ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಹತ್ತು ದಿನಗಳ ಪಾದಯಾತ್ರೆ ಶುರುಮಾಡಿದ್ದು, ಇದರಿಂದ ಕರೋನ ಜಾಸ್ತಿಯಾಗುತ್ತದೇ ಹೊರತು ನೀರು ಸಿಗುವುದಿಲ್ಲ ಎಂದು ಬಿಜೆಪಿ ನಾಯಕರು ಟೀಕಿಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಕರೋನಾ ಹರಡುತ್ತಿರೋದು ಬಿಜೆಪಿ ಅವರಿಂದಲೇ ನಮ್ಮಿಂದಲ್ಲ ಎಂದು ಕಿಡಿಕಾರಿದ್ದಾರೆ.
ಕನಕಪುರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮಾತನಾಡಿ, ಕೊರೊನಾ ಹರಡುತ್ತಿರೋದು ಬಿಜೆಪಿ ಅವರಿಂದಲೇ. ನಿನ್ನೆ ಮೊನ್ನೆವರೆಗೂ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ರ್ಯಾಲಿ ನಡೆಸಿದ್ದಾರೆ, ಅಲ್ಲೆಲ್ಲಾ ಕೊರೊನಾ ಇಲ್ವ? ರಾಜ್ಯದ ಮುಖ್ಯಮಂತ್ರಿಗಳು, ಸಚಿವರು ಸಾರ್ವಜನಿಕ ಕಾರ್ಯಕ್ರಮ ಮಾಡಿದ್ದಾರೆ. ಇದರಿಂದ ಕೊರೊನಾ ಬರಲ್ವಂತ? ನಮಗೊಂದು ಕಾನೂನು, ಅವರಿಗೊಂದು ಕಾನೂನು ಇದ್ಯಾ? ನಮ್ಮ ಪಾದಯಾತ್ರೆ ತಡೆಯಲು ಬಿಜೆಪಿ ಹತಾಶ ಪ್ರಯತ್ನ ಮಾಡುತ್ತಿದೆ. ನಾವು ಪಾದಯಾತ್ರೆಯಲ್ಲಿ ಭಾಗವಹಿಸಿದವರಿಗೆ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡುವಂತೆ ಹೇಳಿದ್ದೇವೆ.
ಒಂದು ಲಕ್ಷ ಮಾಸ್ಕ್ ಅನ್ನು ಪಾದಯಾತ್ರೆಗೆ ಬಂದವರಿಗಾಗಿ ಕೊಡುತ್ತಿದ್ದೇವೆ. ಸಾಮಾಜಿಕ ಅಂತರ ಕಾಪಾಡಲು ಗಮನ ನೀಡಿದ್ದೇವೆ. ಕೊರೊನಾ ರೋಗ ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಿದ್ದೇವೆ.
ರೋಗ ಉಲ್ಬಣವಾದರೆ ಲಾಕ್ ಡೌನ್ ಮಾಡಬೇಕಾಗುತ್ತೆ ಎಂದು ಹೃಹ ಸಚಿವ ಆರಗ ಜ್ಞಾನೇಂದ್ರ ಬೇಜವಾಬ್ದಾರಿಯ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಮಾಡಿರುವ ಲಾಕ್ ಡೌನ್ ನಿಂದ ಜನರ ಬದುಕು ಬೀದಿಗೆ ಬಂದಿದೆ, ಇನ್ನೂ ಅವರ ದುಡಿಮೆ ಸರಿ ದಾರಿಗೆ ಬಂದಿಲ್ಲ, ಹೀಗಿರುವಾಗ ಮತ್ತೆ ಲಾಕ್ ಡೌನ್ ಮಾಡುವುದು ದೊಡ್ಡ ತಪ್ಪು. ಒಂದು ವೇಳೆ ಲಾಕ್ ಡೌನ್ ಮಾಡಲೇಬೇಕು ಅಂತಾದರೆ ಕಾರ್ಮಿಕರು, ಕೂಲಿಕಾರರು, ನೇಕಾರರು, ಸವಿತಾ ಸಮಾಜದವರು, ಆಟೋ ಕ್ಯಾಬ್ ಚಾಲಕರು, ಬಡಗಿಗಳು, ಬೀದಿಬದಿ ವ್ಯಾಪಾರಿಗಳು ಹೀಗೆ ಎಲ್ಲಾ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಮೊದಲೇ ಪರಿಹಾರ ಧನ ನೀಡಿ, ಅವರ ಬದುಕಿಗೆ ರಕ್ಷಣೆ ಕೊಟ್ಟು ನಂತರ ಲಾಕ್ ಡೌನ್ ಮಾಡಬೇಕು. ಕಾರಣ ಮೊದಲ ಅಲೆಯಲ್ಲಿ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದ ಪರಿಹಾರದ ಹಣ ಇನ್ನು ಜನರಿಗೆ ಇನ್ನೂ ತಲುಪಿಲ್ಲ.
ನಿನ್ನೆ ಡಿ.ಕೆ ಶಿವಕುಮಾರ್ ಅವರ ಗಂಟಲು ದ್ರವ ಮಾದರಿ ತಗೊಂಡು ಬರಲು ಸರ್ಕಾರ ವೈದ್ಯಾಧಿಕಾರಿಯನ್ನು ಕಳುಹಿಸಿತ್ತು. ಬಹುಶಃ ಮಾದರಿ ಪರೀಕ್ಷೆ ಮಾಡಿ ಕೊರೊನಾ ಇದೆ ಎಂದು ಸುಳ್ಳು ವರದಿ ಕೊಡುವ ಯೋಚನೆ ಮಾಡಿಕೊಂಡಿದ್ದರೋ ಏನೋ. ಎರಡು ದಿನ ಬಿಸಿಲಿನಲ್ಲಿ ನಡೆದರೂ ಡಿ.ಕೆ ಶಿವಕುಮಾರ್ ಕಲ್ಲುಗುಂಡಿನ ಹಾಗೆ ಇದ್ದಾರೆ.
ಈ ಹಿಂದೆ ಬಳ್ಳಾರಿಯಲ್ಲಿ ಪಾದಯಾತ್ರೆ ಮಾಡಿದಾಗ ಕಡೇ ದಿನ ಐದು ಲಕ್ಷ ಜನ ಸೇರಿದ್ದರೂ. ಈಗಲೂ ಜನ ನಮ್ಮ ಪಾದಯಾತ್ರೆಗೆ ಸ್ವಯಂ ಪ್ರೇರಿತರಾಗಿ ಬರಲು ಆರಂಭ ಮಾಡಿದ್ದಾರೆ. ಇದರಿಂದ ಬಿಜೆಪಿಯವರಿಗೆ ಭಯ ಶುರುವಾಗಿದೆ. ಬಳ್ಳಾರಿ ಪಾದಯಾತ್ರೆ ನೆನಪಾದ್ರೆ ಬಸವರಾಜ ಬೊಮ್ಮಾಯಿ ಅವರಿಗೆ ರಾತ್ರಿ ನಿದ್ರೆ ಬರುತ್ತಿಲ್ಲ ಇರಬೇಕು. ನಮ್ಮ ಪಾದಯಾತ್ರೆ ತಡೆಯಲು ಸತಾಯಗತಾಯ ಪ್ರಯತ್ನ ಮಾಡುತ್ತಿದ್ದಾರೆ, ಆದರೆ ನಾವು ಅವರ ಯಾವ ಷಡ್ಯಂತ್ರಗಳಿಗೂ ಮಣಿಯದೆ ಹನ್ನೊಂದು ದಿನಗಳ ಪಾದಯಾತ್ರೆ ಮಾಡಿಯೇ ಮಾಡುತ್ತೇವೆ.
ನಮ್ಮ ಮೇಲೆ ಸರ್ಕಾರ ಕಾನೂನಿನ ಹಾದಿಯಲ್ಲಿ ಕ್ರಮಕೈಗೊಳ್ಳಲು ಹೊರಟರೆ, ನಾವೂ ಕಾನೂನಿನ ರೀತಿಯಲ್ಲೇ ಉತ್ತರ ಕೊಡುತ್ತೇವೆ. ಏನೇನು ಕೇಸ್ ದಾಖಲಿಸುತ್ತಾರೋ ದಾಖಲಿಸಲಿ, ನಾವೂ ಕಾನೂನು ಹೋರಾಟ ಮಾಡುತ್ತೇವೆ.
ಕೊರೊನಾ ಬರೀ ನಮ್ಮ ರಾಜ್ಯದಲ್ಲಿ ಮಾತ್ರ ಅಲ್ಲ ಇಡೀ ದೇಶದಲ್ಲಿ ಹೆಚ್ಚಾಗ್ತಾ ಇದೆ. ನಾವು ಪಾದಯಾತ್ರೆ ಮಾಡುತ್ತಿರೋದು ಕರ್ನಾಟಕದಲ್ಲಿ. ದೆಹಲಿಯಲ್ಲಿ ಕೊರೊನಾ ಕೇಸ್ ಹೆಚ್ಚಳ ಆಗುತ್ತಿದೆ, ಮಹಾರಾಷ್ಟ್ರದಲ್ಲಿ ಏರಿಕೆ ಆಗ್ತಿದೆ. ಹೀಗೆ ಕೊರೊನಾ ಎಲ್ಲಾ ಕಡೆ ಹೆಚ್ಚಾಗ್ತಲೇ ಇದೆ. ಕೊರೊನಾ ಸೋಂಕು ಹೆಚ್ಚಾಗುವುದಕ್ಕೂ ನಮ್ಮ ಪಾದಯಾತ್ರೆಗೂ ಸಂಬಂಧ ಇಲ್ಲ.