ಬಳ್ಳಾರಿ: ಕೇರಳದ(Kerala) ಶಬರಿಮಲೆಯಲ್ಲಿರುವ ಅಯ್ಯಪ್ಪಸ್ವಾಮಿ ದೇವಸ್ಥಾನದ(Sabarimala Ayyappa Temple) ಚಿನ್ನ ಕಳ್ಳತನ ಪ್ರಕರಣಕ್ಕೆ(Gold Theft Case) ಸಂಬಂಧಿಸಿದಂತೆ ಬಳ್ಳಾರಿ ಮೂಲದ ಚಿನ್ನದ ವ್ಯಾಪಾರಿ ಗೋವರ್ಧನ್ ಬಂಧನವಾಗಿದೆ.

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ದ್ವಾರಪಾಲಕರ ವಿಗ್ರಹಗಳ ಚಿನ್ನದ ಲೇಪನ ಕಾರ್ಯದ ಸಮಯದಲ್ಲಿ ಸುಮಾರು 4.5 ಕೆಜಿ ಚಿನ್ನದ ಕವಚಗಳು ನಾಪತ್ತೆಯಾಗಿರುವ ಬಗ್ಗೆ ಇತ್ತೀಚೆಗೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೇರಳ ಹೈಕೋರ್ಟ್, ವಿಶೇಷ ತನಿಖಾ ತಂಡ ರಚನೆಗೆ ಆದೇಶಿಸಿತ್ತು.

ಕೋರ್ಟ್ ಆದೇಶದಂತೆ ತನಿಖೆಗಿಳಿದ ಎಸ್ಐಟಿ ತಂಡ ಬಳ್ಳಾರಿ ರೊದ್ದಂ ಜ್ಯುವೆಲ್ಲರಿ ಮಾಲೀಕರಾದ ಗೋವರ್ಧನ್ ಅವರನ್ನು ಬಂಧಿಸಿದೆ. ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ನಿಂದ ಗೋವರ್ಧನ್ ಚಿನ್ನ ಖರೀದಿಸಿರುವ ಆರೋಪದ ಮೇಲೆ ವಿಚಾರಣೆ ನಡೆಸಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಈ ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ ಸದ್ಯ 9ಕ್ಕೆ ಏರಿಕೆಯಾಗಿದ್ದು, ತನಿಖೆ ಮುಂದುವರಿದಿದೆ.






