ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಆಗಸ್ಟ್ 12ರಂದು ತರಗತಿ ಬಹಿಷ್ಕರಿಸಿ ಬೆಂಗಳೂರು ಚಲೋ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ.ರಾಜ್ಯದ ವಿವಿಧ ಭಾಗಗಳಿಂದ ಶಿಕ್ಷಕರು ತರಗತಿ ಬಹಿಷ್ಕರಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.
ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕರೆ ನೀಡಿದೆ.ಸೋಮವಾರ ಬೆಳಗ್ಗೆ 10.30ರಿಂದ ಸಂಜೆ 5 ಗಂಟೆಯವರೆಗೆ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗಿದೆ. ಆದರೆ “ಸೋಮವಾರ ಶಾಲೆಗಳು ಎಂದಿನಂತೆ ನಡೆಯುತ್ತದೆ” ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ನಡತೆ) ನಿಯಮಗಳು-2021ರ ಪ್ರಕಾರ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳುವುದು ನಡತೆ ನಿಯಮಗಳ ಉಲ್ಲಂಘನೆಯಾಗುವುದರಿಂದ ದಿನಾಂಕ 12/08/2024ರಂದು ಶಾಲೆಗಳನ್ನು ಮುಚ್ಚಿ ಮುಷ್ಕರದಲ್ಲಿ ಭಾಗವಹಿಸಲು ಹಾಗೂ ಪಾಠ ಬೋಧನೆಗೆ ಅಡಚಣೆ ಉಂಟುಮಾಡಲು ಅವಕಾಶವಿರುವುದಿಲ್ಲ” ಎಂದು ಶಿಕ್ಷಣ ಇಲಾಖೆ ಹೇಳಿದೆ.
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಹಿಂದಿನಂತೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಬೇಕು. 2016ರ ಮೊದಲು ನೇಮಕವಾದ ಶಿಕ್ಷಕರಿಗೆ 2017ರ ಹೊಸ ವೃಂದ ಮತ್ತು ನೇಮಕಾತಿಗಳನ್ನು ಅನ್ವಯಿಸದೆ ಒಂದರಿಂದ ಎಂಟನೇ ತರಗತಿವರೆಗೆ ಬೋಧನೆಗೆ ಅವಕಾಶ ನೀಡಬೇಕು. ಪದವಿ ಪೂರ್ಣಗೊಳಿಸಿದ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಪ್ರೌಢಶಾಲಾ ಶಿಕ್ಷಕರಾಗಿ ಭರ್ತಿಗೆ ಅವಕಾಶ ಕಲ್ಪಿಸಬೇಕು ಎಂಬ ಮೊದಲಾದ ಬೇಡಿಕೆಗಳನ್ನು ಶಿಕ್ಷಕರು ಹೊಂದಿದ್ದಾರೆ.