ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ (ಜು.30) ಆರೋಪಿಸಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.
ರಾಜ್ಯದಲ್ಲಿ ಅತಿವೃಷ್ಠಿಯಿಂದ ದೊಡ್ಡ ಪ್ರಮಾಣದಲ್ಲಿ ಮನೆಗಳ ಹಾನಿ, ಜಾನುವಾರು ಸಾವು ಉಂಟಾಗಿದೆ. ಸುಮಾರು 11 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ, ಉಳಿದ ಜಿಲ್ಲೆಗಳಲ್ಲಿ ಬರದ ಛಾಯೆ ಇದೆ. ಆದರೆ ರಾಜ್ಯ ಸರ್ಕಾರ ಇತ್ತ ಗಮನ ಹರಿಸುತ್ತಿಲ್ಲ ಎಂದು ಬೊಮ್ಮಾಯಿ ಆರೋಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೊ ಸಂವಾದ ನಡೆಸುವುದು ಹೊರತುಪಡಿಸಿ ಮಳೆ ಹಾನಿಗೆ ಯಾವುದೇ ಪರಿಹಾರ ಕಾರ್ಯ ನಡೆದಿಲ್ಲ ಎಂದು ಬಸವರಾಜ ಬೊಮ್ಮಾಯಿ ಆರೋಪಿಸಿದರು.
“ಮನೆ ಕಳೆದುಕೊಂಡವರಿಗೆ ತಕ್ಷಣ 10 ಸಾವಿರ ರೂ. ಪರಿಹಾರ ನೀಡಬೇಕು, ಬೆಳೆ ನಾಶ ಆಗಿರುವುದಕ್ಕೆ ಪ್ರಾಥಮಿಕ ಸಮೀಕ್ಷೆ ಕೂಡ ಇನ್ನೂ ಆಗಿಲ್ಲ. ದೊಡ್ಡ ಪ್ರಮಾಣದಲ್ಲಿ ಪ್ರಾಣಹಾನಿ ಆಗಿದೆ, ಆದರೆ ಸರ್ಕಾರ ಇದನ್ನು ಗಮನಿಸುತ್ತಿಲ್ಲ. ಯಾವ ಸಚಿವರೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ಬರಪೀಡಿತ ಪ್ರದೇಶಗಳಿಗೆ ಬೇರೆಯ ಬೆಳೆ ಬೆಳೆಯಲು ಬೀಜ ಗೊಬ್ಬರ ಕೊಡುವ ವ್ಯವಸ್ಥೆ ಆಗಿಲ್ಲ. ಸರ್ಕಾರ ಕೇವಲ ರಾಜಕಾರಣದಲ್ಲಿ ನಿರತವಾಗಿದೆ” ಎಂದು ಕುಟುಕಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಸಚಿವರು ಹಾಗೂ ಶಾಸಕರ ನಡುವೆ ಇರುವ ಸಮಸ್ಯೆ ಬಗೆಹರಿಸಲು ಮುಖ್ಯಮಂತ್ರಿಗಳು ಸಮಯ ಕಳೆಯುತ್ತಿದ್ದಾರೆ ಎಂದು ಬೊಮ್ಮಾಯಿ ದೂರಿದರು.
ರಾಜ್ಯದ ಜನರು ಇಂದು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ, ಅವರ ನೆರವಿಗೆ ಸರ್ಕಾರ ಧಾವಿಸುತ್ತಿಲ್ಲ. ಕೂಡಲೇ ಎಲ್ಲಾ ಸಚಿವರು ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ಕೊಡಬೇಕು. ಸಾವು ನೋವು ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳಬೇಕು ಎಂದು ಆಗ್ರಹಿಸಿದರು.
“ಈ ಸರ್ಕಾರ ಸಂಪೂರ್ಣವಾಗಿ ವರ್ಗಾವಣೆ ದಂಧೆಯಲ್ಲಿ ತೊಡಗಿದೆ. ಇದಕ್ಕಾಗಿ ಸರ್ಕಾರದಲ್ಲಿ ಪೈಪೋಟಿ ನಡೆಯುತ್ತಿದೆ. ವರ್ಗಾವಣೆಯ ಪೈಪೋಟಿ ಹಿನ್ನೆಲೆ ಇತ್ತೀಚೆಗೆ ಸಭೆ ನಡೆದಿತ್ತು ಎಂದು ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಮುಂಬರುವ ಲೋಕಸಭೆ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿದೆ. ಈಗಾಗಲೇ ತಯಾರಿ ಮಾಡಿಕೊಳ್ಳುತ್ತಿದ್ದೇವೆ, ಅದಕ್ಕಾಗಿ ಜಿಲ್ಲಾವಾರು ಸಭೆ ಮಾಡಲಿದ್ದೇವೆ. ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಶೀಘ್ರ ಘೋಷಣೆ ಆಗಲಿದೆ ಎಂದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇಯ ಹೆಚ್ಚುವರಿ ಕಾಮಗಾರಿಗೆ 158.81 ಕೋಟಿ ರೂ ; ಸಿಎಂ
ಬೆಳಗಾವಿಯಲ್ಲಿ ವಿಕಲಾಂಗನ ಮೇಲೆ ಪೊಲೀಸರ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಸಮಾಜಘಾತುಕ ಶಕ್ತಿಗಳು ಈಗ ನಿರ್ಭಯವಾಗಿ ಓಡಾಡುತ್ತಿದ್ದಾರೆ. ಸಮಾಜಘಾತುಕ ಶಕ್ತಿಗಳಿಗೆ ಈ ಸರ್ಕಾರವೇ ಬೆಂಬಲ ನೀಡುತ್ತಿದೆ. ಅವರಿಗೆ ಪೊಲಿಸರ ಭಯ ಇಲ್ಲವಾಗಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು ಸಾಮಾನ್ಯ ಜನ, ಹೆಣ್ಣುಮಕ್ಕಳ ಮೇಲೆಯೂ ಹಲ್ಲೆ ನಡೆಯುತ್ತಿದೆ” ಎಂದು ಟೀಕಿಸಿದರು.
ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೂಡಲೇ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಜನರೇ ಸರ್ಕಾರದ ವಿರುದ್ಧ ದಂಗೆ ಎಳಲಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.