೋಪಿಗಳ ಅರ್ಜಿಯನ್ನು ಸೇರಿಸಬಾರದು ಎಂದು ಕೋರ್ಟ್ಗೆ ಮನವಿ ಮಾಡಿದರು. ಮೊದಲು ಪ್ರದೋಷ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡು ಬಳಿಕ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ವಾದಿಸಿದ್ದಾರೆ ಎನ್ನಲಾಗಿದೆ.

ಪ್ರದೋಷ್ ಪರ ವಕೀಲರು ಮತ್ತೊಂದು ಅರ್ಜಿಯನ್ನೂ ಸಲ್ಲಿಸಿದ್ದು, ದರ್ಶನ್ ಇರುವ ಜೈಲು ಕೊಠಡಿಯಿಂದ ಪ್ರತ್ಯೇಕವಾಗಿ ತಮ್ಮ ಕಕ್ಷಿದಾರರನ್ನು ವಿಚಾರಣೆಗೆ ಹಾಜರುಪಡಿಸಬೇಕು ಎಂದು ಕೋರಿದ್ದಾರೆ. ದರ್ಶನ್ ಅವರಿಂದ ಬೆದರಿಕೆ ಅಥವಾ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಈ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್, ಸಿಆರ್ಪಿಸಿ ಸೆಕ್ಷನ್ 306 ಹಾಗೂ 307ರ ಅಡಿಯಲ್ಲಿ ಮಾಫಿ ಸಾಕ್ಷಿಗೆ ಅವಕಾಶವಿದೆ ಎಂದು ವಾದಿಸಿದರು. ಮಾಫಿ ಸಾಕ್ಷಿಯಾಗಲು ಬಯಸುವ ಆರೋಪಿ ಪ್ರಕರಣದ ಸಂಪೂರ್ಣ ಸತ್ಯವನ್ನು ಬಹಿರಂಗಪಡಿಸಬೇಕು ಎಂದು ಅವರು ತಿಳಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ದರ್ಶನ್ ಪರ ವಕೀಲರು ಆರೋಪಿಗಳಿಗೆ ತಮ್ಮ ವಾದ ಮಂಡಿಸುವ ಹಕ್ಕು ಇದೆ. ಮಾಫಿ ಸಾಕ್ಷಿಗೆ ಸಂಬಂಧಿಸಿದ ಅರ್ಜಿಯ ಪ್ರತಿಯನ್ನು ನೀಡಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಕೇವಲ ಸಾಕ್ಷಿ ಹೇಳಲು ಸಿದ್ಧ ಎಂದು ಹೇಳಿದ ಕಾರಣಕ್ಕೆ ಕ್ಷಮಾದಾನ ನೀಡಲು ಸಾಧ್ಯವಿಲ್ಲ ಎಂದು ವಾದಿಸಿದರು ಎಂದು ವರದಿಯಾಗಿದೆ. ಸದ್ಯ ವಾದ ಪ್ರತಿವಾದ ಆಲಿಸಿದ 59ನೇ ಸೆಷನ್ಸ್ ನ್ಯಾಯಾಲಯವು ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ. ಪ್ರಕರಣದ ಮುಂದಿನ ವಿಚಾರಣೆ ಬಳಿಕ ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ.







