ಬೆಂಗಳೂರು: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai) ಅವರು ಹಾವೇರಿ ಲೋಕಸಭಾ ಕ್ಷೇತ್ರದ (Haveri Lok Sabha constituency) ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಸಂಸತ್ ಸ್ಥಾನ ಉಳಿಸಿಕೊಂಡಿರುವ ಅವರು ಶಿಗ್ಗಾವಿ ವಿಧಾನಸಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅವರನ್ನು ಕಚೇರಿಯಲ್ಲಿ ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದರು. ಈ ವೇಳೆ ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಮುನಿರಾಜು, ಜಿಟಿ ದೇವೇಗೌಡ ಹಾಗೂ ಭೋಜೇ ಗೌಡ ಇದ್ದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದನಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಎರಡರಲ್ಲಿ ಒಂದು ಸ್ಥಾನ ಇಟ್ಟುಕೊಳ್ಳಬೇಕು. ನನ್ನ ಮತದಾರರಿಗೆ, ಜನತೆಗೆ ಧನ್ಯವಾದ ತಿಳಿಸುತ್ತೇನೆ. ನಿರಂತರವಾಗಿ ನನ್ನ ಕ್ಷೇತ್ರದ ಜನ ನನಗೆ 4 ಬಾರಿ ಆಶೀರ್ವಾದ ಮಾಡಿದ್ದಾರೆ. ಆ ಕ್ಷೇತ್ರವನ್ನು ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ನನ್ನ ಕ್ಷೇತ್ರವನ್ನು ಹಿಂದುಳಿದ ಕ್ಷೇತ್ರ ಎನ್ನುವ ಹಣೆಪಟ್ಟಿ ತೆಗೆದು ಹಾಕಿದ್ದೇನೆ. ಮೂಲಭೂತ ಸೌಕರ್ಯಗಳನ್ನು ನೀಡಿದ್ದೇನೆ. ಎಂಜಿನಿಯರಿಂಗ್, ಮೆಡಿಕಲ್ ಕಾಲೇಜ್ಗಳನ್ನ ತಂದಿದ್ದೇನೆ. ಕೈಗಾರಿಕೆ ಅಭಿವೃದ್ಧಿ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಬಸವರಾಜ ಬೊಮ್ಮಾಯಿ ಹಾವೇರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 43,513 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ 6,62,025 ಮತಗಳನ್ನು ಪಡೆದರೆ ಬೊಮ್ಮಾಯಿ 7,05,538 ಮತ ಪಡೆದು ಜಯ ಸಾಧಿಸಿದ್ದಾರೆ.