ದೆಹಲಿಯಲ್ಲಿ ಭಾರೀ ಮಳೆಯ ನಂತರ ಜಿ 20 ಶೃಂಗಸಭೆ ನಡೆಯುವ ಸ್ಥಳ ಭಾರತ ಮಂಟಪಂ ವೇದಿಕೆಯು ಜಲಾವೃತವಾಗಿದೆ. ಈ ಕುರಿತು ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜನ ಖರ್ಗೆ ಅವರಿಗೆ ಶೃಂಗಸಭೆ ಔತಣಕೂಟಕ್ಕೆ ಆಹ್ವಾನ ನೀಡಿದಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಇದು ಮತ್ತೊಂದು ಅಸ್ತ್ರವಾದಂತಾಗಿದೆ.
ಭಾರತ ಮಂಟಪಂ ಜಲಾವೃತದ ದೃಶ್ಯವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದೆ.
ರಾಹುಲ್ ಗಾಂಧಿ ತಮ್ಮ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳುವ ಮೂಲಕ ಪ್ರಗತಿಯ ಪೊಳ್ಳು ಭರವಸೆಗಳು ಸ್ಪಷ್ಟವಾಗಿವೆ. 2,700 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದ್ದ ವೇದಿಕೆ ಕೇವಲ ಒಂದು ದಿನದ ಮಳೆಗೆ ಜಲಾವೃತವಾಗಿದೆ ಎಂದು ಟೀಕಿಸಿದ್ದಾರೆ.
ಯುವ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಬಿ.ವಿ., ಕೇಂದ್ರದ ಭರವಸೆಗಳನ್ನು ಉಲ್ಲೇಖಿಸಿ ಅಭಿವೃದ್ಧಿ ಈಜುತ್ತಿದೆ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.
ಈ ನಡುವೆ ರಾಷ್ಟ್ರ ರಾಜಧಾನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ತೀವ್ರತೆಯ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.