ಬೆಂಗಳೂರು: ವಾಲ್ಮೀಕಿ ನಿಗಮ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗಿದೆ. ಸೆಪ್ಟೆಂಬರ್ 1ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿವರೆಗೆ ಬಿಜೆಪಿ ‘ಬಳ್ಳಾರಿ ಚಲೋ’ ಪಾದಯಾತ್ರೆ ನಡೆಸಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಸುಮಾರು 170ರಿಂದ 200 ಕಿ.ಮೀ.ವರೆಗೆ ಪಾದಯಾತ್ರೆ ನಡೆಯಲಿದ್ದು, ಜೆಡಿಎಸ್ ಕೂಡ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಬಿಜೆಪಿ ತಿಳಿಸಿದೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ಕ್ಷೇತ್ರದ ಗುರುಗುಂಟದಿಂದ ಪಾದಯಾತ್ರೆ ಆರಂಭವಾಗಲಿದ್ದು, ಬಳಿಕ ಲಿಂಗಸುಗೂರು, ಮಸ್ಕಿ, ಸಿಂಧನೂರು, ಶಿರಗುಪ್ಪ, ತೆಕ್ಕಲಕೋಟೆ, ಸಿಂದಗೇರಿ ಮಾರ್ಗವಾಗಿ ಬಳ್ಳಾರಿ ತಲುಪಲಿದೆ. ಸುಮಾರು 8ರಿಂದ 9 ವಿಧಾನಸಭಾ ಕ್ಷೇತ್ರಗಳ ಮೂಲಕ ಈ ಪಾದಯಾತ್ರೆ ಸಾಗಲಿದ್ದು, ನಾಲ್ಕು ಎಸ್ಟಿ ಕ್ಷೇತ್ರಗಳು ಒಳಗೊಂಡಿವೆ. ಪಾದಯಾತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಲಿದ್ದು, ಸಮಾರೋಪ ಸಮಾವೇಶದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.

ವಾಲ್ಮೀಕಿ ನಿಗಮ ಹಗರಣ, ಮೀಸಲಾತಿ, ಉತ್ತರ ಕರ್ನಾಟಕದ ನೀರಾವರಿ, ಬರ ಪರಿಸ್ಥಿತಿ ಹಾಗೂ ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ಹಲವು ವಿಚಾರಗಳನ್ನು ಜನರ ಮುಂದಿಟ್ಟು ಹೋರಾಟ ನಡೆಸುವುದಾಗಿ ಬಿಜೆಪಿ ತಿಳಿಸಿದೆ.

ವಾಲ್ಮೀಕಿ ನಿಗಮದ ಅಕ್ರಮದ ವಿಚಾರದಲ್ಲಿ ರಾಜ್ಯ ಸರ್ಕಾರ ಮುಖ್ಯ ಆರೋಪಿಯಾಗಿರುವ ಬಿ. ನಾಗೇಂದ್ರ ಅವರನ್ನು ರಕ್ಷಿಸುತ್ತಿದೆ. ಅಧಿವೇಶನದಲ್ಲಿ ಸರ್ಕಾರ ಈ ಸತ್ಯ ಎದುರಿಸಲಾಗದೆ ಕಲಾಪವನ್ನು ಮೊಟಕುಗೊಳಿಸಿದೆ ಎಂದು ಬಿ.ವೈ ವಿಜಯೇಂದ್ರ ಟೀಕಿಸಿದ್ದಾರೆ. ಇದೇ ವೇಳೆ, ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ಸರ್ಕಾರ ಕಡೆಗಣಿಸಿದೆ ಮತ್ತು ವಾಲ್ಮೀಕಿ ಸಮುದಾಯದ ಮೀಸಲಾತಿ ವಿಚಾರದಲ್ಲೂ ಅನ್ಯಾಯವಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಪಾದಯಾತ್ರೆ ಸಂಬಂಧ ನಡೆದ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಸಿ.ಟಿ. ರವಿ, ಜಿ. ಜನಾರ್ದನ ರೆಡ್ಡಿ, ಬಿ. ಶ್ರೀರಾಮುಲು, ರಾಜುಗೌಡ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.







