ಕುಖ್ಯಾತ ರೌಡಿ ಶೀಟರ್ ಸೈಲೆಂಟ್ ಸುನೀಲ ಬಿಜೆಪಿ ಸೇರ್ಪಡೆ ಕುರಿತು ಎದ್ದಿದ ಬಿರುಗಾಳಿಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಸ್ಪಷ್ಟನೆ ನೀಡಿದ್ದಾರೆ ಪಕ್ಷ ಸೇರ್ಪಡೆಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ ಮತ್ತು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.
ಸೋಮವಾರ ಸುನೀಲ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ಭಾಗವಹಿಸಿರುವ ಬಗ್ಗೆ ವಿವರಣೆ ಪಡೆಯಲಾಗುವುದು ಮತ್ತು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಆಗಬಾರದು ಮತ್ತು ಪಕ್ಷದ ಗಮನಕ್ಕೆ ಎಲ್ಲವನ್ನ ತರಬೇಕು ಎಂದು ಸೂಚಿಸಿದ್ದಾರೆ.
ಬಿಜೆಪಿ ವ್ಯಕ್ತಿಗಳ ನಿರ್ಮಾಣದ ಮೂಲಕ ದೇಶ ನಿರ್ಮಾಣ ಕಾರ್ಯ ಮಾಡುತ್ತಿದೆ ಅಪರಾಧ ಹಿನ್ನಲೆ ಇರುವವರನ್ನು ಪಕ್ಷ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಮಾತನಾಡುವ ವೇಳೆ ತಿಳಿಸಿದ್ದಾರೆ.
ಇನ್ನು ವಿವಾದದ ಕುರಿತು ಟ್ವೀಟ್ ಮಾಡಿ ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ ಕಾಂಗ್ರೆಸ್ ಪಕ್ಷದ ಟ್ವೀಟ್ ಗೆ ಸಂಬಂಧಿಸಿದಂತೆ ರೌಡಿ ಶೀಟರ್ ಗಳ ಕುರಿತಾದ ಪತ್ರಕರ್ತರ ಪ್ರಶ್ನೆಗೆ ನಾನು ಉತ್ತರಿಸಿದ್ದೇನೆ. ಇದನ್ನು ಇಷ್ಟಕ್ಕೆ ಸೀಮಿತವಾಗಿ ನೋಡಬೇಕು. ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ.ನಮ್ಮ ಪಕ್ಷದ ಅಧ್ಯಕ್ಷರು ಈಗಾಗಲೇ ತಿಳಿಸಿರುವಂತೆ ಸೈಲೆಂಟ್ ಸುನೀಲ್ ರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.