ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದ ಮುಳುಗಡೆ ಆಗಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಬೋಟಿಂಗ್ ರದ್ದುಗೊಳಿಸಲಾಗಿದೆ.
ಕೆಆರ್ಎಸ್ ಡ್ಯಾಂಗೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದು, ನಿನ್ನೆಯಲ್ಲಿ 13ಸಾವಿರಕ್ಕೂ ಅಧಿಕ ಕ್ಯೂಸೆಕ್ಸ್ ನೀರು ಹೊರಗೆ ಬಿಡಲಾಗುತ್ತಿದೆ. ಇದರಿಂದ ಕಾವೇರಿ ಜಲನಯನ ಪ್ರದೇಶಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ.
ರಂಗನತಿಟ್ಟು ಪಕ್ಷಿಧಾಮದ ನಡುಗಡ್ಡೆಗಳು ಮುಳುಗಡೆಯ ಅಂಚಿಗೆ ಬಂದಿರುವ ಕಾರಣ ರಂಗನತಿಟ್ಟು ಪಕ್ಷಿಧಾಮದಲ್ಲಿ ಭಾನುವಾರದಿಂದ ಪ್ರವಾಸಿಗರಿಗೆ ಬೋಟಿಂಗ್ ರದ್ದು ಮಾಡಲಾಗಿದೆ.

ಕಳೆದ 2 ವರ್ಷಗಳ ಹಿಂದೆ ಕೆಆರ್ಎಸ್ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರನ್ನು ಹರಿಬಿಟ್ಟಿದ್ದ ಪರಿಣಾಮ ರಂಗನತಿಟ್ಟು ಪಕ್ಷಿಧಾಮದ ಬಹುತೇಕ ನಡುಗಡ್ಡೆಗಳು ನಾಶವಾಗಿದ್ದವು. ಇದರಿಂದ ಅಲ್ಲಿದ್ದ ಪಕ್ಷಿ ಸಂಕುಲ ಸಾಕಷ್ಟು ಸಮಸ್ಯೆಗಳನ್ನು ಎದುರಿಸಿದ್ದವು. ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದರೆ, ಕೆಆರ್ಎಸ್ ಡ್ಯಾಂನಿಂದ ಅಪಾರ ಪ್ರಮಾಣದಲ್ಲಿ ನದಿಗೆ ನೀರು ಬಿಡುಗಡೆ ಮಾಡಲಾಗುತ್ತದೆ. ಇದರಿಂದ ರಂಗನತಿಟ್ಟು ಮುಳುಗಡೆಯಾಗುವ ಸಾಧ್ಯತೆ ಇದೆ.






