ಬೆಂಗಳೂರು: ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಬಿಡದಿ ಬೃಹತ್ ಪಾದಯಾತ್ರೆಗೆ ಮಿತ್ರಪಕ್ಷ ಬಿಜೆಪಿ ನೈತಿಕ ಬೆಂಬಲ ವ್ಯಕ್ತಪಡಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಜೆಡಿಎಸ್ ಮತ್ತು ಬಿಜೆಪಿ ಹಿರಿಯ ನಾಯಕರ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡದಿ ಟೌನ್ ಶಿಪ್ ಯೋಜನೆಯ ಬಗ್ಗೆ ನಾವು ಅತ್ಯಂತ ವಿವರವಾಗಿ ಚರ್ಚೆ ನಡೆಸಿದ್ದೇವೆ ಹಾಗೂ ಮುಂಬರುವ ವಿಧಾನಕಲಾಪದಲ್ಲಿ ಪ್ರಸ್ತಾಪಿಸಲು ಉದ್ದೇಶಿಸಿರುವ ವಿವಿಧ ವಿಷಯಗಳ ಬಗ್ಗೆ ಸಮಾಲೋಚಿಸಿದ್ದೇವೆ. ಬಿಡದಿ ಪಾದಯಾತ್ರೆಯ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ವರೆಗೂ ಹಮ್ಮಿಕೊಳ್ಳಲಾಗಿದೆ. ನಿಖಿಲ್ ಕುಮಾರಸ್ವಾಮಿ ಅವರು ಪಾದಯಾತ್ರೆಯ ನೇತೃತ್ವ ವಹಿಸಿದ್ದಾರೆ. ಬಿಜೆಪಿ ನಾಯಕರು ಕೂಡ ಪಾದಯಾತ್ರೆಯ ಬಗ್ಗೆ ಅತ್ಯಂತ ಸಕಾರಾತ್ಮಕ ಮನಸ್ಸು ಹೊಂದಿದ್ದು, ಅವರು ಕೂಡ ಪಾದಯಾತ್ರೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳಿಸಿದ್ದಾರೆ ಎಂದು ತಿಳಿಸಿದರು.

ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್, ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಸೇರಿದಂತೆ ಬಿಜೆಪಿಯ ಅನೇಕ ಹಿರಿಯ ನಾಯಕರು ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ, ಮುಂಬರುವ ವಿಧಾನಮಂಡಲ ಕಲಾಪದಲ್ಲಿ ಬಿಡದಿ ಟೌನ್ಶಿಪ್ ವಿಷಯ ಹಾಗೂ ನೈಸ್ ಯೋಜನೆಯ ಅಕ್ರಮಗಳ ಬಗ್ಗೆ ಧ್ವನಿ ಎತ್ತಲು ನಿರ್ಧರಿಸಲಾಗಿದೆ. ಈ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಒಮ್ಮತದಿಂದ ಹೋರಾಟ ನಡೆಸಲಿದೆ ಎಂದು ಸಚಿವ ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದು ಸರಿ ಇಲ್ಲ ಎಂಬುದಕ್ಕೆ ಅನೇಕ ನಿದರ್ಶನಗಳು ಇವೆ. ಸಂಪುಟ ವಿಸ್ತರಣೆಗೆ ತಿಂಗಳಗಟ್ಟಲೆ ಸಮಯ ತೆಗೆದುಕೊಂಡರು. ಈಗ ಖಾತೆ ಹಂಚಿಕೆ ಕೂಡ ನಡೆದಿಲ್ಲ. ಸರ್ಕಾರದ ಕಾರ್ಯವೈಖರಿ ನೋಡಿದರೆ ತುಂಬಾ ನಿರಾಶೆಯಾಗುತ್ತದೆ, ಖಾತೆ ಹಂಚಿಕೆ ವಿಷಯ ಕಾಂಗ್ರೆಸ್ ದಿವಾಳಿತನ ತೋರುತ್ತದೆ. ರಾಜ್ಯ ಹಿಂದೆಂದೂ ಸಿಲುಕಿರದಷ್ಟು ತೀವ್ರ ಬರಕ್ಕೆ ತುತ್ತಾಗಿದೆ. ಸರ್ಕಾರ ಜನರಿಗೆ ನೆರವಾಗುವಲ್ಲಿ ವಿಫಲವಾಗಿದೆ. ಈ ಬಗ್ಗೆಯೂ ಪ್ರಸ್ತಾಪಿಸಿ ಹೋರಾಟ ಮಾಡಲು ನಿರ್ಧರಿಸಲಾಯಿತು ಎಂದು ಮಾಹಿತಿ ನೀಡಿದರು.

ಬಿಡದಿ ವಿಚಾರದಲ್ಲಿ ಸದನದಲ್ಲೂ ಚರ್ಚೆ ಆಗಲೇಬೇಕು. ರೈತರ ಮಹಿಳೆಯರ ಹೋರಾಟವನ್ನು ಇಡೀ ರಾಜ್ಯ ನೋಡುತ್ತಿದೆ. ರೈತರು ಭೂಮಿ ಕೊಡಲು ತಯಾರಿಲ್ಲ. ಕೇವಲ ರೈತರ ಭೂಮಿಯನ್ನು ಲೂಟಿ ಒಡೆಯಲು ಯೋಜನೆಯನ್ನು ಮಾಡುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಜೊತೆ ವಿಸ್ತೃತವಾಗಿ ಚರ್ಚೆ ನಡೆಸಿದ್ದೇನೆ. ಇದಲ್ಲದೇ, ವಾಲ್ಮೀಕಿ ಹಗರಣ, ಬೆಂಗಳೂರಿನಲ್ಲಿ ಅಸಮರ್ಪಕ ಕಸ ವಿಲೇವಾರಿ, ಕೆಪಿಎಸ್ಸಿ ಅಕ್ರಮಗಳು, ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳು, ಗೃಹಲಕ್ಷ್ಮಿ ಯೋಜನೆಯ ಹಣ ದುರ್ಬಳಕೆ ಮುಂತಾದ ವಿಷಯಗಳ ಬಗ್ಗೆ ಎರಡು ಪಕ್ಷಗಳು ದನಿಯ ಎತ್ತಲಿವೆ ಎಂದು ಕುಮಾರಸ್ವಾಮಿ ಹೇಳಿದರು.







