
ಬೆಳಗಾವಿ ತಹಶೀಲ್ದಾರ್ ಕಚೇರಿ SDA ಆತ್ಮಹತ್ಯೆ ವಿಚಾರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಹೆಸರು ಬರೆದಿರುವ ಬಗ್ಗೆ ವಿಜಯಪುರದಲ್ಲಿ ಶಾಸಕ ಬಸನಗೌಡ ಯತ್ನಾಳ್ ಮಾತನಾಡಿ, ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಬಹಳಷ್ಟು ದೂರುಗಳಿವೆ. ಲಕ್ಷ್ಮಿ ಹೆಬ್ಬಾಳ್ಕರ್ ಭ್ರಷ್ಟಾಚಾರದ ತುತ್ತ ತುದಿಯಲ್ಲಿದ್ದಾರೆ. ಹಿಂದೆ ಮಾಡಿದ ಪಾಪದ ಫಲ ಕಾಡ್ತಿದೆ. ಬೆಳಗಾವಿಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಐದಾರು ಸಾವಿರ ಕೆಲಸಕ್ಕೂ ಲಂಚ ಕೊಡಬೇಕಿದೆ. ಪಿಎ ಹೆಸರು ಬರೆದಿರೋದಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಹೊಣೆ, ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆ ಕೊಡಬೇಕು ಎಂದಿದ್ದಾರೆ.

ಡೆತ್ ನೋಡ್ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪಿಎ ಸೋಮು ಹೆಸರು ಪ್ರಸ್ತಾಪ ಮಾಡಿರುವ ಬಗ್ಗೆ ಶೋಭಾ ಕರಂದ್ಲಾಜೆ ಮಾತನಾಡಿ, ತಕ್ಷಣವೇ ಸಿಎಂ ಸಿದ್ದರಾಮಯ್ಯ, ಲಕ್ಷ್ಮೀ ಹೆಬ್ಬಾಳಕರ್ ರಾಜಿನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಇದು ಹೊಸದಲ್ಲ.. ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮುಡಾ ಪ್ರಕರಣ ಹೊರಗೆ ಬಂತು. ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿ, ಬೆಂಗಳೂರು, ಉಡುಪಿಯಲ್ಲೂ ಕಮಿಷನ್ ಅಂಗಡಿ ತೆರೆದಿದ್ದಾರೆ ಎಂದಿದ್ದಾರೆ.

ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಳಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್ ಭೇಟಿ ನೀಡಿದ್ದಾರೆ. ಮೃತ SDA ಕುಟುಂಬಸ್ಥರ ಜೊತೆಗೆ ಮಾತುಕತೆ ನಡೆಸಿ ಮಾಹಿತಿ ಪಡೆದ ಬಳಿಕ ಸುಭಾಷ್ ಪಾಟೀಲ್, ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಆದಾಗ ಈಶ್ವರಪ್ಪ ರಾಜೀನಾಮೆ ನೀಡಿದ್ದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಇಲ್ಲವಾದ್ರೇ ಕೂಡಲೇ ಸಿದ್ದರಾಮಯ್ಯ ನವರು ರಾಜೀನಾಮೆ ಪಡೆಯಲಿ ಎಂದಿದ್ದಾರೆ.