ಬೆಂಗಳೂರು: ರಾಜ್ಯ ಸರ್ಕಾರದ ‘ಸ್ವಚ್ಛ ಬೆಂಗಳೂರು’ ಅಭಿಯಾನಕ್ಕೆ ಬೆಸ್ಕಾಂ (BESCOM) ಕೈಜೋಡಿಸಿದ್ದು, ನಗರದಾದ್ಯಂತ ವಾರಾಂತ್ಯದಲ್ಲಿ ವಿಶೇಷ ಸ್ವಚ್ಛತಾ ಹಾಗೂ ನಿರ್ವಹಣಾ ಅಭಿಯಾನವನ್ನು ಹಮ್ಮಿಕೊಂಡಿದೆ.

ಶನಿವಾರ ರಾತ್ರಿ ಆರಂಭಗೊಂಡಿರುವ ಈ ವಿಶೇಷ ಅಭಿಯಾನ ಭಾನುವಾರ ಸಂಜೆವರೆಗೂ ಮುಂದುವರಿಯಲಿದ್ದು, ಬೆಸ್ಕಾಂ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಮೂಲಸೌಕರ್ಯಗಳ ಸುತ್ತಮುತ್ತಲಿನ ಸ್ವಚ್ಛತೆ, ನಿರ್ವಹಣೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ಅಡೆತಡೆಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗಿದೆ.


ಅಭಿಯಾನದಲ್ಲಿ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಎನ್. ಶಿವಶಂಕರ, ಭಾ.ಆ.ಸೇ. ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸುವುದರ ಜೊತೆಗೆ ಸಿಬ್ಬಂದಿಗೆ ಅಗತ್ಯ ಮಾರ್ಗದರ್ಶನ ನೀಡಿದ್ದಾರೆ. ವಾರಾಂತ್ಯದಲ್ಲಿ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ನಿಯೋಜಿಸಿ ವಿವಿಧ ಪ್ರದೇಶಗಳಲ್ಲಿ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಬೆಸ್ಕಾಂ ವ್ಯಾಪ್ತಿಯ ಮೂಲಸೌಕರ್ಯಗಳ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಲಾಗಿದೆ.

ಬೆಸ್ಕಾಂನ ಲೈನ್ಮೆನ್ಗಳು ಹಾಗೂ ವಿವಿಧ ವಿಭಾಗಗಳ ಸಿಬ್ಬಂದಿ ವಿದ್ಯುತ್ ಕಂಬಗಳು, ಟ್ರಾನ್ಸ್ಫಾರ್ಮರ್ ಕೇಂದ್ರಗಳು ಮತ್ತು ಇತರೆ ವಿದ್ಯುತ್ ಮೂಲಸೌಕರ್ಯಗಳ ಸುತ್ತಮುತ್ತ ಸ್ವಚ್ಛತೆ ಹಾಗೂ ನಿರ್ವಹಣಾ ಕಾರ್ಯದಲ್ಲಿ ತೊಡಗಿದ್ದಾರೆ. ಇದರ ಜತೆಗೆ ಜಿಎಸ್ ಆಪರೇಟಿಂಗ್ ರಾಡ್ಗಳ ಮಾರ್ಪಾಡು ಕಾರ್ಯ, ವಿದ್ಯುತ್ ಉಪಕರಣಗಳ ಪರಿಶೀಲನೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಸಂಬಂಧಿಸಿದ ಅಗತ್ಯ ನಿರ್ವಹಣಾ ಕೆಲಸಗಳನ್ನು ಕೈಗೊಳ್ಳಲಾಗುತ್ತಿದೆ. ವಿದ್ಯುತ್ ಮೂಲಸೌಕರ್ಯಗಳ ಸುತ್ತಮುತ್ತ ಅನಗತ್ಯವಾಗಿ ಬೆಳೆದಿರುವ ಮರಗಿಡಗಳ ತೆರವು ಹಾಗೂ ಇತರೆ ಅಡೆತಡೆಗಳನ್ನು ತೆರವುಗೊಳಿಸುವ ಮೂಲಕ ನಿರ್ವಹಣಾ ಕಾರ್ಯಗಳಿಗೆ ಅನುಕೂಲ ಕಲ್ಪಿಸಲಾಗುತ್ತಿದೆ.







