ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆಡಿರುವ ಮಾತುಗಳು ಕಾಂಗ್ರೆಸ್ ಪಕ್ಷದ ಉಲ್ಲಂಘನೆಯಲ್ಲವೇ? ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ.
ಈ ಕುರಿತು ಮಂಗಳವಾರ (ಸೆಪ್ಟೆಂಬರ್ 12) ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ಪಕ್ಷದ ಶಿಸ್ತಿನ ಬಗ್ಗೆ ಪುಂಖಾನು ಪುಂಖವಾಗಿ ಮಾತನಾಡುವ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿ.ಕೆ.ಹರಿಪ್ರಸಾದ್ ಅವರು ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಎನಿಸಿಲ್ಲವೇ? ಎಂದು ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ನಲ್ಲಿ ಕೇಳಿದ್ದಾರೆ.
ಹಿಂದುಳಿದ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ “ಮುಖ್ಯಮಂತ್ರಿ ಆಕಾಂಕ್ಷಿಗಳು” ಮಾಡುತ್ತಿರುವ ಷಡ್ಯಂತ್ರವೇ? ನೇರವಾಗಿ ಸಿದ್ದರಾಮಯ್ಯನವರನ್ನು ಎದುರಿಸಲಾಗದೆ, ಹರಿಪ್ರಸಾದ್ ಅವರನ್ನು ದಾಳವಾಗಿ ಬಳಸುತ್ತಿರುವ “ಆಕಾಂಕ್ಷಿ” ಯಾರು? ಇದಕ್ಕೆ ಉತ್ತರಿಸಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಎಕ್ಸ್ನಲ್ಲಿ ಒತ್ತಾಯಿಸಿದ್ದಾರೆ.