ಶಿವಮೊಗ್ಗ: ಬಿಜೆಪಿ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಹವಾಯಿ ಚಪ್ಪಲಿ ಧರಿಸುವ ಕಡು ಬಡವರು ಕೂಡ ವಿಮಾನದಲ್ಲಿ ಪ್ರಯಾಣಿಸಬೇಕು. ಇದು ಬಿಜೆಪಿ ಸರ್ಕಾರದ ಧ್ಯೇಯವಾಗಿದೆ.
ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ರಾಷ್ಟ್ರಕವಿ ಕುವೆಂಪು ಅವರನ್ನು ಸ್ಮರಿಸಿ, ಕನ್ನಡದಲ್ಲಿಯೇ ಭಾಷಣ ಆರಂಭಿಸಿದರು.
ಶಿವಮೊಗ್ಗದ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ಎಂದು ಹೇಳಿದರು.
ಈ ವೇಳೆ ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ ಮೋದಿಯವರು, ನೆರದಿದ್ದ ಜನರಿಗೆ ತಮ್ಮ ಮೊಬೈಲ್ ಟಾರ್ಚ್ ಆನ್ ಮಾಡಿ ಬಿಎಸ್ ಯಡಿಯೂರಪ್ಪನವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಲು ಹೇಳಿದರು. ಬಳಿಕ ಬಿಎಸ್ ಯಡಿಯೂರಪ್ಪ ಅವರನ್ನು ಕೊಂಡಾಡಿದರು.

ಬಿಎಸ್ವೈ ವಿಧಾನಸಭೆಯಲ್ಲಿ ಭಾಷಣ ಮಾಡಿದರು. ಇದು ಎಲ್ಲರಿಗೂ ಪ್ರೇರಣೆ ನೀಡುವಂಥದ್ದಾಗಿದ್ದೆ. 50 ವರ್ಷಗಳಿಂದ ಯಡಿಯೂರಪ್ಪನವರು ಜನಸೇವೆಯಲ್ಲಿದ್ದಾರೆ. ಕರ್ನಾಟಕದ ಅಭಿವೃದ್ಧಿ ರಥದಲ್ಲಿ ಅಭಿವೃದ್ಧಿ ಪಥವಿದೆ. ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿಯ ರಥ ಸಾಗುತ್ತಿದೆ. ವಿಮಾನಯಾನ ಕ್ಷೇತ್ರದಲ್ಲಿ ಭಾರತ ಸಾಕಷ್ಟು ಅಭಿವೃದ್ಧಿ ಹೊಂದಿದೆ ಎಂದು ತಿಳಿಸಿದರು.
ಅಭಿವೃದ್ಧಿ ರಥದಲ್ಲಿ ಕರ್ನಾಟಕ ಸಾಗುತ್ತಿದೆ. ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿಯ ರಥ ಸಾಗುತ್ತಿದೆ. ವಿಮಾನಯಾನ ಕ್ಷೇತ್ರದಲ್ಲಿ ಭಾರತ ಸಾಕಷ್ಟು ಅಭಿವೃದ್ಧಿ ಹೊಂದಿದೆ. 2014ರಕ್ಕಿಂತ ಮೊದಲು ಕೇವಲ ದೊಡ್ಡ ನಗರಗಳಿಗೆ ಮಾತ್ರ ವಿಮಾನ ನಿಲ್ದಾಣ ಸೀಮಿತವಾಗಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸಣ್ಣಪುಟ್ಟ ನಗರಗಳಲ್ಲಿಯೂ ಏರ್ಪೋರ್ಟ್ ಮಾಡಲಾಗುತ್ತಿದೆ. ಹಳ್ಳಿ ಹಳ್ಳಿಗೂ ಏರ್ಪೊರ್ಟ್ ಸಂಪರ್ಕ ಸಾಧ್ಯವಾಗಬೇಕು. ಹೀಗಾಗಿಯೇ 74 ವಿಮಾನ ನಿಲ್ದಾಣ ನಿರ್ಮಿಸಿದ್ದೇವೆ ಎಂದರು.
ಶಿವಮೊಗ್ಗ ಪಶ್ಚಿಮ ಘಟ್ಟದಲ್ಲಿ ಬರುವ ಮಲೆನಾಡಿನ ಹೆಬ್ಬಾಗಿಲು. ಇಲ್ಲಿ ನದಿ, ವನ್ಯ ಸಂಪತ್ತು ಅದ್ಭುತವಾಗಿದೆ. ಇಲ್ಲಿ ಜೋಗ್ ಜಲಪಾತ, ಆನೆಗಳ ಬಿಡಾರವೂ ಇದೆ. ಆಗುಂಬೆಯ ಸೂರ್ಯಾಸ್ತ ಯಾರು ಮರೆಯೋದಕ್ಕೆ ಸಾಧ್ಯವಿಲ್ಲ. ಗಂಗಾ ಸ್ನಾನ, ತುಂಗಾ ಪಾನ ಎಂದು ಉಕ್ತಿಯೇ ಇದೆ. ಸಿಗಂದೂರು ಚೌಡೇಶ್ವರಿ, ಕೋಟೆ ಆಂಜನೇಯ ದೇವಸ್ಥಾನವಿದೆ. ಇಲ್ಲಿಗೆ ವಿಮಾನ ಪ್ರಯಾಣದ ಸಂಪರ್ಕ ಅವಶ್ಯಕವಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ಅಭಿವೃದ್ಧಿ ಆಗಲಿದೆ. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲು ಮಾರ್ಗ ನಿರ್ಮಾಣವಾದ್ರೆ ಸಾಕಷ್ಟು ಲಾಭವಾಗಲಿದೆ. ಹಾವೇರಿವರೆಗೂ ಜನರಿಗೆ ಸಂಪರ್ಕ ಸಾಧ್ಯವಾಗುತ್ತದೆ ಎಂದು ಹೇಳಿದರು.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ಮೋದಿಯವರು ವಾಗ್ದಾಳಿ ನಡೆಸಿದರು.






