ಬೆಂಗಳೂರು: ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಸಿಗುತ್ತಿದ್ದಂತೆ ಭವಾನಿ ರೇವಣ್ಣ ಎಸ್ ಐಟಿ ಎದುರು ಹಾಜರಾಗಿದ್ದಾರೆ.
ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್, ಶುಕ್ರವಾರ ಮಧ್ಯಾಹ್ನ ಒಂದು ಗಂಟೆಗೆ ಎಸ್ಐಟಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಅಲ್ಲದೇ ವಿಚಾರಣೆಯ ಬಳಿಕ 5 ಗಂಟೆಗಳ ಕಾಲ ಮಾತ್ರ ಅವರನ್ನು ಕಸ್ಟಡಿಯಲ್ಲಿ ಇರಿಸಿಕೊಳ್ಳಬಹುದು ಎಂದು ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ವಕೀಲ ಅರುಣ್ ಜೊತೆ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗಿದ್ದಾರೆ.
ನಿರೀಕ್ಷಣಾ ಜಾಮೀನು ನೀಡಿರುವ ಕೋರ್ಟ್, ಭವಾನಿ ಅವರನ್ನು ಎಸ್ಐಟಿ ಬಂಧಿಸಬಾರದು. ಕೆ ಆರ್ ನಗರ ತಾಲೂಕು ಮತ್ತು ಹಾಸನಕ್ಕೆ ಭವಾನಿ (Bhavani Revanna) ಪ್ರವೇಶಿಸಿಬಾರದು. ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಷರತ್ತು ವಿಧಿಸಿದೆ. ಅಲ್ಲದೇ, ವಿಚಾರಣೆಯನ್ನು ಕೋರ್ಟ್ ವಾರಕ್ಕೆ ಮುಂದೂಡಿದೆ.
ಹಿಂದೆ ವಿಶೇಷ ತನಿಖಾ ತಂಡ (SIT) ನೋಟಿಸ್ ಹಾಗೂ ಬಂಧನ ವಾರೆಂಟ್ ನೀಡಿದರೂ ಭವಾನಿ ರೇವಣ್ಣ ನಾಪತ್ತೆಯಾಗಿದ್ದರು. ಅಜ್ಞಾತ ಸ್ಥಳದಲ್ಲಿ ಇದ್ದುಕೊಂಡೇ ಜಾಮೀನು ಅರ್ಜಿ ಸಲ್ಲಿಸಿದ್ದರು. ಕೋರ್ಟ್ ಆದೇಶದ ಬೆನ್ನಲ್ಲೇ ಭವಾನಿ ಅವರು ಎಸ್ಐಟಿ ಮುಂದೆ ಹಾಜರಾಗಿದ್ದಾರೆ.