ಬೆಂಗಳೂರು: ರಾಜ್ಯದ ಜನರ ಸಂಕಷ್ಟಕ್ಕಿಂತ ಬಿಜೆಪಿ ಶಾಸಕರಿಗೆ ಸದನದಲ್ಲಿ ರಾಜಕೀಯ ಗದ್ದಲವೇ ಪ್ರತಿಷ್ಟೆಯಾಗಿರುವುದು ನಾಚಿಕೆಗೇಡು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರದ ಬವಣೆ ಹೆಚ್ಚಾಗಿದೆ. ಜನ ಜಾನುವಾರಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆ ಅವಾಂತರಗಳನ್ನೇ ಸೃಷ್ಟಿಮಾಡಿದೆ. ಜವಾಬ್ದಾರಿಯುತ ವಿರೋಧ ಪಕ್ಷಗಳು ಸದನದಲ್ಲಿ ಈ ಕುರಿತು ಚರ್ಚೆ ನಡೆಸುವ ಬದಲು, ಸದನವೇ ನಡೆಯದಂತೆ ಗದ್ದಲ ನಡೆಸಿ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ನ್ಯಾಯಯುತ ಪಾಲನ್ನು ಸದನದಲ್ಲಿ ಚರ್ಚೆ ನಡೆಸಬೇಕಾಗುತ್ತದೆ ಎಂಬ ಉದ್ದೇಶದಿಂದ ಬರ ಕುರಿತು ಚರ್ಚೆ ನಡೆಸದೆ ಬಿಜೆಪಿ ಶಾಸಕರು ಪಲಾಯನ ಮಾಡುತ್ತಿರುವುದು ಸ್ಪಷ್ಟವಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ರನ್ನು ರಕ್ಷಿಸಲು ನಡೆಯುತ್ತಿರುವ ನಾಟಕೀಯ ಬೆಳವಣಿಗೆಯನ್ನು ರಾಜ್ಯದ ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ರಾಜ್ಯದ ಜನರ ಸಮಸ್ಯೆಗಳನ್ನು ಚರ್ಚೆ ನಡೆಸಲು ಯೋಗ್ಯತೆ ಇಲ್ಲದ ವಿರೋಧ ಪಕ್ಷವನ್ನು ಜನರು ಕ್ಷಮಿಸುವುದಿಲ್ಲ. ತಕ್ಕ ಪಾಠ ಕಲಿಸುತ್ತಾರೆ ಎಚ್ಚರಿಕೆ ಇರಲಿ ಎಂದು ಬಿ.ಕೆ ಹರಿಪ್ರಸಾದ್ ಬಿಜೆಪಿಗರಿಗೆ ಎಚ್ಚರಿಕೆ ನೀಡಿದ್ದಾರೆ.






