ಬೆಂಗಳೂರು: ಕಾವೇರಿ ನದಿ ನೀರು ವಿಚಾರವಾಗಿ ಕರ್ನಾಟಕದಲ್ಲಿ ಪ್ರತಿಭಟನೆ ಜೋರಾಗಿದೆ. ಕನ್ನಡ ಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಇನ್ನೊಂದೆಜ್ಜೆ ಮುಂದೆ ಹೋಗಿ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್ಗೆ ಕರೆ ಕೊಟ್ಟಿವೆ. ಈ ಬಂದ್ಗೆ ಒಂದಲ್ಲ ಎರಡಲ್ಲ ಬರೋಬ್ಬರಿ 150 ಸಂಘಟನೆಗಳು ಬೆಂಬಲ ನೀಡಿವೆ. ಹೀಗಾಗಿ ನಾಳೆ(ಮಂಗಳವಾರ) ಬೆಂಗಳೂರು ಸಂಪೂರ್ಣ ಸ್ತಬ್ಧವಾಗಲಿದೆ. ಇನ್ನು ಈ ಬಂದ್ಗೆ ಕರೆ ನೀಡಿರುವ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಪ್ರತಿಭಟನೆ ಮಾಡುವುದಕ್ಕೆ, ರಾಜ್ಯದ ಹಿತ ಕಾಪಾಡುವುದಕ್ಕೆ ನಾವು ಎಲ್ಲ ರೀತಿಯ ಸಹಕಾರ ಕೊಡುತ್ತೇವೆ ಎಂದಿದ್ದಾರೆ. ಆದ್ರೆ, ಯಾವುದೇ ಶಾಂತಿಯುತವಾಗಿ ಮಾಡಬೇಕೆಂದು ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಸೆಪ್ಟೆಂಬರ್ 25) ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಪ್ರತಿಭಟನೆ ಮಾಡುವುದಕ್ಕೆ, ರಾಜ್ಯದ ಹಿತ ಕಾಪಾಡುವುದಕ್ಕೆ ನಾವು ಎಲ್ಲ ರೀತಿಯ ಸಹಕಾರ ಕೊಡುತ್ತೇವೆ. ನಮ್ಮ ನೆಲ, ಜಲ, ಭಾಷೆ ಎಲ್ಲರು ಉಳಿಸಿಕೊಳ್ಳಬೇಕು. ಯಾವುದೇ ಪಾರ್ಟಿ ಆದರೂ ಉಳಿಸಿಕೊಳ್ಳಬೇಕು. ನಿಮ್ಮ ಹೋರಾಟಕ್ಕೆ ನಾವು ಅಡಚಣೆ ಮಾಡುವುದಿಲ್ಲ. ಆದರೆ ಎಲ್ಲರೂ ಶಾಂತಿ ಕಾಪಾಡಬೇಕು, ಜನರಿಗೆ ತೊಂದರೆ ಆಗಬಾರದು ಎಂದು ಮನವಿ ಮಾಡಿದರು.