ನವದೆಹಲಿ: ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಅಧಿವೇಶನ ಚರ್ಚೆಯ ಸಂದರ್ಭದಲ್ಲಿ ಬಿಜೆಪಿ(BJP) ಸರ್ಕಾರದ ವಿರುದ್ಧ ತೀವ್ರ ಟೀಕೆ ನಡೆಸಿದ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ(Rahul Gandhi) ವಿರುದ್ಧ ಬಿಜೆಪಿ ಕಠಿಣ ನಿಲುವು ತೆಗೆದುಕೊಂಡಿದೆ. ಅವರ ಸಂಸತ್ ಸದಸ್ಯತ್ವವನ್ನು ವಜಾಗೊಳಿಸುವಂತೆ ಬಿಜೆಪಿ ನೋಟಿಸ್ ಸಲ್ಲಿಸಿರುವುದಾಗಿ ವರದಿಯಾಗಿದೆ.

ಬಿಜೆಪಿ ಸಂಸದರು ರಾಹುಲ್ ಗಾಂಧಿ ವಿರುದ್ಧ ಸಂಪೂರ್ಣ ಹಕ್ಕುಚ್ಯುತಿ ನಿರ್ಣಯ (Privilege Motion) ಮಂಡಿಸಲು ಸಿದ್ಧತೆ ನಡೆಸಿದ್ದಾರೆ. ಸರ್ಕಾರದ ವಿರುದ್ಧ ಆಧಾರರಹಿತ ಮತ್ತು ದಾರಿ ತಪ್ಪಿಸುವ ಆರೋಪಗಳನ್ನು ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಬಜೆಟ್ ಭಾಷಣದಲ್ಲಿ ಏನು ಹೇಳಿದರು?
ಬುಧವಾರ ಲೋಕಸಭೆಯಲ್ಲಿ ನಡೆದ ಬಜೆಟ್ ಅಧಿವೇಶದಲ್ಲಿ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ತೀವ್ರವಾಗಿ ಟೀಕಿಸಿದ್ದರು. ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ದೇಶದ ಹಿತಾಸಕ್ತಿಗೆ ವಿರುದ್ಧವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತತೃತ್ವದ ಕೇಂದ್ರ ಸರ್ಕಾರ ಭಾರತ ಮಾತೆಯನ್ನು ಮಾರಾಟ ಮಾಡಿದೆ. ಇದಕ್ಕೆ ಮೋದಿ ಸರ್ಕಾರ ನಾಚಿಕೆಪಡಬೇಕು ಎಂದು ಗುಡುಗಿದ್ದರು. ಅಲ್ಲದೇ ಬಜೆಟ್ನಲ್ಲಿ ಯುವಕರು ಮತ್ತು ಸಣ್ಣ ಉದ್ಯಮಿಗಳಿಗೆ ಸಮರ್ಪಕ ಅವಕಾಶ ನೀಡಲಾಗಿಲ್ಲ ಎಂದು ಆರೋಪಿಸಿದ್ದರು.

ರಾಹುಲ್ ಗಾಂಧಿ ಅವರ ಹೇಳಿಕೆಗಳ ವಿರುದ್ಧ ಗರಂ ಆಗಿರುವ ಕೇಂದ್ರ ಬಿಜೆಪಿ ವಿರೋಧ ಪಕ್ಷದ ನಾಯಕರ ಹೇಳಿಕೆಗಳು ದೇಶದ ಗೌರವಕ್ಕೆ ಧಕ್ಕೆ ತರುತ್ತವೆ. ಕೆಲವು ಹೇಳಿಕೆಗಳಲ್ಲಿ ತಪ್ಪು ಮಾಹಿತಿ ಇದೆ ಎಂದು ಆರೋಪಿಸಿ ಸಂಸತ್ತಿನ ಗೌರವ ಕಾಪಾಡುವ ದೃಷ್ಟಿಯಿಂದ ಪ್ರಿವಿಲೇಜ್ ಮೊಷನ್ ತರಲು ಸಿದ್ಧತೆ ನಡೆದಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಪ್ರಿವಿಲೇಜ್ ಮೊಷನ್ ಎಂದರೇನು?
ಪ್ರಿವಿಲೇಜ್ ಮೊಷನ್ ಎಂದರೆ, ಸಂಸದೀಯ ವಿಶೇಷ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳಲು ತರಲಾಗುವ ನಿರ್ಣಯ. ಇದು ಅಂಗೀಕಾರವಾದರೆ, ಸಂಬಂಧಿತ ಸದಸ್ಯರ ವಿರುದ್ಧ ಕ್ರಮ – ಎಚ್ಚರಿಕೆ, ಅಮಾನತು ಅಥವಾ ಗಂಭೀರ ಪರಿಸ್ಥಿತಿಯಲ್ಲಿ ಸದಸ್ಯತ್ವ ವಜಾ – ಕೈಗೊಳ್ಳುವ ಸಾಧ್ಯತೆ ಇರುತ್ತದೆ.






