ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಸ್ಸಾಂ ಬಿಜೆಪಿ ಪೊಲೀಸರು ಹಾಗೂ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.ಅಸ್ಸಾಂ ಬಿಜೆಪಿ ವಕ್ತಾರ ಪ್ರಾಂಜಲ್ ಕಲಿತಾ ಮಾತನಾಡಿ, ಕಾಂಗ್ರೆಸ್ ನಾಯಕರು ಸಂವಿಧಾನವನ್ನು ಗೌರವಿಸುತ್ತೇವೆ ಎಂದು ಹೇಳಿಕೊಂಡರೂ, ಅವರ ಹೇಳಿಕೆಗಳು ಮತ್ತು ನಡೆಗಳು ಸಾಂವಿಧಾನಿಕ ಮೌಲ್ಯಗಳಿಗೆ ವಿರುದ್ಧವಾಗಿವೆ ಎಂದು ಆರೋಪಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುವಾಹಟಿಯ ಬಸಿಷ್ಠ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮತ್ತೊಂದು ದೂರು ಚುನಾವಣಾ ಆಯೋಗಕ್ಕೂ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.ಇತ್ತೀಚೆಗೆ ನಡೆದ ಪ್ರಚಾರ ಸಭೆಯಲ್ಲಿ ಖರ್ಗೆ ಅವರು ಆರ್ಎಸ್ಎಸ್ ಮತ್ತು ಬಿಜೆಪಿಯನ್ನು ನಿಷೇಧಿಸುವಂತೆ ಹೇಳಿಕೆ ನೀಡಿರುವುದನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಈ ಹೇಳಿಕೆಗಳು ರಾಜಕೀಯ ಅಸಹಿಷ್ಣುತೆಯನ್ನು ತೋರಿಸುತ್ತವೆ ಮತ್ತು ಸಮಾಜದ ಸೌಹಾರ್ದತೆಗೆ ಧಕ್ಕೆಯಾಗುವಂತಿವೆ ಎಂದು ಬಿಜೆಪಿ ಆರೋಪಿಸಿದೆ.

ಕಾಂಗ್ರೆಸ್ ಪಕ್ಷ ರಾಜಕೀಯ ಲಾಭಕ್ಕಾಗಿ ಧಾರ್ಮಿಕ ವಿಚಾರಗಳನ್ನು ಬಳಸಿಕೊಳ್ಳುತ್ತಿದೆ ಎಂಬ ಟೀಕೆಯನ್ನೂ ಬಿಜೆಪಿ ಮಾಡಿದ್ದು, ಖರ್ಗೆ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.126 ಸದಸ್ಯರ ಅಸ್ಸಾಂ ವಿಧಾನಸಭೆಗೆ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಮತ ಎಣಿಕೆ ನಡೆಯಲಿದೆ.






