ಕಾವೇರಿ ನದಿ ನೀರಿನ ವಿಚಾರದಲ್ಲಿ ಬಿಜೆಪಿ ರಾಜಕೀಯ ಬೇಳೆ ಬೇಯಿಸಿ ಕೊಳ್ಳುತ್ತಿದೆ ಎಂದು ಸಚಿವ ಡಾ.ಎಚ್.ಸಿ ಮಹದೇವಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗಲೂ ತಮಿಳುನಾಡಿಗೆ ನೀರು ಬಿಡಲಾಗಿದೆ. ಹೀಗಾಗಿ ಬಿಜೆಪಿ ಈಗ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ ಎಂದು ಹೇಳಿದರು.
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗು ನ್ಯಾಯಾಲಯದ ನಿರ್ದೇಶನದಂತೆ ರಾಜ್ಯ ಸರ್ಕಾರ ಸಂಕಷ್ಟ ಸೂತ್ರದಂತೆ ನಡೆದುಕೊಳ್ಳುತ್ತಿದೆ. ಮಳೆಯಾಗದ ಸಂದರ್ಭದಲ್ಲಿ ಸಂಕಷ್ಟ ಸೂತ್ರದಡಿ ನೀರು ಹಂಚಿಕೆ ಮಾಡಿಕೊಳ್ಳಬೇಕಿದೆ. ಆಗಸ್ಟ್ 23ರಂದು ನಡೆಯುವ ಸರ್ವ ಪಕ್ಷಗಳ ಸಭೆಯಲ್ಲಿ ಈ ಬಗ್ಗೆ ಒಮ್ಮತದ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಎಚ್.ಸಿ.ಮಹದೇವಪ್ಪ ತಿಳಿಸಿದರು.
ಕಾವೇರಿ ಕರ್ನಾಟಕದ ಉಸಿರು. ನೂರಾರು ವರ್ಷಗಳಿಂದ, ಮದ್ರಾಸ್ ಪ್ರಾಂತ್ಯ ಇದ್ದಾಗಿನನಿಂದಲೂ ನಮಗೂ ತಮಿಳುನಾಡಿಗೂ ವ್ಯಾಜ್ಯ ನಡೆಯುತ್ತಲೇ ಇದೆ. ಸುಪ್ರೀಂ ಕೋರ್ಟ್ನ ಆದೇಶದ ಮೇರೆಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾಗಿದೆ ಎಂದು ಹೇಳಿದರು.
ಯಾರು ಯಾರಿಗೆ ಎಷ್ಟೆಷ್ಟು ನೀರು ಹಂಚಿಕೆ ಆಗಬೇಕೆಂಬುದು ತೀರ್ಮಾನವಾಗಿದೆ. ಕೋರ್ಟ್ನ ತೀರ್ಮಾನಕ್ಕೆ ಎಲ್ಲರೂ ಬದ್ದರಾಗಿದ್ದೇವೆ. ಬರದ ಪರಿಸ್ಥಿತಿಯಲ್ಲಿ ಎಲ್ಲರೂ ಸಂಕಷ್ಟವನ್ನು ಹಂಚಿಕೊಳ್ಳಬೇಕಿದೆ. ಈ ಬಾರಿ ಕಡಿಮೆ ಮಳೆ ಬಿದ್ದಿದೆ, ನಮ್ಮ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀರಾ ಕಡಿಮೆ ಇದೆ. ಕಟ್ಟು ಮಾದರಿಯಲ್ಲಿ ನೀರು ನೀಡಬೇಕೆಂದು ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿದೆ. ವೈಯುಕ್ತಿಕ ಹಿತಾಸಕ್ತಿಯಿಂದ ಯಾವುದೇ ಸರ್ಕಾರ ಕೆಲಸ ಮಾಡುವುದಿಲ್ಲ. ರಾಜ್ಯದ ರೈತರ ಹಿತದೃಷ್ಟಿಯಿಂದಲೇ ಕೆಲಸ ಮಾಡಬೇಕು. ಇದರಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದರು.