ಬಸವ ಕಲ್ಯಾಣ (Basava kalyana): ಸಮಸ್ತ ಕನ್ನಡಿಗರು, ಸಮಸ್ತ ಭಾರತೀಯರ ಅಭಿಮಾನದ ಸಂಕೇತವಾಗಿ ಬಸವಣ್ಣನವರನ್ನು (Basavanna) ನಾಡಿನ ಸಾಂಸ್ಕೃತಿಕ ನಾಯಕನನ್ನಾಗಿ ಘೋಷಿಸಿದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಿಳಿಸಿದರು.
ಬಸವಣ್ಣನವರನ್ನು ಕರ್ನಾಟಕ(Karnataka)ದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಚಾರಿತ್ರಿಕ ಸಂಗತಿಗಾಗಿ 160 ಮಂದಿ ಶರಣ ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ- ಲಿಂಗಾಯತ(Lingayat) ಮಠಾಧೀಶ ಸಮುದಾಯದಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಹುಬ್ಬಳ್ಳಿಯ ಮೂರುಸಾವಿರ ಮಠದ ಶ್ರೀ ಜಗದ್ಗುರು ಗುರುಸಿದ್ದರಾಜಯೋಗೀಂದ್ರ ಮಹಾಸ್ವಾಮೀಜಿ , ಜಗದ್ಗುರು ಬಸವಜಯಮೃತ್ಯುಂಜಯ ಮಹಾಸ್ವಾಮಿಗಳು, ಜಗದ್ಗುರು ಡಾ.ಮಾತೆ ಗಂಗಾದೇವಿ, ಜಗದ್ಗುರು ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಷ.ಬ್ರ.ರಾಜೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಸೇರಿ 160 ಮಂದಿ ಶರಣ ಗುರುಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ್ದರು. ಬಸವಕಲ್ಯಾಣ ಅನುಭವ ಮಂಟಪದ ವಿಶ್ವ ಬಸವ ಧರ್ಮ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ|| ಬಸವಲಿಂಗ ಪಟ್ಟದೇವರು ಮತ್ತು 150 ಕ್ಕೂ ಹೆಚ್ಚು ಶರಣಗುರುಗಳು, ಸ್ವಾಮೀಜಿಗಳು ಉಪಸ್ಥಿತರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹರಸಿದರು.
ಬಸವಣ್ಣ ಈ ಮಣ್ಣಿನ ಸಾಂಸ್ಕೃತಿಕ ಸ್ಫೂರ್ತಿ ಆಗಿರುವುದರಿಂದ ಸರ್ಕಾರಿ ಕಚೇರಿ ಮತ್ತು ಶಾಲಾ ಕಾಲೇಜುಗಳಲ್ಲಿ ಬಸವಣ್ಣರ ಭಾವಚಿತ್ರ ಕಡ್ಡಾಯಗೊಳಿಸಿದೆ. ಲಕ್ಷಾಂತರ ಕನ್ನಡಿಗರ ಸಾಕ್ಷಿಯಾಗಿ ನಾನು ಬಸವ ಜಯಂತಿಯಂದೇ ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದೆ ಎಂದರು.

ಇಡಿ ಜಗತ್ತಿಗೆ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವವನ್ನು ಪರಿಚಯಿಸಿದ್ದು ಬಸವಾದಿ ಶರಣರು. ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಇರುವ ಮೌಲ್ಯಗಳಲ್ಲೆವೂ ಬಸವಾದಿ ಶರಣರ ಆಶಯಗಳಲ್ಲಿವೆ. ಕಾಯಕ, ಉತ್ಪಾದನೆ, ದಾಸೋಹ ಬಸವಾದಿ ಶರಣರ ಆಶಯ. ಈ ಮೂಲಕ ಸಮಬಾಳು, ಸಮಪಾಲು ಎನ್ನುವುದನ್ನು 12 ನೇ ಶತಮಾನದಲ್ಲೇ ಸಾರಿದ್ದಾರೆ ಎಂದರು. ಬಸವಾದಿ ಶರಣರ ತತ್ವಗಳಿಗೆ ವಿರುದ್ಧವಾಗಿ ಇವತ್ತಿನ ವಿದ್ಯಾವಂತರು ಕಂದಾಚಾರಗಳನ್ನು ಆಚರಿಸುತ್ತಿದ್ದಾರೆ. ಆತ್ಮಸಾಕ್ಷಿ ವಿರುದ್ಧವಾಗಿ ನಡೆದುಕೊಳ್ಳಬಾರದು ಎನ್ನುವುದು ವಚನಗಳ ಆಶಯ. ಎಲವೋ ಎಂದರೆ ನರಕ. ಅಯ್ಯಾ ಎಂದರೆ ಸ್ವರ್ಗ ಎಂದು ಶರಣರು ಹೇಳಿದ್ದಾರೆ. ದಯೆಯೆ ಇಲ್ಲದ ಧರ್ಮ ಯಾವುದಯ್ಯ ಎನ್ನುವ ಮೂಲಕ ನಿಜವಾದ ಧರ್ಮ ಎಂದರೆ ಏನು ಎನ್ನುವುದನ್ನು ತಿಳಿಸಿದ್ದಾರೆ.

ಬಸವಾದಿ ಶರಣರು ನುಡಿದಂತೆ ನಡೆದರು. ನಡೆದಂತೆ ನುಡಿದರು. ಇದೇ ನಮ್ಮ ಸರ್ಕಾರಕ್ಕೆ ಮಾದರಿ. ನಾವು ಚುನಾವಣೆ ವೇಳೆಯಲ್ಲಿ ಕೊಟ್ಟ ಆಶ್ವಾಸನೆಗಳನ್ನು ಅಧಿಕಾರಕ್ಕೆ ಬಂದ ಎಂಟು ತಿಂಗಳಲ್ಲಿ ಈಡೇರಿಸಿ, ನಿಮ್ಮ ಮತಕ್ಕೆ ಗೌರವ ನೀಡಿ ಮತ್ತೆ ನಿಮ್ಮ ಮುಂದೆ ಬಂದು ನಿಂತಿದ್ದೇವೆ ಎಂದರು.
ಮುಂದಿನ ವರ್ಷ ವಚನ ವಿಶ್ವವಿದ್ಯಾಲಯ(Vachana University) ಸ್ಥಾಪಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಘೋಷಿಸಿದರು. ಕಾರ್ಯಕ್ರಮವನ್ನು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರು ಹಾಗೂ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ (Shamanur Shivashankarappa) ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಅಖಿಲ ಭಾರತ ವೀರಶೈವ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಈಶ್ವರ್ ಖಂಡ್ರೆ (Eshwara khandre) ಅವರು ವಹಿಸಿದ್ದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಬಿ.ಆರ್.ಪಾಟೀಲ್, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾದ ಡಾ. ಗೊ.ರು. ಚನ್ನಬಸಪ್ಪ, ಬಸವ ಸಮಿತಿಯ ಅಧ್ಯಕ್ಷರಾದ ಡಾ. ಅರವಿಂದ ಜತ್ತಿ , ಬೃಹತ್ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್,
ಪೌರಾಡಳಿತ, ಹಜ್ ಸಚಿವರಾದ ಶ್ರೀ ರಹೀಖಾನ್, ಮಾಜಿ ಸಚಿವರಾದ ಶ್ರೀ ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ್, ವಿಜಯ್ ಸಿಂಗ್, ಶಾಸಕ ಚನ್ನಾರೆಡ್ಡಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
#karnataka #basavakalyana #basavanna #culturalinspiration #siddramaiah







